
ಬೆಂಗಳೂರು (ಏ.04): ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳು ಹರಿದಾಡುವುದು ಹೆಚ್ಚಾಗಿದೆ. ಇಂದು ಮಧ್ಯಾಹ್ನ ರಾಜ್ಯದ 100 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ (BJP Fake list) ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಿಜೆಪಿ ಕೇಂದ್ರದ ಹೈಕಮಾಂಡ್ ಆದೇಶ ಪಟ್ಟಿಯನ್ನು ಹೋಲುವಂತೆ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಜೆಪಿಯ 100 ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ, ಈ ಪಟ್ಟಿಯನ್ನು ಹಿಡಿದುಕೊಂಡು ಹಲವು ಟಿಕೆಟ್ ಆಕಾಂಕ್ಷಿಗಳು ಪಕ್ಷದ ನಾಯಕರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿಯಾಗಿದೆ. ನಮ್ಮ ಪಕ್ಷದಿಂದ ಇನ್ನೂ ಪಟ್ಟಿ ಬಿಡುಗಡೆ ಆಗಿಲ್ಲ ಎಂದು ಹೈಕಮಾಂಡ್ ನಾಯಕರು ಹೇಳಿದ್ದಾರೆ. ಇನ್ನು ಕೆಲವು ಟಿಕೆಟ್ ಆಕಾಂಕ್ಷಿಗಳು ತಮ್ಮಹೆಸರು ಕೈಬಿಟ್ಟಿದ್ದಕ್ಕೆ ದೆಹಲಿಗೆ ಹೋಗಲು ಕೂಡ ಸಿದ್ಧತೆ ಮಾಡಿಕೊಂಡಿದ್ದರು.
ಏ.8ಕ್ಕೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಸಿಎಂ ಬೊಮ್ಮಾಯಿ ಮಾಹಿತಿ
ಸ್ಪಷ್ಟೀಕರಣ ಕೊಟ್ಟ ಬಿಜೆಪಿ: ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟೀಕರಣ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್ ಅವರು" ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ. ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಮತ್ತೊಂದು ಸುಳ್ಳು. ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಯ್ಕೆಯ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈ ಪಟ್ಟಿಯು ‘FAKE’ ಆಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.
ಬಿಜೆಪಿ ಟಿಕೆಟ್ಗಾಗಿ ಭಾರಿ ಪೈಪೋಟಿ: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ದೇಶದ ದಕ್ಷಿಣ ಭಾಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೆಲುವು ದಾಖಲಿಸಿ ಅಧಿಕಾರ ಹಿಡಿಯುವುದು ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಮದ್ರ ಮೋದಿ ಹಾದಿಯಾಗಿ ಕೇಂದ್ರದ ಹಲವು ಪ್ರಮುಖ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ರಾಜ್ಯದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಉದ್ದವಾಗಿದ್ದು, ವಿವಿಧೆಡೆ ಭಾರಿ ಪೈಪೋಟಿ ಶುರುವಾಗಿದೆ. ಏ.8ಕ್ಕೆ ಬಿಜೆಪಿ ಪಟ್ಟಿ ಬಿಡುಗಡೆ ಆಗಲಿದೆ ಎಂದು ಸ್ವತಃ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದರೂ ಇಂದು ಫೇಕ್ ಲಿಸ್ಟ್ ಬಿಡುಗಡೆ ಮಾಡಲಾಗಿದೆ.
Bengaluru: ನಕಲಿ ಗುರುತಿನ ಚೀಟಿ ಮುದ್ರಣ ಆರೋಪ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ
ಏ.8ರಂದು ಬಿಜೆಪಿ ಪಟ್ಟಿ ಬಿಡುಗಡೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಏ.8 ಅಥವಾ ಏ.9ರಂದು ಬಿಡುಗಡೆ ಮಾಡಲಾಗುತ್ತದೆ. ಕೇಂದ್ರ ಸಂಸದೀಯ ಮಂಡಳಿಗೆ ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಇದಾದ ನಂತರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಇನ್ನು ಮೊದಲ ಪಟ್ಟಿಯಲ್ಲಿ ಯಾವುದೇ ಗೊಂದಲಗಳು ಇರದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ನಂತರ, 2ನೇ ಪಟ್ಟಿಯಲ್ಲಿ ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.