
ಬೆಂಗಳೂರು(ಅ.16): ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ಪಾಪದ ಹಣ ತೆಗೆದುಕೊಂಡು ನಿಷ್ಠಾವಂತ ಕಾರ್ಯಕರ್ತರಿಗೆ ವಿಷ ಹಾಕುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ ಪ್ರಚಾರದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಕೃಷ್ಣಮೂರ್ತಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಅಭ್ಯರ್ಥಿಯನ್ನು ಹರಕೆ ಕುರಿ ಮಾಡಲು ಹೊರಟ್ಟಿದ್ದೇನೆ ಎಂಬ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದುದು. ಪಾಪದ ಹಣ ತೆಗೆದುಕೊಂಡು ಕಾರ್ಯಕರ್ತರಿಗೆ ವಿಷ ಹಾಕುವುದಿಲ್ಲ. ಕೃಷ್ಣಮೂರ್ತಿ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂಬ ಸಂಕಲ್ಪ ಮಾಡಿದ್ದೇನೆ. ರಾಜಿ ಮಾಡಿಕೊಂಡಿದ್ದೇನೆ ಎಂಬ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದರು.
ಕಾಂಗ್ರೆಸ್ನ ಸಂಸದರಿಗೆ ಈಗ ಕ್ಷೇತ್ರದ ಮೇಲೆ ಪ್ರೀತಿ ಬಂದಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡದೆ .250 ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಬಂದಿದೆ. ಲೂಟಿ ಮಾಡಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ. ದಬ್ಬಾಳಿಕೆ ಮೂಲಕ ಮತ ಪಡೆಯಲು ಪ್ರಯತ್ನಿಸುತ್ತಾರೆ. ರಾಜಕಾರಣದಲ್ಲಿ ಹಣ ಮಾಡಿ ದುರಂಹಕಾರದಿಂದ ವರ್ತಿಸುತ್ತಾರೆ. ಅವರ ಮಾತುಗಳಿಗೆ ಮರುಳಾಗಬಾರದು ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್ಡಿಕೆ ಗುನ್ನಾ!
‘ನಗರಕ್ಕೆ ದೇವೇಗೌಡರ ಕೊಡುಗೆ ದೊಡ್ಡ ಮಟ್ಟದಲ್ಲಿದೆ’
ಬೆಂಗಳೂರು ನಗರಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ದೊಡ್ಡಮಟ್ಟದಲ್ಲಿ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ವರ್ತುಲ ರಸ್ತೆಗೆ ರಕ್ಷಣಾ ಇಲಾಖೆಯ ಭೂಮಿಯನ್ನು ಬಿಡಿಸಿಕೊಟ್ಟಿದ್ದರು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ನಿವಾಸಿಗಳಿಗೆ 9 ಟಿಎಂಸಿ ಕಾವೇರಿ ನೀರು ಸಿಗುವಂತೆ ಮಾಡಿದ್ದರು. ನಗರ ಪ್ರದೇಶದ ಬಡವರಿಗೂ ಎರಡು ರು.ಗೆ ಅಕ್ಕಿ ಸಿಗುವಂತೆ ಮಾಡಿದ ಕೊಡುಗೆಯು ದೇವೇಗೌಡ ಅವರಿಗೆ ಸಲ್ಲಬೇಕು. ಅಲ್ಲದೇ, ಏಳು ನಗರಸಭೆ, ಕೆಂಗೇರಿ ಪುರಸಭೆ ಮಾಡಿದ ಕೀರ್ತಿಯು ದೇವೇಗೌಡ ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್ನ ಅಭ್ಯರ್ಥಿಯ ತಂದೆಯವರು ಸಹ ಮೊದಲ ಬಾರಿಗೆ ಅಧ್ಯಕ್ಷರಾಗಿದ್ದು ಸಹ ದೇವೇಗೌಡ ಅವರ ಕೃಪೆಯಿಂದಾಗಿ. ಅವರು ಹಲವು ಬಾರಿ ಪಕ್ಷಾಂತರ ಮಾಡಿದ್ದಾರೆ. ಪಕ್ಷಾಂತರಿಗಳಿಗೆ ಟಿಕೆಟ್ ನೀಡಬಾರದು ಎಂಬ ಕಾರಣಕ್ಕಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.