
ಶಿವಮೊಗ್ಗ(ಸೆ.03): ಪಾರ್ಲಿಮೆಂಟ್ ಚುನಾವಣೆಯೊಳಗೆ ಅಥವಾ ಬಳಿಕ ಕಾಂಗ್ರೆಸ್ ಅಧಿಕಾರದಲ್ಲಿ ಇರಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಅವರ ಪಕ್ಷದ ಅನೇಕ ಶಾಸಕರು ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವತಃ ಪ್ರಿಯಾಂಕ್ ಖರ್ಗೆಯವರೇ ಈ ವರ್ಷ ಅಭಿವೃದ್ಧಿಗೆ ಯಾವುದೇ ಹಣ ಇಲ್ಲ ಎಂದು ಹೇಳಿದ್ದಾರೆ. ಮುಗ್ಧ ಜನರಿಗೆ ಟೋಪಿ ಹಾಕಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದರು.
ಬಿ.ಎಲ್.ಸಂತೋಷ್ ಆಧಾರವಿಲ್ಲದೇ ಮಾತನಾಡುವುದಿಲ್ಲ. ಆದರೂ, ಅವರ ಬಗ್ಗೆ ಸಿ.ಟಿ.ರವಿ. ಮತ್ತು ಕೆ.ಎಸ್. ಈಶ್ವರಪ್ಪನವರಂತೆ ಸಂತೋಷ್ ಜೀ ಮಾತನಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಲಘುವಾಗಿ ಮಾತನಾಡಿದ್ದಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಕರ್ನಾಟಕದ ಪಕ್ಷಾಂತರ ಪ್ರವೀಣ: ಈಶ್ವರಪ್ಪ
ರಾಜ್ಯದಲ್ಲಿ ಬರಗಾಲ ಬಂದಿದ್ದರೂ ಒಬ್ಬನೇ ಒಬ್ಬ ಮಂತ್ರಿ ರೈತರ ಬಳಿಗೆ ತೆರಳಿ ಅವರ ಕಷ್ಟ- ಸುಖ ವಿಚಾರಿಸಿಲ್ಲ. ಭಂಡತನದಿಂದ ಸರ್ಕಾರ ನಡೆಸುತ್ತಾ ಇದ್ದಾರೆ. ತಿಹಾರ್ ಜೈಲಿನಲ್ಲಿ ಇದ್ದು ಬಂದವರು ಬೇರೆ ಜನಪ್ರತಿನಿಧಿಗಳಿಗೆ ವೇದಾಂತ ಹೇಳುತ್ತಿದ್ದಾರೆ ಎಂದು ಕುಟುಕಿದರು.
ಐ.ಎನ್.ಡಿ.ಐ.ಎ. ಮಿತ್ರ ಪಕ್ಷಗಳಲ್ಲಿ ಒಮ್ಮತವಿಲ್ಲ ಎಂದು ಈಗಾಗಲೇ ಸಾಬೀತಾಗಿದೆ. ರಾಷ್ಟ್ರೀಯ ಜನಗಣತಿ ಮಾಡಬೇಕೆಂಬ ಸಲಹೆಗೆ ಸ್ವತಃ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಸೀಟು ಹಂಚಿಕೆ ವಿಚಾರ ಇನ್ನೂ ಬಗೆಹರಿದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಒಳಜಗಳವಿದ್ದು, ಒಂದಾಗಲು ಸಾಧ್ಯವೇ ಇಲ್ಲ. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ನರೇಂದ್ರ ಮೋದಿ ಸರ್ಕಾರಕ್ಕೆ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದರು.
ವಿಪಕ್ಷ ನಾಯಕರ ಆಯ್ಕೆ ನಮ್ಮ ರಾಷ್ಟ್ರೀಯ ನಾಯಕರು ಮಾಡುತ್ತಾರೆ. ಇಡೀ ರಾಷ್ಟ್ರವನ್ನೇ ಮುನ್ನಡೆಸುವ ಅವರಿಗೆ ಇದು ಒಂದು ದೊಡ್ಡ ವಿಷಯವೇ ಅಲ್ಲ. ಸಮಯ ಬಂದಾಗ ಮಾಡುತ್ತಾರೆ. ಮೊದಲು ನಿಮ್ಮ ಪಕ್ಷದ ಒಳಜಗಳ ಬಗೆಹರಿಸಿಕೊಳ್ಳಿ. ಈ ಹಿಂದೆ ಎರಡು ವರ್ಷಗಳ ಕಾಲ ಎಐಸಿಸಿ ಅಧ್ಯಕ್ಷರೇ ಇರಲಿಲ್ಲ. ಈಗ ನಿಮ್ಮ ಪಕ್ಷದ ಶಾಸಕರಿಗೆ ಪಕ್ಷದ ಮೇಲೇ ವಿಶ್ವಾಸವಿಲ್ಲ. ರಾಜ್ಯದಲ್ಲಿ ಮತ್ತೆ ನೂರಕ್ಕೆ ನೂರು ಆಪರೇಷನ್ ಕಮಲ ನಡೆದೇ ನಡೆಯುತ್ತದೆ ಎಂದರು.
ಯಾವ ಕಾರಣಕ್ಕೂ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಹೋಗಲ್ಲ: ಈಶ್ವರಪ್ಪ
8ರಂದು ಬೃಹತ್ ಪ್ರತಿಭಟನೆ: ಜಿಲ್ಲಾಧ್ಯಕ್ಷ
ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೆ.8ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.
ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆ, ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಸರ್ಕಾರ ರದ್ದುಗೊಳಿಸಿದೆ. ಮನಬಂದಂತೆ ವಿದ್ಯುತ್ ಕಡಿತ ಮಾಡುತ್ತಿದ್ದಾರೆ. ವಿದ್ಯುತ್ ಒದಗಿಸುವ ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ. ಸರ್ಕಾರದ ಎಲ್ಲ ನಿರ್ಲಕ್ಷ್ಯ ಧೋರಣೆ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾದ್ಯಂತೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನಲ್ಲಿ ಸ್ವತಃ ಬಿ.ಎಸ್. ಯಡಿಯೂರಪ್ಪನವರು ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.