
ಬೆಂಗಳೂರು (ಆ.18): ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮುಂದಿನ ಚುನಾವಣೆ ಬಳಿಕ ಬೇರೆ ಪಕ್ಷ ಅಧಿಕಾರದ ಗದ್ದುಗೆ ಏರಲು ಬಿಡುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ 140 ಸ್ಥಾನಗಳ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅಮಿತ್ ಶಾ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಇನ್ನೂ ಹತ್ತು ವರ್ಷಗಳ ಕಾಲ ಪಕ್ಷ ಬಲಪಡಿಸುವ ಶಕ್ತಿ ನನಗೆ ಇದೆ ಎಂದೂ ಅವರು ಹೇಳಿದ್ದಾರೆ. ಬುಧವಾರ ಸಂಜೆ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ನನಗೆ ಕೊಟ್ಟಿರುವಷ್ಟುಸ್ಥಾನಮಾನ ಹಾಗೂ ಅಧಿಕಾರ ಮತ್ಯಾರಿಗೂ ನೀಡಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು.
ಬಿಎಸ್ವೈ ನೆತ್ತರು ಜಿಲ್ಲೆಗೆ ನೀರಾವರಿ ರೂಪದಲ್ಲಿ ಪರಿವರ್ತನೆ: ಸಂಸದ ರಾಘವೇಂದ್ರ
ಪಕ್ಷದ ಹೈಕಮಾಂಡ್ ನನಗೆ ಎಲ್ಲ ಸ್ಥಾನಮಾನಗಳನ್ನು ನೀಡಿದೆ. ನಾನು ಯಾವುದೇ ಸ್ಥಾನಮಾನಕ್ಕೂ ಆಸೆ ಪಟ್ಟವನಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆಗೆ ಹೋರಾಟ ಮಾಡುತ್ತೇನೆ. ಈಗ ಸಂಘಟನೆ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸುವಾಗ ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಕರ್ನಾಟಕ ಮಾತ್ರವಲ್ಲ ದಕ್ಷಿಣ ಭಾರತದಲ್ಲಿ ಪಕ್ಷ ಸಂಘಟನೆಗೆ ಗಮನಹರಿಸುವಂತೆ ನಾನು ದೂರವಾಣಿ ಕರೆ ಮಾಡಿದಾಗ ಪ್ರಧಾನಿಗಳು ಸೂಚಿಸಿದ್ದಾರೆ. ಅಂತೆಯೇ ದಕ್ಷಿಣ ಭಾರತದಲ್ಲಿ ಸಹ ಪಕ್ಷ ಸಂಘಟನೆಗೆ ತೊಡಗುತ್ತೇನೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಾತ್ರವಲ್ಲ ಕೇಂದ್ರದಲ್ಲಿ ಕೂಡ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಯಾರಿಂದಲೂ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನ ಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ನಾಯಕರ ಜತೆ ರಾಜ್ಯ ಪ್ರವಾಸ ಮಾಡುತ್ತೇನೆ. ಯಾವುದೇ ಸ್ಥಾನ ಮಾನ ನೀಡದೆ ಹೋದರೂ ಪಕ್ಷ ಬಲವರ್ಧನೆಗೆ ಕೆಲಸ ಮಾಡುವೆ. ಈಗಾಗಲೇ ಮುಖ್ಯಮಂತ್ರಿಗಳಾಗಿಯೇ ಬಿಟ್ಟೆಎನ್ನುವರಿಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಅವರಿಗೆ ಜನರೇ ಉತ್ತರ ಕೊಡುತ್ತಾರೆ. ಒಬ್ಬರು ಇಬ್ಬರಿಂದ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದರು.
ನನ್ನನ್ನು ಯಾವತ್ತೂ ಪಕ್ಷ ಕಡೆಗಣಿಸಿಲ್ಲ. ನಾನು ರಸ್ತೆಯಲ್ಲಿ ಹೋಗುವಾಗ ನನ್ನನ್ನು ನೋಡಿ ‘ನಮ್ಮ ಯಡಿಯೂರಪ್ಪ’ ಅಂತ ಜನ ಕೂಗುತ್ತಾರಲ್ಲ ಅದಕ್ಕಿಂತ ದೊಡ್ಡ ಹುದ್ದೆ ಬೇರೆ ಇಲ್ಲ. ಬೊಮ್ಮಾಯಿ, ಯಡಿಯೂರಪ್ಪ ಅಥವಾ ಸದಾನಂದಗೌಡ ನೇತೃತ್ವ ಅಂದರೂ ಒಂದೇ. ಮುಖ್ಯಮಂತ್ರಿಗಳನ್ನೇ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ. ಎಲ್ಲರೂ ಒಟ್ಟಾಗಿ ರಾಜ್ಯ ಪ್ರವಾಸ ಮಾಡಿ ಪಕ್ಷ ಅಧಿಕಾರಕ್ಕೆ ತರುತ್ತೇವೆ ಎಂದರು.
ಬಿಜೆಪಿಯ ಸಂಸದೀಯ ಸಮಿತಿಗೆ ಇರುವ ಪವರ್ ಏನು? ಇಲ್ಲಿದೆ ಡೀಟೇಲ್ಸ್!
ತಿಂಗಳಿಗೊಮ್ಮೆ ಮೋದಿ ಕರ್ನಾಟಕಕ್ಕೆ ಬರುವಂತೆ ವ್ಯವಸ್ಥೆ: ಪಕ್ಷದ ವರಿಷ್ಠರು ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಇನ್ನೂ ಹತ್ತು ವರ್ಷಗಳ ಕಾಲ ಪಕ್ಷ ಬಲಪಡಿಸುವ ಶಕ್ತಿ ನನಗೆ ಇದೆ. ಕರ್ನಾಟಕಕ್ಕೆ ತಿಂಗಳಿಗೊಮ್ಮೆಯಾದರೂ ಪ್ರಧಾನಿ ಮೋದಿ ಅವರು ಬಂದು ಹೋಗುವಂತೆ ನಾವು ವ್ಯವಸ್ಥೆ ಮಾಡುತ್ತೇವೆ.
-ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.