
ಹರಪನಹಳ್ಳಿ (ಜು.31): ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದ್ದು, ಇತ್ತ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯಾಗಿ ಪೈಪೋಟಿಗೆ ಇಳಿದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ ಬೇಕಾದ ಅಗತ್ಯ ರಸಗೊಬ್ಬರ ಪೂರೈಕೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಅದನ್ನು ಸಮರ್ಪಕವಾಗಿ ರೈತರಿಗೆ ವಿತರಿಸದೆ ಕಾಳಸಂತೆಯಲ್ಲಿ ಹೆಚ್ಚಿನ ಕಮಿಷನ್ಗಾಗಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಸ್ವತಃ ಕಾಂಗ್ರೆಸ್ ಶಾಸಕರೆ ಅನುದಾನದ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸಿಎಂ ಹುದ್ದೆ ಮೇಲೆ ಕಣ್ಣು ಇಟ್ಟಿದ್ದಾರೆ. ಇದೆಲ್ಲ ಬೆಳವಣಿಗೆ ಗಮನಿಸಿದರೆ ರಾಜ್ಯ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೋಚರಿಸುತ್ತದೆ ಎಂದರು.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಬಿ.ನಾಗೇಂದ್ರ ತಪ್ಪು ಮಾಡಿರುವ ಬಗ್ಗೆ ಸಾಕ್ಷಿ ಸಮೇತ ದಾಖಲೆಗಳು ಸಿಕ್ಕಿವೆ. ಆ ಕಾರಣಕ್ಕಾಗಿ ಅವರು ಮಂತ್ರಿಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದಾರೆ. ನಮ್ಮ ಸರ್ಕಾರದಲ್ಲಿ ನಾನೇನಾದರೂ ಹಗರಣ ಮಾಡಿದ್ದರೆ ಈಗ ಅವರದ್ದೇ ಸರ್ಕಾರ ಇದೆ, ಬೇಕಾದರೆ ತನಿಖೆ ನಡೆಸಲಿ ತಪ್ಪಿದ್ದಲ್ಲಿ ನಾನು ಶಿಕ್ಷೆ ಅನುಭವಿಸಲು ಸಿದ್ಧ ಎಂದು ನಾಗೇಂದ್ರ ಹೇಳಿಕೆಗೆ ತಿರುಗೇಟು ನೀಡಿದರು.
ರಾಜ್ಯ ಬಿಜೆಪಿಯಲ್ಲಿರುವ ಭಿನ್ನಮತವನ್ನು ಸರಿಪಡಿಸಲು ರಾಷ್ಟ್ರೀಯ ನಾಯಕರು ನನಗೆ ಜವಬ್ದಾರಿ ಕೊಟ್ಟರೆ ಎಲ್ಲರನ್ನೂ ಒಟ್ಟುಗೂಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭ ಬಿಜೆಪಿ ಮುಖಂಡರಾದ ಆರುಂಡಿ ನಾಗರಾಜ್, ಡಾ. ರಮೇಶ ಕುಮಾರ, ವಕೀಲ ಪ್ರಾಣೇಶ್, ಗೀರಜ್ಜಿ ನಾಗರಾಜ್, ಶ್ರೀನಿವಾಸ ನಾಯಕ, ಈಡಿಗರ ಅಂಜಿನಪ್ಪ, ಗಿರೀಶ್ ಸೇರಿದಂತೆ ಮತ್ತಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.