
ಬೆಂಗಳೂರು (ಜು.22) ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿರುವಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ(Valmiki corporation scam)ದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದೆ. ಪೂರ್ಣ ತನಿಖೆಯಾದರೆ ಸಿದ್ದರಾಮಯ್ಯ(Siddaramaiah) ಅವರು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಕಾರಣಕ್ಕಾಗಿ ತಮ್ಮ ರಕ್ಷಣೆಗಾಗಿ ಬಿಜೆಪಿ(BJP) ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ಧರಿದ್ದೇವೆ. ಆದರೆ, ರಾಜಕೀಯ ದ್ವೇಷಕ್ಕಾಗಿ ಅಧಿಕಾರ ದುರುಪಯೋಗ ಆಗಬಾರದು ಎಂದರು.
ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ಧರಾಗಿ: ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ
ಎಪಿಎಂಸಿ(APMC scam) ಸಂಬಂಧ ನನ್ನ ವಿರುದ್ಧ ಆರೋಪ ಮಾಡಲಾಗಿದೆ. ಆದರೆ ನಾನು ಎಪಿಎಂಸಿ ಸಚಿವನಾಗಿರಲಿಲ್ಲ. ಗೃಹ ಸಚಿವನಾಗಿದ್ದೆ. ಎಪಿಎಂಸಿ ಪ್ರಕರಣದಲ್ಲಿ ತನಿಖೆ ನಡೆಸಿ ಬ್ಯಾಂಕಿನವರಿಂದ 48 ಕೋಟಿ ರು. ಜೊತೆಗೆ ಬಡ್ಡಿ ಸಮೇತ 52 ಕೋಟಿ ರು. ವಸೂಲಿ ಮಾಡಲಾಗಿತ್ತು. ಬೋವಿ ನಿಗಮದಲ್ಲಿ ಅವ್ಯವಹಾರ ಆಗಿದ್ದಾಗ ಅದನ್ನು ಸಿಐಡಿ ತನಿಖೆಗೆ ನಾವೇ ವಹಿಸಿದ್ದೇವೆ. ಅದರ ತನಿಖೆ ನಡೆಯುತ್ತಿದೆ. ಗಂಗಾ ಕಲ್ಯಾಣ ಯೋಜನೆ ದುರುಪಯೋಗದ ಆರೋಪ ಕೇಳಿ ಬಂದಾಗ ನಾನೇ ಸದನದಲ್ಲಿ ಸಿಐಡಿ ತನಿಖೆಗೆ ನೀಡಿದ್ದೇನೆ. ಅದರ ತನಿಖೆ ಕೊನೆ ಹಂತಕ್ಕೆ ಬಂದಿದೆ. ನಮ್ಮ ವಿರುದ್ದ 40% ಆರೋಪ ಮಾಡಿದ್ದರು. ಇದುವರೆಗೂ ಯಾವುದೇ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ನೊಟಿಸ್ ಕೊಟ್ಟಿಲ್ಲ. ರಾಜಕೀಯ ಉದ್ದೇಶದಿಂದ ಆಯೋಗ ಮಾಡಿದರೆ, ತನಿಖೆ ನಡೆಸಿದರೆ ಹೀಗೇ ಆಗುವುದು ಎಂದು ತಿರುಗೇಟು ನೀಡಿದರು.
ಇವತ್ತು ವಾಲ್ಮೀಕಿ ನಿಗಮ ಒಂದೇ ಅಲ್ಲ. ಎಲ್ಲ ಇಲಾಖೆಗಳಲ್ಲಿ ಹಗರಣ ಹೊರಬರುತ್ತಿವೆ. ಕೋಮುಲ್ನಿಂದ ಹಿಡಿದು ಪ್ರವಾಸೋದ್ಯಮ ಇಲಾಖೆ ಹಗರಣ ಎಲ್ಲವೂ ಹೊರ ಬರುತ್ತಿವೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಎನ್ನುವಂತಾಗಿದೆ. ಸ್ವಾತಂತ್ರ್ಯಾನಂತರ ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್ ಪಕ್ಷ. ಅವರು ಯಾವುದೇ ತನಿಖೆ ನಡೆಸಲಿ. ನಾವು ಅವರ ರೀತಿ ಇ.ಡಿ. ಯಾಕೆ, ಸಿಬಿಐ ಯಾಕೆ ಬಂತು ಅಂತ ಕೇಳುವುದಿಲ್ಲ. ನಾವು ಅವರ ಹಾಗೆ ಅಂಜುಬುರುಕರಲ್ಲ ಎಂದು ತೀಕ್ಷ್ಣವಾಗಿ ಹೇಳಿದರು.
ಉಪ ಚುನಾವಣೆಗೆ ಸಿದ್ಧ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬೊಮ್ಮಾಯಿ, ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳ ಉಪಚುನಾವಣೆಗೆ ನಾವು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.
ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಮಿತಿ ರಚನೆ ಮಾಡಿದ್ದಾರೆ. ಅವರು ಅಭಿಪ್ರಾಯ ಪಡೆದು ಅಭ್ಯರ್ಥಿ ಆಯ್ಕೆ ಮಾಡುತ್ತಾರೆ. ಯಾರೇ ಅಭ್ಯರ್ಥಿ ಮಾಡಿದರೂ ನಾವು ಮುಕ್ತವಾಗಿ ಕೆಲಸ ಮಾಡುತ್ತೇವೆ. ನನ್ನ ಮಗನನ್ನು ಅಭ್ಯರ್ಥಿ ಮಾಡುವಂತೆ ಯಾರೂ ಬಂದು ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಡಾ ಹಗರಣದಲ್ಲಿ ಸತ್ತವರ ಹೆಸರಲ್ಲೂ ಡಿನೋಟಿಫಿಕೇಶನ್: ಸಿಎಂ ವಿರುದ್ಧ ಎಚ್ಡಿಕೆ ಆರೋಪ
ನಾವೇ ತನಿಖೆಗೆ ಆದೇಶಿಸಿದ್ದೇವೆ:
ಎಪಿಎಂಸಿ ಪ್ರಕರಣ, ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ, ಗಂಗಾಕಲ್ಯಾಣ ಯೋಜನೆ ಹಣ ದುರುಪಯೋಗ ಆರೋಪದ ಬಗ್ಗೆ ನಾವೇ ತನಿಖೆಗೆ ಆದೇಶಿಸಿದ್ದೇವೆ. ಈಗ ತಮ್ಮ ರಕ್ಷಣೆಗಾಗಿ ಕಾಂಗ್ರೆಸ್ನವರು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ.
- ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.