ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ: ಮಾಜಿ ಸಚಿವ ಸುಧಾಕರ್‌

By Kannadaprabha NewsFirst Published May 18, 2023, 1:30 AM IST
Highlights

ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ 2018ರ ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೆ ಮುಖ್ಯ ಕಾರಣ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. 

ಚಿಕ್ಕಬಳ್ಳಾಪುರ (ಮೇ.18): ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ 2018ರ ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೆ ಮುಖ್ಯ ಕಾರಣ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಈ ಸಂಬಂಧ ಡಾ.ಸುಧಾಕರ್‌ ಅವರು ಸರಣಿ ಟ್ವೀಟ್‌ ಮಾಡಿ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದಾರೆ. 2018ರಲ್ಲಿ ಅಂದಿನ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ತಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇನೂ ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ತಿಳಿಸಿದ್ದಾರೆ. 

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದಿದ್ದಾರೆ. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್‌್ಕ ತೆಗೆದುಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ನೇರ ಅಥವಾ ಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಅರುಣ್‌ ಕುಮಾರ್‌ ಪುತ್ತಿಲ ಎಫೆಕ್ಟ್: ಬಿಜೆಪಿ ವೋಟು ಶೇ.4.90 ಕುಸಿತ!

ಸೋಮಣ್ಣ, ಸುಧಾಕರ್‌ಗೆ ಸಿಎಂ ಸಮಾಧಾನ: ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆಯಲ್ಲಿ ಸೋಲು ಅನುಭವಿಸಿದ ತಮ್ಮ ಸಂಪುಟ ಸಹೋದ್ಯೋಗಿಗಳಾಗಿರುವ ಡಾ.ಕೆ. ಸುಧಾಕರ್‌ ಮತ್ತು ವಿ. ಸೋಮಣ್ಣ ಅವರನ್ನು ಖುದ್ದಾಗಿ ಭೇಟಿ ಮಾಡಿ ಸಮಾಧಾನ ಮಾಡಿದ್ದಾರೆ. ಮಂಗಳವಾರ ಉಭಯ ಸಚಿವರ ನಿವಾಸಕ್ಕೆ ತೆರಳಿದ ಬೊಮ್ಮಾಯಿ ಅವರು ಕೆಲಕಾಲ ಮಾತನಾಡಿ ಚುನಾವಣೆಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ, ಸೋಲಿನಿಂದ ವಿಚಲಿತರಾಗದೆ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ಬಲಪಡಿಸುವತ್ತ ಗಮನಹರಿಸೋಣ ಎಂಬ ಮಾತನ್ನೂ ಹೇಳಿದರು.

ಕಾಂಗ್ರೆಸ್‌ನ ಸತ್ಯಕ್ಕೆ ದೊರೆತ ಜಯ: ಯು.ಟಿ.ಖಾದರ್‌

ಸೋಮಣ್ಣ ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ‘ಸೋಮಣ್ಣನವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ’ ಎಂದರು. ‘ಸೋಮಣ್ಣ ನಮ್ಮ ಹಿರಿಯ ನಾಯಕರು. ಸುಮಾರು 40 ವರ್ಷ ಜನಸೇವೆ ಮಾಡಿದವರು. ವಸತಿ ಸಚಿವರಾಗಿ ಅವರು ಬೆಂಗಳೂರಿನ ಅಭಿವೃದ್ಧಿಗೆ ಅನೇಕ ಕೊಡುಗೆ ಕೊಟ್ಟಿದ್ದಾರೆ. ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರ ಮಾಡಿದ್ದಾರೆ. ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ. ಅದನ್ನು ಮೀರಿ ಮತ್ತೆ ಬರಬೇಕು. ಸೋಮಣ್ಣ ಮತ್ತು ಪಕ್ಷ ಎರಡು ಕೂಡ ಆ ಕೆಲಸ ಮಾಡಲಿದೆ’ ಎಂದು ನುಡಿದರು.

click me!