ಅಭಿವೃದ್ಧಿ ಹೆಸರಲ್ಲಿ ಲೂಟಿ ಮಾಡುತ್ತಿದ್ದಾರೆ; ಇಂಥ ರಾಜಕಾರಣ ನಾನು ಇಂದಿಗೂ ಮಾಡಿಲ್ಲ: ಎಚ್‌ಡಿಕೆ

By Kannadaprabha NewsFirst Published Feb 22, 2023, 7:44 AM IST
Highlights

ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ದಲಿತರು, ​ರೈತರು, ಕಾರ್ಮಿಕರು ಬಡವರಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆರೋಪಿಸಿದರು.

ಭದ್ರಾವತಿ (ಫೆ.22) : ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ದಲಿತರು, ​ರೈತರು, ಕಾರ್ಮಿಕರು ಬಡವರಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ(HD Kumaraswamy) ಆರೋಪಿಸಿದರು.

ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜೆಡಿಎಸ್‌(JDS) ಪಕ್ಷದ ಪಂಚರತ್ನ ಯಾತ್ರೆ (Pancharatna rathayatre)ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Latest Videos

KUVEMPU AIRPORT: ಪ್ರಧಾನಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್‌ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಸಾಕಷ್ಟುಬಡವರಿಗೆ ಮನೆಗಳಿಲ್ಲವಾಗಿದೆ. ಇಂತಹ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಜಿಲ್ಲೆಯ ರಾಜಕಾರಣಿಗಳು ವಿಫಲರಾಗಿದ್ದಾರೆ. ಈ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವ ಉದ್ದೇಶವೇ ಪಂಚರತ್ನ ಯಾತ್ರೆಯಾಗಿದೆ. ಇದನ್ನು ಜನರು ಅರ್ಥ ಮಾಡಿಕೊಂಡು ಈ ಬಾರಿ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಬೇಕೆಂದರು.

ಜಿಲ್ಲೆಯ ರಾಜಕಾರಣಿಗಳು ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಕೇವಲ ಅವರು ಹಾಗು ಕುಟುಂಬದವರು ಸಮೃದ್ಧಿಯಾಗುತ್ತಿದ್ದಾರೆ. ಇಂತಹ ರಾಜಕಾರಣ ನಾನು ಎಂದಿಗೂ ಮಾಡಿಲ್ಲ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಹ ಪೂರ್ಣ ಅಧಿಕಾರ ನೀಡದಿದ್ದರೂ ಸಹ ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎರಡು ಬಾರಿ ಸಾಲ ಮನ್ನಾ ಮಾಡಿದ್ದೇನೆ. ಬಡವರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸಲು 2.5 ಲಕ್ಷ ಕೋಟಿ ರು. ಅನುದಾನದ ಅಗತ್ಯವಿದೆ. ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಅಗತ್ಯವಿರುವ ಅನುದಾನವನ್ನು ಜನರ ತೆರಿಗೆ ಹಣದಲ್ಲಿ ಬಳಸಿಕೊಳ್ಳುತ್ತೇನೆ. ಈ ಬಾರಿ ನನಗೆ ಪೂರ್ಣ ಪ್ರಮಾಣದ ಅಧಿಕಾರ ನೀಡುವಂತೆ ಮನವಿ ಮಾಡಿದರು.

ಕ್ಷೇತ್ರದ ವಿಐಎಸ್‌ಎಲ್‌ ಮತ್ತು ಎಂಪಿಎಂ ಕಾರ್ಖಾನೆ(MPM Factory)ಗಳನ್ನು ಮುಚ್ಚಲು ಹಣ ಬಿಡುಗಡೆ ಮಾಡಿರುವ ಈ ಹಿಂದಿನ ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರಗಳಿಗೆ ಈ ಕಾರ್ಖಾನೆಗಳನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡುವ ಯಾವುದೇ ನೈತಿಕತೆ ಇಲ್ಲವಾಗಿದೆ. ನಮ್ಮ ಸರ್ಕಾರ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು ಬದ್ಧವಾಗಿದೆ. ರಾಜ್ಯ ಸರ್ಕಾರವೇ ಈ ಎರಡು ಕಾರ್ಖಾನೆಗಳನ್ನು ಮುನ್ನಡೆಸಿಕೊಂಡು ಹೋಗಲಿದೆ. ಅಲ್ಲದೆ ಇಲ್ಲಿನ ಬಗರ್‌ಹುಕುಂ ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶಾರದಾ ಅಪ್ಪಾಜಿಯವರನ್ನು ಗೆಲ್ಲಿಸುವ ಮೂಲಕ ವಿಧಾನಸಭೆಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

Shivamogga: ಏರ್‌ಪೋರ್ಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡ್‌ ಆದ ಭದ್ರತಾ ಪಡೆ ವಿಮಾನ: ಪ್ರಾಯೋಗಿಕ ವಿಮಾನ ಹಾರಾಟ ಸಕ್ಸಸ್

ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ(CM Ibrahim), ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೊಜೇಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಜ್ಮಾ, ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್‌, ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್‌, ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್‌, ಗೀತಾ, ನಗರ ಘಟಕದ ಅಧ್ಯಕ್ಷ ಆರ್‌. ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್‌, ಯುವ ಘಟಕದ ಅಧ್ಯಕ್ಷ ಎಂ.ಎ. ಅಜಿತ್‌, ಕರಿಯಣ್ಣ, ಮೈಲಾರಪ್ಪ, ಮುರ್ತುಜಾಖಾನ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

click me!