ನಾನೆಲ್ಲೂ ರಾಜ್ಯದ ಬ್ರಾಹ್ಮಣ ಜಾತಿ ನಿಂದಿಸಿಲ್ಲ: ಎಚ್‌.ಡಿ.ಕುಮಾರಸ್ವಾಮಿ

By Kannadaprabha NewsFirst Published Feb 7, 2023, 2:40 AM IST
Highlights

ಮರಾಠಾ ಪೇಶ್ವೆಗಳ ಡಿಎನ್‌ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಹೊರಟಿವೆ ಎಂದು ಹೇಳಿದ್ದೇನೆಯೇ ಹೊರತು ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು (ಫೆ.07): ಮರಾಠಾ ಪೇಶ್ವೆಗಳ ಡಿಎನ್‌ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಹೊರಟಿವೆ ಎಂದು ಹೇಳಿದ್ದೇನೆಯೇ ಹೊರತು ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಒಳ್ಳೆಯ ಬಿತ್ತನೆಯ ಬೆಳೆಯಲ್ಲಿ ಪಾರ್ಥೇನಿಯಂ ಬೆಳೆದಂತೆ ಆಗಿದೆ ಬಿಜೆಪಿಯ ಪರಿಸ್ಥಿತಿ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅಂತಹ ಪಾರ್ಥೇನಿಯಂ ಎಂದು ಅವರು ಜೋಶಿ ವಿರುದ್ಧ ವಾಗ್ದಾಳಿಯನ್ನೂ ಮುಂದುವರೆಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಪೇಶ್ವೆಗಳ ಡಿಎನ್‌ಎ ಇರುವ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿಯವರು ಹುನ್ನಾರ ಮಾಡಿದ್ದಾರೆ ಎಂದು ಹೇಳಿದ್ದೇನೆ. ಇದಕ್ಕೆ ಯಾಕೆ ಗಾಬರಿ? ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಸ್ಪಷ್ಟವಾಗಿ ನುಡಿದರು.

ಪ್ರಲ್ಹಾದ್ ಜೋಶಿ ಸಿಎಂ ಹೇಳಿಕೆ, ದಿಕ್ಕು ತಪ್ಪಿಸುವ ತಂತ್ರ: ಸಚಿವ ಶ್ರೀರಾಮುಲು

ನಾನು ಸಮಾಜದ ಬಗ್ಗೆ ಅಗೌರವ ತೋರಿದ್ದೇನೆ ಎಂದು ಕೆಲವರು ನನ್ನ ಹೇಳಿಕೆಯನ್ನು ತಿರುಚಿ ಮಾತನಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಬಗ್ಗೆ ಹೇಳಿದ್ದೇನೆ. ಭಾನುವಾರ ನಾನು ನೀಡಿದ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಕರ್ನಾಟಕದಲ್ಲಿ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಆ ಬ್ರಾಹ್ಮಣ ಸಮಾಜದ ಬಗ್ಗೆ ನನಗೆ ಗೌರವ ಇದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಮಠದ ಬಗ್ಗೆ ಗೌರವ ಇಟ್ಟುಕೊಂಡು ನಡೆದುಕೊಂಡು ಬಂದಿದೆ ಎಂದರು.

ಪ್ರಹ್ಲಾದ್‌ ಜೋಶಿ ಪಾರ್ಥೇನಿಯಂ: ಒಳ್ಳೆಯ ಬಿತ್ತನೆಯ ಬೆಳೆಯಲ್ಲಿ ಪಾರ್ಥೇನಿಯಂ ಬೆಳೆದಂತೆ ಆಗಿದೆ ಬಿಜೆಪಿಯ ಪರಿಸ್ಥಿತಿ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅಂತಹ ಪಾರ್ಥೇನಿಯಂ. ಹಿಂದೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಡಿಎನ್‌ಎ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿಯವರು ಟೀಕೆ ಮಾಡಿಲ್ಲವೇ? ನಾನು ಮಾತನಾಡಿದರೆ ಮಾತ್ರ ಇವರು ಅದಕ್ಕೆ ವಿವಾದದ ಸ್ವರೂಪ ಕೊಡುತ್ತಿದ್ದಾರೆ. ಇವರ ಉದ್ದೇಶ ಎಂತಹದ್ದು ಎಂಬುದನ್ನು ಇದರಿಂದ ಅರಿಯಬಹುದು ಎಂದು ಕುಮಾರಸ್ವಾಮಿ ಹೇಳಿದರು.

ಬ್ರಾಹ್ಮಣ ಮಹಾಸಭಾಕ್ಕೆ ನಾನು ಹೇಳುವುದೇನೆಂದರೆ, ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬೆಂಗಳೂರಿನ ಬನಶಂಕರಿ ಬಳಿ ಜಾಗ ನೀಡಲಾಯಿತು. ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಯಿತು. ಸತ್ಯ ಹೀಗಿರುವಾಗ ಕೆಲವರು ನನ್ನ ಹೇಳಿಕೆ ತಿರುಚಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಬ್ರಾಹ್ಮಣರು ಮುಖ್ಯಮಂತ್ರಿಯಾಗಲಿ. ಬೇಡ ಎಂದವರು ಯಾರು? ನನ್ನ ಸಹಮತವೂ ಇದೆ. ನಾನು ಸಹ ಬೆಂಬಲ ಕೊಡುವೆ. ಆದರೆ, ಕರ್ನಾಟಕದ ಮೇಲೆ ದಾಳಿ ನಡೆಸಿ ಕನ್ನಡ ಪರಂಪರೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿದ ಪೇಶ್ವೆಗಳ ಡಿಎನ್‌ಎ ಹೊಂದಿರುವ ವ್ಯಕ್ತಿ ಮುಖ್ಯಮಂತ್ರಿ ಆಗಬೇಕಾ ಎನ್ನುವ ಪ್ರಶ್ನೆ ನನ್ನದು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಠ್ಯ ಪುಸ್ತಕ ತಿರುಚಿದರು. ಆಚಾರ-ವಿಚಾರಕ್ಕೆ ಕೊಳ್ಳಿ ಇಟ್ಟರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಜನರ ಮನಸ್ಸು ಕೆಡಿಸಿದರು. ಸಮಾಜದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. 

ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಹೇಳಿದೆ. ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು? ಗಾಂಧೀಜಿ ಅವರನ್ನು ಕೊಂದವರು ಯಾರು? ಅವರೆಲ್ಲ ಪೇಶ್ವೆ ವಂಶದವರು ಎಂದು ಹೇಳಿದ್ದೆ. ಇಂತಹವರನ್ನು ಮುಖ್ಯಮಂತ್ರಿ ಮಾಡುವ ಹುನ್ನಾರ ನಡೆದಿದೆ ಎಂದಿದ್ದೆ ಎಂದು ಕುಮಾರಸ್ವಾಮಿ ಸಮರ್ಥಿಸಿಕೊಂಡರು. ನಮ್ಮ ಬ್ರಾಹ್ಮಣರು ಸರ್ವೇ ಜನ ಸುಖಿನೋ ಭವಂತು ಎಂದು ಹರಸುತ್ತಾರೆ. ಆದರೆ, ಪೇಶ್ವೆ ಬ್ರಾಹ್ಮಣರು ಸರ್ವನಾಶೋ ಭವಂತು ಎಂದು ಶಪಿಸುತ್ತಾರೆ. ನಮ್ಮದು ಕುವೆಂಪು ಹೇಳಿದಂತಹ ಸರ್ವ ಜನಾಂಗದ ತೋಟ ಎಂದರು.

ಮಾಜಿ ಸಿಎಂ ಕುಮಾ​ರ​ಸ್ವಾಮಿ ಕುಟುಂಬ​ದ​ವರ ವಿರುದ್ಧ ಡಿ.ಕೆ.ಸುರೇಶ್‌ ವಾಗ್ದಾಳಿ

ರಾಜ್ಯದಲ್ಲಿ ಬ್ರಾಹ್ಮಣರು ಮುಖ್ಯಮಂತ್ರಿಯಾಗಲಿ. ನಾನು ಸಹ ಬೆಂಬಲ ಕೊಡುವೆ. ಆದರೆ, ಕರ್ನಾಟಕದ ಮೇಲೆ ದಾಳಿ ನಡೆಸಿ ಕನ್ನಡ ಪರಂಪರೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿದ ಪೇಶ್ವೆಗಳ ಡಿಎನ್‌ಎ ಹೊಂದಿರುವ ವ್ಯಕ್ತಿ ಮುಖ್ಯಮಂತ್ರಿ ಆಗಬೇಕಾ ಎನ್ನುವ ಪ್ರಶ್ನೆ ನನ್ನದು.
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

click me!