
ಕುಂದಾಪುರ (ಆ.05): ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಶುಕ್ರವಾರ ಸಂಜೆ ಬ್ರಹ್ಮಾವರ ಸಮೀಪದ ಅಮ್ಮುಂಜೆಯ ತಮ್ಮ ಮನೆಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪಕ್ಷದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ನಾನೇ ಅಭ್ಯರ್ಥಿ ಎಂಬ ಸ್ಪಷ್ಟತೆ ಇಲ್ಲ. ಪಕ್ಷದಿಂದ ಟಿಕೆಟ್ ನೀಡಿದಲ್ಲಿ ಎಲ್ಲರ ಆಶೀರ್ವಾದ ಪಡೆದು ಮತದಾರರ ಸಹಕಾರ ಕೋರಿ ಸ್ಪರ್ಧೆಗೆ ಇಳಿಯಲು ಸಿದ್ಧನಿದ್ದೇನೆ. ಟಿಕೆಟ್ ನೀಡದೇ ಇದ್ದರೆ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡೇ ಮಾಡುತ್ತೇವೆ: ಸಚಿವ ಮಂಕಾಳ ವೈದ್ಯ
ಪಕ್ಷ ಈವರೆಗೂ ಯಾವುದೇ ಪ್ರಮುಖ ಜವಾಬ್ದಾರಿ ನೀಡಿಲ್ಲ. ಆದರೆ ಕಾಲ ಕಾಲಕ್ಕೆ ಕೆಲವು ಜವಾಬ್ದಾರಿ ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾರವಾರ, ಭಟ್ಕಳ, ಹಾನಗಲ್, ಮೂಡಗಿರಿ , ಶೃಂಗೇರಿ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಸೇರಿ ಹಲವೆಡೆ ಕೆಲಸ ಮಾಡಿದ್ದೇನೆ. ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಹೀಗಾಗಿ ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸಲಿದ್ದೇನೆ. ಶಾಸಕನಾಗಿಯೂ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಿದ್ದೇನೆ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಪ್ರತಿನಿಧಿಸುವ ಮೂಲಕ ಸದ್ಯ ಕೇಂದ್ರದ ಸಚಿವೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. 2024ರ ಚುನಾವಣೆಯ ಬಗ್ಗೆ ಅವರು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಒಂದು ವೇಳೆ ಪಕ್ಷ ಅವರಿಗೆ ಟಿಕೆಟ್ ನೀಡಿದರೆ ನಾನು ಪಕ್ಷದ ಕಾರ್ಯಕರ್ತನಾಗಿ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಕೊನೆಯುಸಿರಿನ ತನಕವೂ ಬಿಜೆಪಿಗಾಗಿಯೇ ದುಡಿಯುತ್ತೇನೆ!: ನಾನು ಬಿಜೆಪಿಯನ್ನು ತೊರೆಯುತ್ತೇನೆ ಎಂದು ಹಲವರು ಅಪಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ನನ್ನ ರಾಜಕೀಯ ನಿವೃತ್ತಿ ಬಿಜೆಪಿಯಿಂದಲೇ ಆಗುತ್ತದೆ. ನನ್ನ ಕೊನೆಯುಸಿರು ಇರುವ ತನಕವೂ ಬಿಜೆಪಿಗಾಗಿ ದುಡಿಯುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಗೊಳಿಸಿ: ಸಚಿವ ನಾರಾಯಣಸ್ವಾಮಿ
ಬಿಜೆಪಿ ಸೇರಿ ತಪ್ಪು ಮಾಡಿದೆ ಎಂದು ಯಾವತ್ತೂ ಅನಿಸಿಲ್ಲ. ಉಳ್ಳಾಲ ಹೊರತುಪಡಿಸಿ ಇನ್ನು 20 ವರ್ಷ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕರೂ ಗೆಲ್ಲುವುದಿಲ್ಲ. ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಮಾಹಿತಿ ನನಗಿಲ್ಲ.
-ಪ್ರಮೋದ್ ಮಧ್ವರಾಜ್, ಬಿಜೆಪಿ ಮುಖಂಡ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.