
ಮಂಗಳೂರು (ಅ.29): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಸೆಂಬ್ಲಿ ಚುನಾವಣೆಗೆ ಬಾದಾಮಿಯಿಂದ ಯಾಕೆ ಸ್ಪರ್ಧಿಸುತ್ತಿಲ್ಲ? ಅವರ ಬಗ್ಗೆ ಇದ್ದ ವಿಶ್ವಾಸ, ನಂಬಿಕೆಯನ್ನು ಅಲ್ಲಿನ ಜನ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವ್ಯಾಖ್ಯಾನಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಶುಕ್ರವಾರ ಮಂಗಳೂರಿಗೆ ಆಗಮಿಸಿದ ಯಡಿಯೂರಪ್ಪ ಅವರು ಸುದ್ದಿಗಾರರಲ್ಲಿ ಮಾತನಾಡಿದರು.
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕುತಿದ್ದಾರೆ, ಯಾವುದೂ ಸಿಕ್ಕಿಲ್ಲ. ಹಾಗಾಗಿ ಈಗ ಕೋಲಾರ ಎಂದು ಹೇಳುತ್ತಿದ್ದಾರೆ. ಕೋಲಾರದಿಂದ ಸ್ಪರ್ಧಿಸಿದರೆ ಅಲ್ಲಿದ್ದವರು ಇನ್ನೊಂದು ಕ್ಷೇತ್ರ ಹುಡುಕಬೇಕಾಗುತ್ತದೆ. ಮೈಸೂರು, ಬಾದಾಮಿ ಬಿಟ್ಟು ಈಗ ಮತ್ತೊಂದು ಕ್ಷೇತ್ರ ಹುಡುಕುತ್ತಿದ್ದಾರೆ. ಹಾಗಾದರೆ ಬಾದಾಮಿಯಿಂದ ಯಾಕೆ ನಿಲ್ಲುವುದಿಲ್ಲ? ಸಿದ್ದರಾಮಯ್ಯ ಅವರ ಜನಪ್ರಿಯತೆ ಎಷ್ಟಿದೆ ಎಂಬುದು ಇದರಿಂದ ಗೊತ್ತಾಗುತ್ತದೆ. ನೀವು ಪ್ರಾಮಾಣಿಕರಾಗಿದ್ದರೆ ಎಲ್ಲಿಂದ ಗೆದ್ದಿದ್ದೀರಿ ಅಲ್ಲಿಂದಲೇ ಚುನಾವಣೆ ಎದುರಿಸಿ, ಇಲ್ಲದಿದ್ದರೆ ನೀವು ಹೆದರಿ ಪಲಾಯನ ಮಾಡುತ್ತಿದ್ದೀರಿ ಎಂಬುದು ಸಾಬೀತಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.
ಕೆಂಪೇಗೌಡರ ಕೊಡುಗೆ ಮರೆಯಲ್ಲ: ಯಡಿಯೂರಪ್ಪ
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು. ಈಗ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರ ಬಗ್ಗೆ ಯಾವುದೇ ಟೀಕೆ ಟಿಪ್ಪಣೆ ಮಾಡುವುದಕ್ಕೆ ನಾನು ಇಷ್ಟಪಡುವುದಿಲ್ಲ ಎಂದರು. ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಎಸ್ವೈ, ಈಗ ಮೀಸಲಾತಿ ಹೆಚ್ಚಳಕ್ಕೆ ಎಲ್ಲರೂ ಕೇಳುತ್ತಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿಎಸ್ವೈ ಸ್ಪಷ್ಟಪಡಿಸಿದರು.
ಸಿಎಂ ಬೊಮ್ಮಾಯಿ, ಬಿಎಸ್ವೈರಿಂದ ಸಚಿವ ಅಶ್ವತ್ಥ್ ಗುಣಗಾನ
ಬಿಜೆಪಿ ಅಧಿಕಾರಕ್ಕೆ ಕಾಂಗ್ರೆಸ್ ಅಡ್ಡಗಾಲು ಅಸಾಧ್ಯ: ಕಾಂಗ್ರೆಸ್ನ ಯಾತ್ರೆಗಳ ಬಗ್ಗೆ ನಾನು ಏನೂ ಹೇಳುವುದಿಲ್ಲ, ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಕಲಬುರಗಿಯಲ್ಲಿ ನಾಡಿನಿಂದ ನಮ್ಮ ಕಾರ್ಯಕ್ರಮ ಆರಂಭವಾಗುತ್ತದೆ. ಕಾಂಗ್ರೆಸ್ನವರ ಯಾವುದೇ ಯಾತ್ರೆಗಳು, ಬಸ್ ಸಂಚಾರ ಬಿಜೆಪಿಗೆ ಚುನಾವಣೆ ಮೇಲೆ ಪರಿಣಾಮ ಬೀರದು. ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಂತೆ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಜನತೆ ಈಗಾಗಲೇ ತೀರ್ಮಾನಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ನ ಯಾವುದೇ ಕಾರ್ಯಕ್ರಮಗಳು ನಮ್ಮನ್ನು ಅಧಿಕಾರಕ್ಕೆ ಬಾರದಂತೆ ತಡೆಯಲು ಶಕ್ತವಾಗದು. ನಾನು ನಾಡಿದ್ದು ರಾಜ್ಯ ಪ್ರವಾಸ ಆರಂಭಿಸಲಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.