ಎಚ್‌ಡಿಕೆ ಮಂಡ್ಯಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ಉಳಿಸಿಕೊಳ್ತಾರೆ: ಡಿ.ಕೆ.ಸುರೇಶ್

By Kannadaprabha NewsFirst Published Jun 12, 2024, 4:25 AM IST
Highlights

ಯಾವುದೇ ಕಾರಣಕ್ಕೂ ಕುಮಾರಸ್ವಾಮಿಯವರು ಚನ್ನಪಟ್ಟಣ ಬಿಟ್ಟು ಹೋಗಲ್ಲ, ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ. 

ಚನ್ನಪಟ್ಟಣ (ಜೂ.12): ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ. ಯಾವುದೇ ಕಾರಣಕ್ಕೂ ಕುಮಾರಸ್ವಾಮಿಯವರು ಚನ್ನಪಟ್ಟಣ ಬಿಟ್ಟು ಹೋಗಲ್ಲ, ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿ ಅವರಿಗೆ ಅಧಿಕಾರ ಮುಖ್ಯವಲ್ಲ, ಚನ್ನಪಟ್ಟಣದ ಸ್ವಾಭಿಮಾನಿ ಮತದಾರರ ಗೌರವ ಮುಖ್ಯ ಎಂದು ಭಾವಿಸಿ ನಿಮ್ಮನ್ನು ಅವರು ಉಳಿಸಿಕೊಳ್ಳುವ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದು ವ್ಯಂಗ್ಯವಾಡಿದರು. ಇಲ್ಲಿನ ಜನ ಕುಮಾರಸ್ವಾಮಿಯವರ ಕಷ್ಟಕಾಲದಲ್ಲಿ ಕೈಹಿಡಿದ ಹಿನ್ನೆಲೆಯಲ್ಲಿ ನಿಮ್ಮ ಮೇಲಿನ ಪ್ರೀತಿಯಿಂದ ಕ್ಷೇತ್ರವನ್ನು ಉಳಿಸಿಕೊಳ್ಳುವರು ಎಂಬ ನಂಬಿಕೆ ಇದೆ. 

ಕುಮಾರಸ್ವಾಮಿಯವರು ಒಂದು ಕಣ್ಣು ಅಲ್ಲಿದೆ, ಒಂದು ಕಣ್ಣು ಇಲ್ಲಿದೆ ಅನ್ನುತ್ತಿದ್ದರು. ಆದ್ದರಿಂದ ಅವರಿಗೆ ಅಧಿಕಾರ ಮುಖ್ಯವಲ್ಲ, ನೀವು ಮುಖ್ಯವಾಗುತ್ತೀರಾ. ಮಣ್ಣಿನ ಮಕ್ಕಳಿಗೆ ಗೌರವ ಕೊಡುವ ಕೆಲಸವನ್ನು ಅವರು ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಕಳೆದ ಮೂರು ಅವಧಿಯಲ್ಲಿ ಸಂಸದನಾಗಿ ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದೆ, ಜನ ನನಗೆ ಕೂಲಿ ಕೊಡಲು ಆಗುವುದಿಲ್ಲ ಎಂದು ವಿರಾಮ ನೀಡಿದ್ದಾರೆ. ಜನ ವಿರಾಮ ನೀಡಿರುವುದು ಅಭಿವೃದ್ಧಿಗೆ ಹೊರತು ನನಗಲ್ಲ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ, ಯಾರನ್ನು ಹೊಣೆ ಮಾಡುವುದಿಲ್ಲ ಎಂದು ತಿಳಿಸಿದರು.

Latest Videos

ರಾಜ್ಯದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಜವಾಬ್ದಾರಿ ನಿಖಿಲ್‌ ಕುಮಾರಸ್ವಾಮಿ ಹೆಗಲಿಗೆ?

ಜಾತಿ ಅಡ್ಡಬರುತ್ತದೆ ಅಂದುಕೊಳ್ಳಲಿಲ್ಲ: ಕ್ಷೇತ್ರದಲ್ಲಿ ಸಾಕಷ್ಟು ಚೆಕ್ ಡ್ಯಾಂ ನಿರ್ಮಿಸುವ ಮೂಲಕ ನೀರಿನ ಸಮಸ್ಯೆ ಪರಿಹರಿಸಲು ಶ್ರಮಿಸಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯು ಶೇ.೯೬ರಷ್ಟು ಫಲಾನುಭವಿಗಳಿಗೆ ತಲುಪಿರುವುದಕ್ಕೆ ನನ್ನ ಶ್ರಮವೇ ಕಾರಣ. ನಾನು ಎಲ್ಲೂ ಜಾತಿ ನೋಡಲಿಲ್ಲ. ಆದರೆ ಲೋಕಸಭಾ ಚುನಾವಣೆಯಲ್ಲಿ ನನಗೆ ಜಾತಿ ಅಡ್ಡ ಬರುತ್ತದೆ ಅಂದುಕೊಂಡಿರಲಿಲ್ಲ. ಭಾವನಾತ್ಮಕ ವಿಚಾರ ಕೆಲಸ ಮಾಡುತ್ತದೆ ಎಂದು ಗೊತ್ತಿರಲಿಲ್ಲ. ನಾನೇನು ತಪ್ಪು ಮಾಡಿದೆ ಎಂದು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನೇನು ಕೆಲ ತಿಂಗಳಲ್ಲೇ ಜಿಪಂ ಹಾಗೂ ತಾಪಂ ಚುನಾವಣೆ ಎದುರಾಗಲಿವೆ. 

ನಾನು ಈಗ 24*7 ರಾಜಕಾರಣಿ, ಸಿನಿಮಾ ಮಾಡೋದನ್ನು ಬಂದ್ ಮಾಡಿದ್ದೇನೆ: ನಿಖಿಲ್ ಕುಮಾರಸ್ವಾಮಿ

ಅದಕ್ಕೆ ಸಜ್ಜಾಗುವ ನಿಟ್ಟಿನಲ್ಲಿ ಸ್ಥಳೀಯ ನಾಯಕತ್ವ ಬೆಳೆಸುವ ಕೆಲಸ ಮಾಡಿ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಜತೆ ನಿಲ್ಲುತ್ತೇನೆ ಎಂದು ತಿಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜಿಲ್ಲೆಯ ಜನ ಸಹಕರಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳು ನಿಲ್ಲುವ ಕುರಿತು ವದಂತಿ ಇದೆ. ಆದರೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು. ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ರಾಮೋಜಿಗೌಡ, ಮಾಜಿ ಶಾಸಕ ಎಂ.ಸಿ.ಅಶ್ವತ್ಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ಪ್ರಮೋದ್, ಸುನೀಲ್, ಮುಖಂಡರಾದ ದುಂತೂರು ವಿಶ್ವನಾಥ್ ಇತರರು ಇದ್ದರು.

click me!