
ಬೆಂಗಳೂರು (ಜು.18): ಸಂಸದ ಗೋವಿಂದ ಕಾರಜೋಳ ಅವರು ನಮ್ಮ ಪಕ್ಷದ ಹಿರಿಯರು. ಉಪಮುಖ್ಯಮಂತ್ರಿಗಳಾಗಿ ಪ್ರಸ್ತುತ ಸಂಸದರಾಗಿದ್ದಾರೆ. ಭವಿಷ್ಯತ್ತಿನಲ್ಲಿ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲಾ ಅವಕಾಶಗಳ ಬಾಗಿಲು ಅವರಿಗಾಗಿ ತೆರೆದೇ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ. ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರಿಗೆ ಗೌರವ ಕೊಡುವುದನ್ನು ನಾವು ನಿಮ್ಮಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಸಾಮಾಜಿಕ ನ್ಯಾಯ, ಮೀಸಲಾತಿ, ಸಂವಿಧಾನದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು ಮತ್ತು ನಿಮ್ಮ ಕಾಂಗ್ರೆಸ್ಸಿನ ಅಸಲಿ ಮುಖವಾಡ ಏನೆಂಬುದು ರಾಜ್ಯದ ಹಾಗೂ ದೇಶದ ಜನತೆಗೆ ತಿಳಿಯಲಿ ಎಂಬ ಕಾರಣದಿಂದ ಅತ್ಯಂತ ಗೌರವದಿಂದ ನಿಮ್ಮ ಕಾಳಜಿ ನೈಜವೇ ಆಗಿದ್ದರೆ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಿ ಎಂಬ ಸಲಹೆ ನೀಡಿದ್ದೆ, ಆ ಸಲಹೆಯನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸುವ ಬದಲು ಹತಾಶೆಯಿಂದ ಸಮರ್ಥನೀಯವಲ್ಲದ ಉತ್ತರ ನೀಡಿದ್ದೀರಿ ಎಂದು ವಿಜಯೇಂದ್ರ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶವಿದ್ದರೂ ಅವರ ಹಿರಿತನ ಬದಿಗೆ ಸರಿಸಿ ಮುಖ್ಯಮಂತ್ರಿ ಸ್ಥಾನ ನೀಡದೇ ವಂಚಿಸಿದ್ದು ಕಾಂಗ್ರೆಸ್ ಅಲ್ಲವೇ? ಕರ್ನಾಟಕದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅರ್ಹ ನಾಯಕರು ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದವರು ಯಾರು? ಎಂಬ ಪ್ರಶ್ನೆಗೆ ಇತಿಹಾಸದ ಪುಟಗಳಲ್ಲಿ ಉತ್ತರ ಶಾಶ್ವತವಾಗಿ ಅಚ್ಚೊತ್ತಿದೆ. ನಿಮ್ಮ ‘ಅಹಿಂದ ಕಾಳಜಿ’ ಏನೆಂಬುದು ನಾಡಿನ ಎಲ್ಲಾ ಸಮುದಾಯಗಳಿಗೆ ಸ್ಪಷ್ಟವಾಗಿ ಗೊತ್ತಿದೆ. ಯಾವುದೇ ಕ್ಷಣದಲ್ಲಿ ಅದು ಸ್ಫೋಟಗೊಳ್ಳಲಿದೆ, ಅದಕ್ಕಾಗಿ ದಿನಗಣನೆ ಆರಂಭವಾಗಿದೆ ಎಂದಿದ್ದಾರೆ.
ನಿಮ್ಮ ಕಾಂಗ್ರೆಸ್ ಪಕ್ಷದಲ್ಲಿ ಅಸಡ್ಡೆಗೊಳಗಾಗಿದ್ದ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿಯ ಪ್ರವೇಶ ದ್ವಾರದಲ್ಲೇ ಸ್ವಾಗತದೊಂದಿಗೆ ಪಕ್ಷದ ಸಂಘಟನೆಯ ಮಹತ್ವದ ಹುದ್ದೆ ನೀಡಲಾಯಿತು. ವಿಧಾನಪರಿಷತ್ತಿಗೆ ಕಳುಹಿಸಿ ಸಾಂವಿಧಾನಿಕ ಹುದ್ದೆಯಾದ ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿ ಕುಳ್ಳಿರಿಸಿ ಅವರ ಅರ್ಹತೆ ಹಾಗೂ ಸಾಮರ್ಥ್ಯಕ್ಕೆ ತಕ್ಕಂತೆ ಗೌರವಿಸಿದ್ದೇವೆ ಎಂದು ವಿಜಯೇಂದ್ರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.