
ಚಾಮರಾಜನಗರ (ಮಾ.17): ಈ ಬಾರಿಯ ಲೋಕಸಭಾ ಚುನಾವಣೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ೮ ರಿಂದ ೧೦ ಮಂದಿ ಆಕಾಂಕ್ಷಿಗಳಿದ್ದರು, ಪಕ್ಷ ನನ್ನನ್ನು ಪರಿಗಣಿಸಿ ಟಿಕೆಟ್ ನೀಡಿರುವುದಕ್ಕೆ ಋಣಿಯಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಹೇಳಿದರು.
ಬಿಜೆಪಿ ಗೆಲ್ಲುವ ವಾತಾವರಣವಿದೆ: ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಪರಿಕಲ್ಪನೆ, ಕಳೆದ ೧೦ ವರ್ಷದಲ್ಲಿ ದೇಶದಲ್ಲಾಗಿರುವ ಬದಲಾವಣೆ, ಭ್ರಷ್ಟಚಾರವಿಲ್ಲದ ಸಚಿವ ಸಂಪುಟ ಮತ್ತು ನಾನು ಹಿಂದೆ ಕೊಳ್ಳೇಗಾಲದ ಶಾಸಕನಾಗಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳಿಂದಾಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಪೂರಕವಾದ ವಾತಾವರಣವಿದೆ ಎಂದರು.
ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ: ರಮೇಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯು ರಾಷ್ಟ್ರೀಯ ವಿಚಾರವಾಗಿರುವುದರಿಂದ ಇದಕ್ಕೂ ಕಾಂಗ್ರೆಸ್ ಶಾಸಕರಿಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾಂಗ್ರೆಸ್ನಿಂದ ಯಾವುದೇ ತೊಂದರೆ ಆಗುವುದಿಲ್ಲ, ಕ್ಷೇತ್ರದ ೮ ಕ್ಷೇತ್ರಗಳ ಪೈಕಿ ೭ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರು ನನ್ನ ಗೆಲುವಿಗೆ ಯಾವುದೇ ಪರಿಣಾಮ ಬೀರುವುದಿಲ್ಲ. ಮಾಜಿ ಸಚಿವ ಎನ್.ಮಹೇಶ್, ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್ ನನ್ನ ಪರವಾಗಿದ್ದರು. ನಮ್ಮ ನಾಯಕರೆಲ್ಲರೂ ಸ್ಥಳೀಯ ಅಭ್ಯರ್ಥಿ ಬೇಕು ಎಂದು ಧನಿ ಎತ್ತಿದ್ದರು. ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ವಿ.ಶ್ರೀನಿವಾಸ್ ಪ್ರಸಾದ್ ಕೂಡ ನನಗೆ ಬೆಂಬಲ ಕೊಟ್ಟಿದ್ದಾರೆ.
ಹಿರಿಯರಾದ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪಕ್ಷದ ಎಲ್ಲಾ ಮುಖಂಡರ ಆಶೀರ್ವಾದದಿಂದ ಗೆಲುವು ದೊರೆಯಲಿದೆ. ಬಿಜೆಪಿ ನನಗೆ ಒಂದು ಒಳ್ಳೆಯ ಅವಕಾಶ ಕೊಟ್ಟಿದೆ. ಬೇರೆ ರಾಷ್ಟ್ರೀಯ ಪಕ್ಷದಲ್ಲಿ ಪ್ರೊಫೈಲ್ ಕೊಟ್ಟು ಅರ್ಜಿ ಹಾಕಬೇಕು. ಆದರೆ ಬಿಜೆಪಿಯಲ್ಲಿ ಪಕ್ಷದ ಕಾರ್ಯಕರ್ತರ, ಮುಖಂಡರ, ಸಮೀಕ್ಷೆ ವರದಿ ಪ್ರಕಾರ ಅಭ್ಯರ್ಥಿ ಘೋಷಣೆ ಮಾಡುತ್ತಾರೆ. ರಾಜ್ಯ ಸಮಿತಿ, ಕೇಂದ್ರ ಸಮಿತಿ ಎಲ್ಲಾ ಅಂಶಗಳನ್ನು ಪರಿಗಣಿಸಿ, ಸ್ಥಳೀಯ ಮುಖಂಡರ ಅಭಿಪ್ರಾಯಗಳನ್ನು ಪಡೆದು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು.
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಜಾತ್ಯಾತೀತ ಜನತಾದಳ ಕೂಡ ನಮಗೆ ಸಂಪೂರ್ಣ ಬೆಂಬಲ ಕೊಟ್ಟಿದೆ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡರು ಸಹಕಾರ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ, ಹೆಚ್ಡಿಕೆ ಕ್ಷೇತ್ರಕ್ಕೆ ಪ್ರಚಾರಕ್ಕೂ ಬರಲು ಒಪ್ಪಿದ್ದಾರೆ ಎಂದರು, ಕೊಳ್ಳೇಗಾಲ ಶಾಸಕನಾಗಿದ್ದಾಗ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕೊಳ್ಳೇಗಾಲ ಹಾಗೂ ಯಳಂದೂರು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ್ದೆ. ಅಲ್ಲದೇ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿದ್ದೆ. ಮುಂದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೂರ ದೃಷ್ಟಿ ಹೊಂದಿದ್ದೇನೆ. ಮತದಾರರು ಈ ಬಾರಿ ನನ್ನನ್ನು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಸಿಎಎ ವಿರೋಧಿಸುವ ಕಾಂಗ್ರೆಸ್ಗೆ ರಾಷ್ಟ್ರೀಯತೆಯ ಅರಿವಿಲ್ಲ: ಈಶ್ವರಪ್ಪ
ಜಿಲ್ಲೆ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಹೊಂದಿದೆ. ಆರೋಗ್ಯ, ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಿ. ಕ್ಷೇತ್ರದ ಅಭಿವೃದ್ಧಿಗೆ ಪರಿಣಾಮಕಾರಿ ಕೆಲಸ ಮಾಡುವ ಅಭಿಲಾಷೆ ಹೊಂದಿದ್ದೇನೆ. ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ದಿ.ರಾಜಶೇಖರಮೂರ್ತಿ ನನ್ನಂತ ಅನೇಕರನ್ನು ಹಿರಿಯ ನಾಯಕರು ಮುನ್ನೆಲ್ಲೆಗೆ ತಂದಿದ್ದಾರೆ. ಇವರನ್ನೆಲ್ಲಾ ಸ್ಮರಿಸುತ್ತಾ ನಾನು ಚುನಾವಣೆ ಪ್ರಚಾರ ಮಾಡುತ್ತೇನೆ ಎಂದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್, ಮಾಜಿ ಎಂಎಲ್ಸಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಮಾತನಾಡಿ, ಎಲ್ಲರೂ ಒಟ್ಟಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ ಎಂದರು, ಈ ವೇಳೆ ಪ್ರಭಾರಿ ಪಣೀಶ್, ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಉಪಾಧ್ಯಕ್ಷ ಮಂಗಲ ಶಿವಕುಮಾರ್ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.