
ಬೆಂಗಳೂರು (ನ.21): ‘ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿವೆ. ಯಾರು ಏನೇ ಮಾಡಿದರೂ ರಾಜ್ಯದಲ್ಲಿನ 51 ಮೀಸಲು ಕ್ಷೇತ್ರ ಹೊರತುಪಡಿಸಿ ಎಲ್ಲೇ ಸ್ಪರ್ಧಿಸಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ’ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ 51 ಮೀಸಲು ಕ್ಷೇತ್ರ ಇವೆ. ಅವುಗಳನ್ನು ಬಿಟ್ಟು ಸಿದ್ದರಾಮಯ್ಯ ಎಲ್ಲೇ ನಿಂತರೂ ಗೆಲ್ಲುತ್ತಾರೆ.
ಯಾಕೆಂದರೆ ರಾಜ್ಯದ ಜನ ಸಿದ್ದರಾಮಯ್ಯ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ’ ಎಂದರು. ಬಿಜೆಪಿ, ಜೆಡಿಎಸ್ಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು. ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂದರೆ ಸಿದ್ದರಾಮಯ್ಯರನ್ನೇ ಟಾರ್ಗೆಟ್ ಮಾಡಬೇಕು. ಯಾಕೆಂದರೆ ಸಿದ್ದರಾಮಯ್ಯ ಮಾಸ್ ಲೀಡರ್. ಹೀಗಾಗಿ ಅವರ ಮೇಲೆ ವಾಗ್ದಾಳಿ ನಡೆಸಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬಹುದು ಎಂದುಕೊಂಡಿದ್ದಾರೆ. ಆದರೆ, 2023ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಜನ ಈಗಾಗಲೇ ತೀರ್ಮಾನಿಸಿದ್ದಾರೆ ಎಂದು ಹೇಳಿದರು.
ಚುನಾವಣೆ ಬಂತು ಎಂದಾಕ್ಷಣ ಎಲ್ಲವೂ ಧರ್ಮದ ವ್ಯಾಪ್ತಿಗೆ ಬಂದು ಬಿಡುತ್ತದೆ: ಎಚ್.ಸಿ.ಮಹದೇವಪ್ಪ
ಕಾಂಗ್ರೆಸ್ ಬಲಪಡಿಸುವ ಜವಾಬ್ದಾರಿ ತೆಗೆದುಕೊಳ್ಳೋಣ: ಕಳೆದ ಚುನಾವಣೆಯಲ್ಲಿ ಆಗಿರುವ ಕೆಲವೊಂದು ಗೊಂದಲಗಳನ್ನು ನಾವೆಲ್ಲರೂ ಬಗೆಹರಿಸಿಕೊಂಡು ಈ ಬಾರಿ ಕಾಂಗ್ರೆಸ್ನ್ನು ಬಲಪಡಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ತಾಲೂಕಿನ ವಾಟಾಳು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರ ಇದ್ದಾಗ ನಾನು ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ ಎಂಬುದಕ್ಕೆ ನಿಮ್ಮ ಪ್ರೀತಿಯ ಮಾತುಗಳು ಸಾಕ್ಷಿಯಾಗಿದ್ದು, ಇದು ನನ್ನಲ್ಲಿ ಸಾರ್ವಜನಿಕ ಜೀವನದ ಕುರಿತ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ.
ಕಾಂಗ್ರೆಸ್ ಕೆಲಸ ಮಾಡುವ ಪಕ್ಷವಾಗಿದ್ದು, ಈ ಬಾರಿಯೂ ಜೆಡಿಎಸ್ ಮತ್ತು ಬಿಜೆಪಿ ಜೊತೆಗೂಡಿ ಕಾಂಗ್ರೆಸ್ ವಿರುದ್ದ ಕೆಲಸ ಮಾಡಲಿದ್ದು, ಅವರ ಕುತಂತ್ರವನ್ನು ಅರಿತು ಕಾಂಗ್ರೆಸ್ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ತಿಳಿಸಿದರು. ಯುವ ಮುಖಂಡ ಸುನಿಲ ಬೋಸ್ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ನಮ್ಮ ವಿರೋಧಿಗಳು ಪಕ್ಷದ ವಿರುದ್ಧ ಮತ್ತು ವ್ಯಕ್ತಿಗಳ ವಿರುದ್ಧ ನಡೆಸುವ ಅಪಪ್ರಚಾರಗಳಿಗೆ ಕಿವಿಗೊಡದೆ ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಹೇಳಿದರು.
ಜನಸಂಕಲ್ಪ ಯಾತ್ರೆ ಆರಂಭಿಸಿ ಜನರ ಬಳಿ ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ: ಎಚ್.ಸಿ.ಮಹದೇವಪ್ಪ
ಡಾ.ಎಚ್.ಸಿ. ಮಹದೇವಪ್ಪನವರ ಅಧಿಕಾರದ ಅವಧಿಯಲ್ಲಿ ಕ್ಷೇತ್ರದ ಎಲ್ಲ ಪಂಚಾಯಿತಿಗಳು ಮೂಲ ಸೌಕರ್ಯದಿಂದ ಹಿಡಿದು ಎಲ್ಲ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದು, ಅವರು ಅಧಿಕಾರದಲ್ಲಿ ಇಲ್ಲದ ಈ ವೇಳೆ ಅವರ ಮಹತ್ವ ನಮಗೆ ಅರ್ಥವಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿಪ್ರಾಯಪಟ್ಟರು. ಇದೇ ವೇಳೆ ವಾಟಾಳು ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.