
ಚಾಮರಾಜನಗರ(ಮಾ.03): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಹೇಳಿದರು ಎಂಬ ಕಾರಣಕ್ಕಷ್ಟೇ ಪರಸ್ಪರ ತಬ್ಬಿಕೊಳ್ಳುತ್ತಾರೆ. ಆದರೆ, ಇಬ್ಬರ ಕೈಯಲ್ಲೂ ಚಾಕು ಇದೆ. ಯಾವಾಗ ಪರಸ್ಪರ ಚುಚ್ಚಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ಕೆಲ ಬಾರಿ ಹೈಕಮಾಂಡ್ ಸೂಚಿಸಿದ ಕಡೆ ಸ್ಪರ್ಧಿಸುತ್ತೇನೆ ಎನ್ನುತ್ತಾರೆ. ಹಾಗಿದ್ದರೆ, ಕೋಲಾರದಲ್ಲಿ ನಿಲ್ಲಲು ಅವರಿಗೆ ಹೈಕಮಾಂಡ್ ಹೇಳಿತ್ತಾ? ಅವರು ಬಾದಾಮಿಯಲ್ಲಿ ಸೋಲುವ ಭಯದಿಂದ ಕೋಲಾರಕ್ಕೆ ಹೋಗಿದ್ದಾರೆ. ಅವರನ್ನು ಇದೀಗ ಅಲ್ಲಿ ಬಿಜೆಪಿಗಿಂತ ಕಾಂಗ್ರೆಸ್ನ ಒಳಗಿರುವವರೇ ಸೋಲಿಸಲಿದ್ದಾರೆ ಎಂದರು.
ಬೇಡಗಂಪಣ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ
ಈ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರತಿಸ್ಪರ್ಧಿ ಎಂದು ಜಿ.ಪರಮೇಶ್ವರ್ರನ್ನು ಸೋಲಿಸಿದರೆ, ತಮ್ಮ ಆಪ್ತ ರಮೇಶ್ ಕುಮಾರ್ ಮೂಲಕ ಮುನಿಯಪ್ಪರಿಗೆ ಸೋಲಿನ ರುಚಿಕಾಣಿಸಿದರು. ಮತ್ತೊಂದು ಕಡೆ ಒಕ್ಕಲಿಗರು, ದಲಿತರು ಸಿದ್ದರಾಮಯ್ಯಗೆ ಪಾಠ ಕಲಿಸಲು ಕಾಯುತ್ತಿದ್ದಾರೆ. ಈ ಎರಡು ಸಮುದಾಯದವರು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಸ್ಲಿಂ ಓಲೈಕೆಗೆ ಮುಂದಾಗಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಮಿಮಿಕ್ರಿ ಆರ್ಟಿಸ್ಟ್ ಆಗಬೇಕಿತ್ತು. ಪ್ರಧಾನಿ ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಅವರಿಗೆ ಏಕವಚನದಲ್ಲಿ ವಾಗ್ದಾಳಿ ನಡೆಸುತ್ತಾರೆ. ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತೇನೆ ಅನ್ನುತ್ತಾರೆ. ಹಾಗಿದ್ದವರು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಹೋಗಿದ್ದು ಯಾಕೆ ಎಂದು ಪ್ರಶ್ನಿಸಿದ ಈಶ್ವರಪ್ಪ, ಕಾರ್ಯಕರ್ತರ ವಿಶ್ವಾಸ ಕಳೆದುಕೊಂಡವರನ್ನು ನಾಯಕ ಎಂದು ಹೇಗೆ ಕರೆಯುತ್ತಾರೆ ಎಂದು ಕಿಡಿಕಾರಿದರು.
ಅನಾರೋಗ್ಯದಿಂದ ಸೋಮಣ್ಣ ಗೈರು: ಈಶ್ವರಪ್ಪ ಸ್ಪಷ್ಟನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ವಿಜಯಸಂಕಲ್ಪ ಯಾತ್ರೆಗೆ ಗೈರಾಗಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸೋಮಣ್ಣ ನಡುವೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ. ಆರೋಗ್ಯ ಸರಿ ಇಲ್ಲದ ಕಾರಣ ವಿಜಯಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಬಂದಿಲ್ಲ. ಅವರು ಅನಾರೋಗ್ಯದಿಂದಾಗಿ ಕ್ಷೇತ್ರದಲ್ಲೇ ಉಳಿದುಕೊಂಡಿದ್ದಾರೆ. ನಾನು ಕೂಡ ಯಡಿಯೂರಪ್ಪ ಅವರ ಅನೇಕ ಕಾರ್ಯಕ್ರಮಕ್ಕೆ ಹೋಗಿಲ್ಲ. ಅದನ್ನೂ ಮುಸುಕಿನ ಗುದ್ದಾಟ ಎಂದು ಹೇಳಲು ಆಗುತ್ತಾ? ಅನಾರೋಗ್ಯದ ಕಾರಣದಿಂದ ಸೋಮಣ್ಣ ಕಾರ್ಯಕ್ರಮಕ್ಕೆ ಬಂದಿಲ್ಲ ಅಷ್ಟೆ ಎಂದು ಸ್ವಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.