
ನವದೆಹಲಿ : ಕರ್ನಾಟಕ ಕಾಂಗ್ರೆಸ್ನಲ್ಲಿನ ನಾಯಕತ್ವದ ಗೊಂದಲ ಮತ್ತು ಅಧಿಕಾರ ಹಂಚಿಕೆ ಕುರಿತ ಗೊಂದಲದ ನಡುವೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್ ಆಗಿ ದೆಹಲಿಗೆ ಭೇಟಿ ನೀಡಿದ್ದಾರೆ. ಅಲ್ಲದೆ, ಸಮಯ ಸಿಕ್ಕರೆ ಹೈಕಮಾಂಡ್ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ದೆಹಲಿಯಲ್ಲಿ ಸುಪ್ರೀಂಕೋರ್ಟ್, ಹೈಕೋರ್ಟ್ ಹೇಗಿದೆ ಎಂಬುದರ ಅಧ್ಯಯನಕ್ಕೆ ಬಂದಿದ್ದೇವೆ. 3 ಗಂಟೆ ಕಾಲ ಹೈಕೋರ್ಟ್ ಕಟ್ಟಡ ವೀಕ್ಷಣೆ ಮಾಡಿದ್ದೇವೆ. ಧಾರವಾಡ ಹೈಕೋರ್ಟ್ನ್ನೂ ಆ ಮಾದರಿಯಲ್ಲಿಯೇ ಮಾಡೋಕೆ ಸಾಧ್ಯವೇ ಎಂಬುದರ ಬಗ್ಗೆ ಮತ್ತಷ್ಟು ಅಧ್ಯಯನ ಮಾಡುತ್ತೇವೆ. ನಮ್ಮ ಸರ್ಕಾರ ಇದಕ್ಕೆ ಅಗತ್ಯವಿರುವ ಎಲ್ಲಾ ಸಹಾಯ ಮಾಡಲು ಸಿದ್ಧವಿದೆ. ಬಜೆಟ್ನಲ್ಲೂ ವಿಶೇಷ ಹಣ ಒದಗಿಸುವ ಪ್ರಯತ್ನ ಮಾಡ್ತೇವೆ ಎಂದರು.
ಹುಬ್ಬಳ್ಳಿ-ಧಾರವಾಡ ಹೈಕೋರ್ಟ್ನಲ್ಲಿ ವಕೀಲರಿಗೆ ಚೇಂಬರ್ಗಳನ್ನು ನಿರ್ಮಾಣ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವಕೀಲರ ಚೇಂಬರ್ಗಳ ವೀಕ್ಷಣೆಗೆ 12 ಶಾಸಕರು, ವಕೀಲರ ಜತೆ ಬಂದಿದ್ದೇನೆ. ಸುಪ್ರೀಂಕೋರ್ಟ್ಗೆ ಭೇಟಿ ನೀಡಿ, ವೀಕ್ಷಣೆ ಮಾಡ್ತೀವಿ. ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಸುಪ್ರೀಂಕೋರ್ಟ್ ಭೇಟಿ ಬಳಿಕ ಹೈಕಮಾಂಡ್ ನಾಯಕರ ಭೇಟಿ ಮಾಡುವ ಅವಕಾಶ ಸಿಕ್ಕರೆ ಮಾಡ್ತೀವಿ. ಇಲಾಖೆ ಕೆಲಸಗಳಿವೆ. ಹೀಗಾಗಿ, ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಡಿಕೆಶಿಯವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಇನ್ನು, ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಅಧಿಕಾರ ಹಂಚಿಕೆ ಕುರಿತ ಗೊಂದಲವನ್ನು ಬೇಗ ಬಗೆಹರಿಸಿ ಎಂದು ನಾವು ಹೈಕಮಾಂಡನ್ನು ಕೇಳಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.