
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ 369 ವಾರ್ಡ್ಗಳು ಮತ್ತು ಮತಗಟ್ಟೆವಾರು ಪಕ್ಷ ಸಂಘಟಿಸುವಂತೆ ಪಕ್ಷದ ಪ್ರಮುಖ ಮುಖಂಡರಿಗೆ ಕೇಂದ್ರ ಕೈಗಾರಿಕಾ ಸಚಿವರೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಸೋಮವಾರ ಜೆಡಿಎಸ್ ರಾಜ್ಯ ಕಚೇರಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪ್ರಮುಖ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು. ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಸೇರಿದಂತೆ ಐದು ನಗರ ಪಾಲಿಕೆಗಳ ನೂತನ ಅಧ್ಯಕ್ಷರು, ಎಲ್ಲಾ ವಿಧಾನಸಭೆ ಕ್ಷೇತ್ರಗಳ ನೂತನ ಅಧ್ಯಕ್ಷರ ಜತೆ ಸುದೀರ್ಘ ಮಾತುಕತೆ ನಡೆಸಿದರು.
ನಗರದ ಎಲ್ಲಾ ಭಾಗಗಳಲ್ಲಿ ಪಕ್ಷದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಎಲ್ಲಾ ಮುಖಂಡರು ಸಕ್ರಿಯವಾಗಿ ಕೆಲಸ ಮಾಡಬೇಕು. ಕೇಂದ್ರ ಕಚೇರಿ ನೀಡುವ ಸೂಚನೆಗಳ ಪ್ರಕಾರ ಎಲ್ಲಾ ವಿಭಾಗಗಳ ಅಧ್ಯಕ್ಷರು, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು ಕ್ರಿಯಾಶೀಲವಾಗಿ ಕೆಲಸ ಮಾಡುವಂತೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಎನ್ಡಿಎ ಅಧಿಕಾರಕ್ಕೆ ಬರಬೇಕು. ಈ ಸರ್ಕಾರದ ಬಗ್ಗೆ ಜನರು ರೋಸಿ ಹೋಗಿದ್ದಾರೆ. ತೆರಿಗೆ, ದರ ಏರಿಕೆಯಿಂದ ಬಸವಳಿದಿದ್ದಾರೆ. ಹೀಗಾಗಿ ಜೆಡಿಎಸ್ ಮತ್ತು ಬಿಜೆಪಿ ಜನತೆಯ ಸಹಜ ಆಯ್ಕೆಯಾಗಿದೆ. ಹೀಗಾಗಿ ಎಲ್ಲರೂ ಒಮ್ಮತವಾಗಿ ಪಕ್ಷ ಸಂಘಟಿಸಬೇಕು ಎಂದು ಹೇಳಿದರು.
ಇದೇ ವೇಳೆ ನೂತನ ಪದಾಧಿಕಾರಿಗಳಿಂದ ಪಕ್ಷದ ಸಂಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡ ಕುಮಾರಸ್ವಾಮಿ, ಯಾರೂ ಮೈತ್ರಿ ಬಗ್ಗೆ ಮಾತನಾಡಬೇಡಿ. ಆ ಬಗ್ಗೆ ಪಕ್ಷದ ವರಿಷ್ಠರು ಚರ್ಚಿಸುತ್ತಾರೆ. ನಿಮ್ಮದೇನಿದ್ದರೂ ಸಂಘಟನೆ ಕೆಲಸ. ಅಷ್ಟನ್ನು ಮಾಡಿ. ಕಾರ್ಯಕರ್ತರು ಮತ್ತು ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಜ್ಜೆ ಇರಿಸುವಂತೆ ಸೂಚಿಸಿದರು.ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ, ಮಾಜಿ ಎಂಎಲ್ಸಿ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಮುಖಂಡರಾದ ಇ. ಕೃಷ್ಣಪ್ಪ, ಪ್ರಕಾಶ್, ಗೊಟ್ಟಿಗೆರೆ ಮಂಜುನಾಥ್, ಕೃಷ್ಣ, ತಿಮ್ಮೇಗೌಡ ಸೇರಿದಂತೆ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು. ಜಿಬಿಎ ವ್ಯಾಪ್ತಿಯ 28 ವಿಧಾನಸಭೆ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರಾಗಿ ನೇಮಕಗೊಂಡ ಮುಖಂಡರಿಗೆ ಇದೇ ವೇಳೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.