
ಹುಬ್ಬಳ್ಳಿ (ಅ.12): ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ. ಯಾಕಾಗಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು. ಅವರು ಸಂಜೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ನಿಮಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆಯಾ? ಎಂಬ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿದ ರೀತಿಯಿದು. ಸಚಿವ ಸಂಪುಟ ವಿಸ್ತರಣೆ, ಪುನರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ ಹಾಗೂ ಅವರ ವಿವೇಚನೆಗ ಬಿಟ್ಟಿರುವ ವಿಚಾರ. ಸೂಕ್ತ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಎಲ್ಲ ಶಾಸಕರಿಗೂ ಸಚಿವರಾಗಬೇಕು ಎಂಬ ಆಸೆ ಇರುತ್ತದೆ. ಸಚಿವ ಸಂಪುಟ ಪುನರ್ ರಚನೆ, ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿ ಇನ್ನಿತರ ವಿಷಯಗಳ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು
ಮುಖ್ಯಮಂತ್ರಿಗಳು, ಸಚಿವರಿಗೆ ಔತಣಕೂಟ ಕರೆಯುವುದು ಸಾಮಾನ್ಯ. ಮುಖ್ಯಮಂತ್ರಿಗಳು ಶಾಸಕರಿಗೆ, ಸಚಿವರಿಗೆ ಸೋಮವಾರ ಊಟಕ್ಕೆ ಕರೆದಿದ್ದಾರೆ ಎನ್ನುವುದಕ್ಕೆ ಮಹತ್ವ ಕೊಡಬೇಕಾಗಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಯವರ ಮನಸ್ಥಿತಿ ಏನು ಎಂಬುದು ತಿಳಿಯುತ್ತದೆ. ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ಊಟಕ್ಕೆ ಕರೆದಿಲ್ಲ. ಪ್ರತಿ ಅಧಿವೇಶನದ ಸಂದರ್ಭದಲ್ಲೂ ಸಾಮಾನ್ಯವಾಗಿ ಊಟಕ್ಕೆ ಕರೆಯುತ್ತಾರೆ. ಇದೆಲ್ಲ ಸಾಮಾನ್ಯವಾಗಿ ನಡೆಯುವ ಪ್ರಕ್ರಿಯೆ. ಇದಕ್ಕೆ ವಿಶೇಷ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.
ನೇಮಕಾತಿ: ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇದ್ದು, 4,600 ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 545 ಪಿಎಸ್ಐಗಳ ನೇಮಕಾತಿ ಮಾಡಿ ಅವರಿಗೆ ತರಬೇತಿ ನೀಡಲಾಗುತ್ತಿದೆ. ಅಲ್ಲದೆ, ಹೊಸದಾಗಿ 402 ಪಿಎಸ್ಐ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಅದರ ಜತೆಗೆ ಇನ್ನೂ 600 ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.
ಒಳಮೀಸಲಾತಿ ಜಾರಿ ಸಂಬಂಧ ನೇಮಕಾತಿ ನಡೆದಿರಲಿಲ್ಲ. ಈಗ ಮತ್ತೆ ಎಲ್ಲ ಇಲಾಖೆಗಳಲ್ಲಿ ನೇಮಕಾತಿ ಆರಂಭಿಸಲಾಗುವುದು. ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು ಎಂದು ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಮಾರ್ಗಸೂಚಿ ಅನ್ವಯ, ಪಾರದರ್ಶಕವಾಗಿ ನೇಮಕಾತಿ ನಡೆಯಲಿದೆ. ಇನ್ಸ್ಪೆಕ್ಟರ್ಗಳನ್ನು ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡುವ ನಿಯಮ ಜಾರಿಗೆ ತರಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.