
ಹಾವೇರಿ : ‘ಜನರ ಆಶೀರ್ವಾದದಿಂದ ಇಲ್ಲಿವರೆಗೂ ಬಂದಿದ್ದೇನೆ. ಇನ್ನೆಷ್ಟು ದಿನ ನಾನು ಅಧಿಕಾರದಲ್ಲಿ ಇರ್ತೀನೋ ಗೊತ್ತಿಲ್ಲ. ಈ ವಿಷಯದಲ್ಲಿ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧ. ಆದರೆ, ನನ್ನ ಆಡಳಿತ ನನಗೆ ತೃಪ್ತಿ ತಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಒಂದೆಡೆ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಹಸರತ್ತು ನಡೆದಿದೆ. ಇದರ ನಡುವೆ, ‘ರಾಜ್ಯದ ಅತಿ ಸುದೀರ್ಘ ಸಿಎಂ’ ಎಂಬ ದೇವರಾಜ ಅರಸು ದಾಖಲೆಯನ್ನು ಬುಧವಾರ ಸಿದ್ದು ಮುರಿದಿದ್ದಾರೆ. ಈ ದಿನವೇ ಅವರು ನೀಡಿದ ಈ ಹೇಳಿಕೆ ನಾನಾ ಚರ್ಚೆಗೆ ನಾಂದಿ ಹಾಡಿದೆ.
ಹಾವೇರಿಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಅರಸು ದಾಖಲೆ ಮುರಿದ ಬಗ್ಗೆ ಪ್ರತಿಕ್ರಿಯಿಸಿ, ‘ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದೇನೆ. ಜನರ ಆಶೀರ್ವಾದ ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ’ ಎಂದರು.ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿ, ‘ಇನ್ನೆಷ್ಟು ದಿನ ನಾನು ಅಧಿಕಾರದಲ್ಲಿ ಇರ್ತೀನೋ ಗೊತ್ತಿಲ್ಲ. ಈ ವಿಷಯದಲ್ಲಿ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧ. ಆದರೆ, ನನ್ನ ಈವರೆಗಿನ ಆಡಳಿತ ನನಗೆ ತೃಪ್ತಿ ತಂದಿದೆ’ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗಿನ ನಡುವೆಯೇ ಸಿದ್ದರಾಮಯ್ಯನವರು ರಾಜ್ಯದ ಸುದೀರ್ಘ ಅವಧಿಯ ಸಿಎಂ ಆಗಿ ಅರಸು ದಾಖಲೆಯನ್ನು ಮುರಿದಿದಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಾಡಿದ ಈ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಬಳಿಕ, ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಿಎಂ, ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು ₹500 ಕೋಟಿ ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ, ಈಗ ಇದರ ಉದ್ಘಾಟನೆಯನ್ನೂ ನಾನೇ ಮಾಡುತ್ತಿದ್ದೇನೆ. ಈಗಾಗಲೇ ಈ ಕಾಲೇಜಿನಲ್ಲಿ ಮೂರನೇ ಬ್ಯಾಚ್ ನಡೆಯುತ್ತಿದೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜನ್ನು ಪೂರ್ಣಗೊಳಿಸಲಿಲ್ಲ. ಇದನ್ನು ನಾವು ಅಧಿಕಾರಕ್ಕೆ ಬಂದು ಪೂರ್ಣಗೊಳಿಸಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.