
ಬೆಂಗಳೂರು (ಅ.26): ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ತಿಂಗಳ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎನ್ಡಿಎ ಜತೆ ಜೆಡಿಎಸ್ ಮೈತ್ರಿ ವಿಚಾರದಲ್ಲಿ ಪ್ರಮೋದ್ ಸಾವಂತ್ ಪ್ರಮುಖ ಪಾತ್ರವಹಿಸಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಭೇಟಿಯಾದರು. ಇತ್ತೀಚೆಗೆ ಪಣಜಿಗೆ ತೆರಳಿ ಪ್ರಮೋದ್ ಸಾವಂತ್ ಅವರೊಂದಿಗೆ ಮೈತ್ರಿ ವಿಚಾರವಾಗಿ ಮಾತುಕತೆ ನಡೆಸಿದರು. ಮೈತ್ರಿ ವಿಚಾರ ಸಂಬಂಧ ಪಕ್ಷದಲ್ಲಿ ಉಂಟಾಗಿರುವ ಬೆಳವಣಿಗೆ ಸಂಬಂಧ ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ.
ಪ್ರಮೋದ್ ಸಾವಂತ್ ಅವರ ಭೇಟಿ ಕುರಿತು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆ ಮತ್ತು ಎನ್ಡಿಎ ಮೈತ್ರಿಕೂಟದ ಬಗ್ಗೆ ಆತ್ಮೀಯವಾಗಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ ವರಿಷ್ಠರ ಭೇಟಿಗೆ ಪ್ರಮೋದ್ ಸಾವಂತ್ ಮಧ್ಯಸ್ಥಿಕೆ ವಹಿಸಿರುವುದರಿಂದ ಅವರ ಮೂಲಕವೇ ಮೈತ್ರಿಯ ಸ್ಥಾನ ಹಂಚಿಕೆ ಸಂಬಂಧ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಹುಲಿ ಚರ್ಮದ ಮೇಲೆ ಕುಳಿತ ವಿನಯ್ ಫೋಟೋ ವೈರಲ್: ಆಧಾರ ಸಹಿತವಾಗಿ ಸ್ಪಷ್ಟನೆ ಕೊಟ್ಟ ಗುರೂಜಿ
ಕಳೆದ ತಿಂಗಳು 22ರಂದು ದೆಹಲಿಯಲ್ಲಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ನಡುವೆ ನಡೆದ ಸಭೆಯಲ್ಲಿ ಸಾವಂತ್ ಸಹ ಉಪಸ್ಥಿತರಿದ್ದರು. ಆದರೆ, ರಾಜ್ಯ ಬಿಜೆಪಿ ನಾಯಕರು ಯಾರೂ ಇರಲಿಲ್ಲ. ಈಗಿನ ಭೇಟಿಯಲ್ಲೂ ಸಹ ಬಿಜೆಪಿ ನಾಯಕರು ಇರಲಿಲ್ಲ. ಸೀಟು ಹಂಚಿಕೆ ವಿಚಾರ ಸಂಬಂಧ ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಲು ದಿನಾಂಕ ಪಡಿಸುವ ಸಂಬಂಧ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.