
ಬೆಂಗಳೂರು(ಮಾ.26): ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿಯಲ್ಲಿ ನಾಲ್ಕು ಅಪ್ಪ-ಮಕ್ಕಳ ಜೋಡಿಗಳಿಗೆ ಟಿಕೆಟ್ ಘೋಷಿಸಲಾಗಿದ್ದು, ತನ್ಮೂಲಕ 124 ಕ್ಷೇತ್ರಗಳ ಪೈಕಿ ಒಟ್ಟು ಎಂಟು ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ. ಬಿಟಿಎಂ ಬಡಾವಣೆ ಕ್ಷೇತ್ರದಿಂದ ರಾಮಲಿಂಗಾರೆಡ್ಡಿ ಹಾಗೂ ಜಯನಗರ ಕ್ಷೇತ್ರದಿಂದ ಪುತ್ರಿ ಸೌಮ್ಯಾರೆಡ್ಡಿ ಅವರಿಗೆ ಮತ್ತೊಮ್ಮೆ ಟಿಕೆಟ್ ಘೋಷಿಸಲಾಗಿದೆ.
ವಿಜಯನಗರ ಕ್ಷೇತ್ರದಿಂದ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ಕ್ಷೇತ್ರದಿಂದ ಪುತ್ರ ಪ್ರಿಯಕೃಷ್ಣ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಿಂದ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಕಣಕ್ಕಿಳಿಯಲಿದ್ದಾರೆ.
ರಾಹುಲ್, ಗಾಂಧಿ ಕುಟುಂಬವನ್ನು ಕಾನೂನು ವಿಶೇಷವಾಗಿ ಪರಿಗಣಿಸಬೇಕು, ಕಾಂಗ್ರೆಸ್ ನಾಯಕ ವಿವಾದ!
ಈ ಮೂರೂ ಅಪ್ಪ ಮಕ್ಕಳ ಜೋಡಿಗಳು ಕಳೆದ ಬಾರಿಯ (2018) ಚುನಾವಣೆಯಲ್ಲೂ ಒಟ್ಟಿಗೆ ಕಣಕ್ಕಿಳಿದಿದ್ದರು. ಆದರೆ, ಈ ಪೈಕಿ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಮಾತ್ರ ಇಬ್ಬರೂ ವಿಧಾನಸಭೆಗೆ ಪ್ರವೇಶಿಸಿದರು. ಉಳಿದಂತೆ ಎಂ. ಕೃಷ್ಣಪ್ಪ ಹಾಗೂ ಶಾಮನೂರು ಶಿವಶಂಕರಪ್ಪ ಅವರು ವಿಧಾನಸಭೆಗೆ ಪ್ರವೇಶಿಸಿದರೂ ಅವರ ಪುತ್ರರು ಸೋಲುಂಡಿದ್ದರು.
ಇದೀಗ ಅಪ್ಪ-ಮಕ್ಕಳ ಜೋಡಿಗೆ ಹೊಸ ಸೇರ್ಪಡೆಯಾಗಿ ಕೆ.ಎಚ್. ಮುನಿಯಪ್ಪ ಹಾಗೂ ರೂಪಕಲಾ ಶಶಿಧರ್ ಅವರಿಗೆ ಟಿಕೆಟ್ ನೀಡಲಾಗಿದೆ. ಈವರೆಗೆ ಲೋಕಸಭೆಗೆ ಸ್ಪರ್ಧಿಸುತ್ತಿದ್ದ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕೆಜಿಎಫ್ನಿಂದ ಪುತ್ರ ರೂಪಕಲಾ ಶಶಿಧರ್ ಕಣಕ್ಕಿಳಿಯುತ್ತಿದ್ದಾರೆ.
ಇನ್ನು ಕಳೆದ ಬಾರಿ ಸಿದ್ದರಾಮಯ್ಯ ಹಾಗೂ ಯತೀಂದ್ರ ಸಿದ್ದರಾಮಯ್ಯ ಅಪ್ಪ-ಮಕ್ಕಳು ಇಬ್ಬರೂ ವಿಧಾನಸಭೆಗೆ ಪ್ರವೇಶಿಸಿದ್ದರು. ಈ ಬಾರಿ ಯತೀಂದ್ರ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ವಾಪಸ್ಸಾಗಿರುವ ಹಿನ್ನೆಲೆಯಲ್ಲಿ ಯತೀಂದ್ರ ಕಣಕ್ಕಿಳಿಯುವುದು ಅನುಮಾನ.
ರಾಹುಲ್ ಗಾಂಧಿ ಹೇಳಿರುವುದರಲ್ಲಿ ತಪ್ಪೇ ಇಲ್ಲ: ಬಿ.ಟಿ.ಲಲಿತಾನಾಯಕ್
ಪ್ರಭಾವಿಗಳ ಪುತ್ರರಿಗೆ ಮಣೆ:
ಇನ್ನು ಅಭ್ಯರ್ಥಿಗಳ ಪಟ್ಟಿಯಲ್ಲಿ ಇತ್ತೀಚೆಗೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಪುತ್ರ ದರ್ಶನ್ ಧ್ರುವನಾರಾಯಣ, ಬಿ.ಕೆ. ಶಿವರಾಂ ಪುತ್ರ ರಕ್ಷಿತ್ ಶಿವರಾಂ, ಮಾಜಿ ವಿಧಾನಪರಿಷತ್ ಸದಸ್ಯ ಎ.ಕೆ. ಸುಬ್ಬಯ್ಯ ಪುತ್ರ ಎ.ಎಸ್. ಪೊನ್ನಣ್ಣ, ಪಾವಗಡ ಶಾಸಕ ವೆಂಕಟರವಣಯ್ಯ ಪುತ್ರ ವೆಂಕಟೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಅವರಿಗೆ ಮೊದಲ ಬಾರಿಗೆ ಕಾಂಗ್ರೆಸ್ಸಿನಲ್ಲಿ ಟಿಕೆಟ್ ನೀಡಲಾಗಿದೆ.
ಇಬ್ಬರು ಪರಿಷತ್ ಸದಸ್ಯರಿಗೆ ಟಿಕೆಟ್
ಹಾಲಿ ಪರಿಷತ್ ಸದಸ್ಯರ ಪೈಕಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಇಬ್ಬರಿಗೆ ಟಿಕೆಟ್ ಘೋಷಿಸಲಾಗಿದೆ. ಕಾಂಗ್ರೆಸ್ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಅವರಿಗೆ ಬಸವನಗುಡಿ ಕ್ಷೇತ್ರ, ಬಿಜೆಪಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.