
ಬೆಂಗಳೂರು(ಆ.30): ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಷ್ಟತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
‘ಕೊರೋನಾ ಸಂಕಷ್ಟ‘ದೇವರ ಅಸಾಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿ ಪೆಟ್ಟು ಕೊಟ್ಟಿದೆ. ಸುಲಭ ಬಡ್ಡಿ ದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ’ ಎಂದು ಅವರು ಟ್ವೀಟರ್ನಲ್ಲಿ ಕಿಡಿಕಾರಿದ್ದಾರೆ.
'ಯಡಿಯೂರಪ್ಪ ಸರ್ಕಾರಕ್ಕೆ ಧಮ್ ಇದ್ದರೆ ಕೇಂದ್ರವೇ ಸಾಲ ಪಡೆಯಲಿ ಎಂದು ಹೇಳಲಿ'
ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯಲ್ಲಿ ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ. ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರು. ಮತ್ತು ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರು.ಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ ಎಂದಿದ್ದಾರೆ.
‘ಕೊಟ್ಟವ ಕೋಡಂಗಿ, ಇಸ್ಕೊಂಡವ ಈರಭದ್ರ ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣು ಬಾಯಿ ಬಿಡುತ್ತಿವೆ. ಈಗ ಕೊರೋನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯ ಸರ್ಕಾರಗಳು ಏನು ಮಾಡಬೇಕು? ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ ಆರ್ಬಿಐನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ’ ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.