
ವಿಜಯ್ ಮಲಗಿಹಾಳ
ಬೆಂಗಳೂರು(ಅ.15): ರಾಜ್ಯದಲ್ಲಿ ತೀವ್ರ ರಂಗೇರಲಿರುವ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಎನ್ಡಿಎ ಕೂಟದ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಬಿರುಕು ಮೂಡಿಸುವ ಸಾಧ್ಯತೆ ತಲೆದೋರುತ್ತಿದೆ.
'ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮತ್ತು ಬಿಜೆಪಿಯ ಒಕ್ಕಲಿಗ ನಾಯಕರನ್ನು ವ್ಯವಸ್ಥೆತವಾಗಿ ಮುಗಿಸಲು ಹೊರ ಆಕಾಂಕಿಯೂ ಆಗಿರುವ ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರವಾಗಿ ಆಪಾದಿಸಿದ್ದಾರೆ' ಬಿಜೆಪಿಗೆ ಜೆಡಿಎಸ್ ಅನಿವಾರ್ಯವಲ್ಲ. ಆದರೆ, ಜೆಡಿಎಸ್ಗೆ ಬಿಜೆಪಿ ಆನಿವಾರ್ಯ ಎನ್ನುವುದನ್ನು ಮನಗಾಣಬೇಕು' ಎಂದೂ ಅವರು ತೀಕ್ಷ್ಯವಾಗಿ ಹೇಳಿದ್ದಾರೆ.
ಸೋಮವಾರ 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಅವರು ಜೆಡಿಎಸ್ ನಾಯಕ ಕುಮಾರಸ್ವಾಮಿ ನಡೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 'ನಾನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಕುಮಾರಸ್ವಾಮಿ ನನಗೆ ಮೋಸ ಮಾಡಿದ ಮೇಲೆ ನಾನು ಸ್ಪರ್ಧಿಸಲೇಬೇಕು. ಬುಧವಾರ ಚನ್ನಪಟ್ಟಣದಲ್ಲಿ ಪಕ್ಷದ ಪ್ರಮುಖರ ಸಭೆ ಕರೆದಿದ್ದೇನೆ. ಅಲ್ಲಿ ನನ್ನ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ' ಎಂದು ತಿಳಿಸಿದರು.
ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಮತ್ತು ಬಿಜೆಪಿಯ ಒಕ್ಕಲಿಗ ಸಮುದಾಯದ ನಾಯಕರನ್ನು ಮುಗಿಸಬೇಕು ಎಂಬುದೇ ಕುಮಾರಸ್ವಾಮಿ ಅವರ ಮುಖ್ಯ ಉದ್ದೇಶವಾಗಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್, ಹಾಸನದಲ್ಲಿ ಪ್ರೀತಂಗೌಡ, ಮೈಸೂರಿನಲ್ಲಿ ಪ್ರತಾಪ್ ಸಿಂಹ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಮುಗಿಸಿದ ಮೇಲೆ ಈಗ ರಾಮನಗರದಲ್ಲಿ ನನ್ನನ್ನು ಮುಗಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯೋಗೇಶ್ವರ್, ಈ ಸಮಸ್ಯೆ ನಗರ ಪ್ರದೇಶದಲ್ಲಿರುವ ಬಿಜೆಪಿಯ ಒಕ್ಕಲಿಗನಾಯಕರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಎದುರಾಗುವುದಿಲ್ಲ. ಕುಮಾರಸ್ವಾಮಿ ಅವರಿಗೆ ನಗರ ಪ್ರದೇಶದಲ್ಲಿನ ಒಕ್ಕಲಿಗ ನಾಯಕರನ್ನು ಮುಗಿಸುವುದು ಸಾಧ್ಯವಿಲ್ಲ ಎಂಬುದು ಗೊತ್ತಿದೆ. ಆದರೆ, ಗ್ರಾಮೀಣ ಪ್ರದೇಶದ ಬಿಜೆಪಿಯಒಕ್ಕಲಿಗನಾಯಕರಿಗೆ ಈಗ ಸಮಸ್ಯೆ ಉಂಟಾಗಿದೆ. ಬಿಜೆಪಿ ನಾಶ ಮಾಡಿ ಜೆಡಿಎಸ್ ಗಟ್ಟಿಗೊಳಿಸಲು ಹೊರಟರೆ ಪಕ್ಷದ ನೂರಾರು ಆಕಾಂಕ್ಷಿಗಳ ರಾಜಕೀಯ ಭವಿಷ್ಯ ಏನು ಎಂದು ಹರಿಹಾಯ್ದರು.
ಇದು ಹೀಗೆಯೇ ಮುಂದುವರೆದರೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಕತೆ ಮುಗಿದೇ ಹೋಗುತ್ತದೆ. ನಾನು ಐದು ಸಲ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಇದರಲ್ಲಿ ಒಂದು ಬಾರಿ ಗೆದ್ದು, ನಾಲ್ಕು ಬಾರಿ ಸೋತಿದ್ದೇನೆ. ರಾಮನಗರ ಜಿಲ್ಲೆಯಲ್ಲಿ ಬಿಜೆಪಿಗೆ ನೆಲೆ ಇರುವ ಕ್ಷೇತ್ರ ಯಾವುದಾದರೂ ಇದ್ದರೆ ಅದು ಚನ್ನಪಟ್ಟಣ ಮಾತ್ರ. ಮಿತ್ರ ಪಕ್ಷವಾಗಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಈ ಬಗ್ಗೆ ಯೋಚಿಸಿ ಬಿಟ್ಟು ಕೊಡಬೇಕು ಎಂದು ಒತ್ತಾಯಿಸಿದರು. ಚನ್ನಪಟ್ಟಣ ಕ್ಷೇತ್ರವನ್ನು ತಮ್ಮ ಜೆಡಿಎಸ್ಗೆ ಉಳಿಸಿಕೊಳ್ಳಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರಂತೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಅವರು ತೀರ್ಮಾನ ಮಾಡಿದ್ದರೆ ಸಂತೋಷ, ಟಿಕೆಟ್ ಯಾರು ಬೇಕಾದರೂ ತೀರ್ಮಾನ ಮಾಡಬಹುದು. ಆದರೆ, ಫಲಿತಾಂಶ ತೀರ್ಮಾನ ಮಾಡುವುದು ಕ್ಷೇತ್ರದ ಜನರು ಮಾತ್ರ ಎಂದು ತಿರುಗೇಟು ನೀಡಿದರು.
ನೀವು ಸ್ಪರ್ಧೆ ಮಾಡುವುದು ನಿಶ್ಚಿತವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು. ನಾನು ಸ್ಪರ್ಧೆ ಮಾಡುವುದು ಖಚಿತ. ಬೇಡ ಎಂದರೂ ಜನ ಬಿಡಬೇಕಲ್ಲ. ಇಲ್ಲಿ ಪಕ್ಷ ದುರ್ಬಲವಾಗಿತ್ತು. ಇಷ್ಟೆಲ್ಲ ಹೋರಾಟ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಎನ್ಡಿಎ ಕೂಟದಿಂದಲೇ ಸ್ಪರ್ಧಿಸುವುದು ನನ್ನ ಮೊದಲ ಆದ್ಯತೆ. ಟಿಕೆಟ್ ಸಿಗದಿದ್ದರೆ ಬೇರೆ ಹಾದಿ ತುಳಿಯುತ್ತೇನೆ ಎಂದರು. ಇದೇ ವೇಳೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವುದಿಲ್ಲ ಎಂದೂ ಯೋಗೇಶ್ವರ್ ಸ್ಪಷ್ಟಪಡಿಸಿದರು.
ನಾಳೆ ಬಿಜೆಪಿ ಬೆಂಬಲಿಗರ ಸಭೆ ಕರೆದ ಯೋಗೇಶ್ವರ್
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಟಿಕೆಟ್ಗಾಗಿ ಜೆಡಿಎಸ್-ಬಿಜೆಪಿ ನಡುವೆ ಹಗ್ಗಜಗ್ಗಾಟ ಮುಂದುವರಿದಿರು ವುದರ ನಡುವೆಯೇ ಟಿಕೆಟ್ ಆಕಾಂಕಿ ಆಗಿರುವ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬುಧವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಟಿಕೆಟ್ ವಿಚಾರವಾಗಿ ಅಸಮಾಧಾನ ಗೊಂಡಿರುವ ಅವರು ಈ ಸಭೆಯಲ್ಲಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಚನ್ನಪಟ್ಟಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯೇ ಸ್ಪರ್ಧೆ: ಎಚ್ಡಿಕೆ
ಹೊಳೆನರಸೀಪುರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೇ ಕಣಕ್ಕೆ ಇಳಿಯಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ನು 2-3 ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಹೊಂದಾಣಿಕೆಯೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಸಮಾಲೋಚಿಸಿ, ದೆಹಲಿಯ ನಾಯಕರ ಜತೆ ಚರ್ಚೆ ಮಾಡಿ, ಅಂತಿಮ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.