
ದಾವಣಗೆರೆ (ಅ.26): ನಾನಂತೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಹೈಕಮಾಂಡ್ ಸೂಕ್ತ ವ್ಯಕ್ತಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಿದೆ. ಯಾರೇ ಅಧ್ಯಕ್ಷರಾದರೂ ಸ್ವಾಗತಿಸುತ್ತೇನೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಹೇಳಿದರು. ಇಲ್ಲಿನ ದೃಶ್ಯಕಲಾ ವಿದ್ಯಾಲಯದ ಆವರಣದಲ್ಲಿ ಬುಧವಾರ ಸ್ಮಾರ್ಟ್ ಸಿಟಿ ಯೋಜನೆಯಡಿ 6 ಕೋಟಿ ರು. ವೆಚ್ಚದಲ್ಲಿ ನಿರ್ಮಿಸುತ್ತಿರುವ ಥೀಮ್ಪಾರ್ಕ್ ಹಾಗೂ ಓಪನ್ ಏರ್ ಥಿಯೇಟರ್ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು ಎಂಬುದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ವರಿಷ್ಠರು ನಿರ್ಧಾರ ಮಾಡುತ್ತಾರೆ.
ಶೋಭಾ ಕರಂದ್ಲಾಜೆ, ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ ಸೇರಿದಂತೆ ಯಾರೇ ರಾಜ್ಯಾಧ್ಯಕ್ಷರಾದರೂ ನಾನು ಸ್ವಾಗತಿಸುತ್ತೇನೆ ಎಂದರು. ಹೊಂದಾಣಿಕೆ ರಾಜಕೀಯ ಎಂಬುದು ನನಗೆ ಗೊತ್ತಿಲ್ಲ. ಶಾಮನೂರು ಫ್ಯಾಮಿಲಿ ಜೊತೆಗೆ ಅಡ್ಜಸ್ಟ್ಮೆಂಟ್ ಮಾಡಿಕೊಂಡಿದ್ದೇವೆ ಅಂತಾ ಯಾರಾದರೂ ಹೇಳಿದರೆ ಅದಕ್ಕೆ ನಾನೇನೂ ಮಾಡಲಾಗದು. ಅದನ್ನೆಲ್ಲಾ ನಾವು ಮಾಡುವುದಿಲ್ಲ. ಕಾಂಗ್ರೆಸ್ಸಿನ ಶಾಮನೂರು ಶಿವಶಂಕರಪ್ಪ ಹಿರಿಯರು, ವೈಯಕ್ತಿಕ ಸಂಬಂಧ ಬೇರೆ, ರಾಜಕೀಯ ಬೇರೆ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ದೂಡಾ ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ, ಪಾಲಿಕೆ ವಿಪಕ್ಷ ನಾಯಕ ಪ್ರಸನ್ನಕುಮಾರ, ಜೆಪಿ, ಮಾಜಿ ಮೇಯರ್ ಎಸ್.ಟಿ. ವೀರೇಶ, ಶಿವಕುಮಾರ್ ಸೇರಿದಂತೆ ಇತರರು ಇದ್ದರು.
ನನಗೆ 61 ಮುಂದೆ 100 ಆದರು ನನ್ನ ಅಮ್ಮನೇ ನನ್ನ ದೇವರು: ಹುಲಿ ಉಗುರು ಸಂಕಟ ಬಿಚ್ಚಿಟ್ಟ ನಟ ಜಗ್ಗೇಶ್!
ರಾಜಕೀಯವಾಗಿ ನನ್ನ ಮುಗಿಸಲು ಸಿದ್ದೇಶ್ವರ ಯತ್ನ: ಬಿಜೆಪಿಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರಗಿಂತ ನಾನು ಸೀನಿಯರ್. ವಯಸ್ಸಿನಲ್ಲಿ ಹಿರಿಯರಾದ ಸಿದ್ದೇಶ್ವರರ ಬಗ್ಗೆ ನನಗೆ ಗೌರವವಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾನೂ ಆಕಾಂಕ್ಷಿ ಅಂದ ದಿನದಿಂದಲೂ ನನ್ನನ್ನು ರಾಜಕೀಯವಾಗಿ ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕಸಭೆ ಚುನಾವಣೆಗೆ ಪಕ್ಷದಿಂದ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಅಭ್ಯರ್ಥಿ ಯಾರೆಂಬುದೂ ಘೋಷಣೆಯಾಗಿಲ್ಲ. ನಾನೂ ಓರ್ವ ಆಕಾಂಕ್ಷಿ ಅಂದಾಗಿನಿಂದಲೂ ನನ್ನನ್ನು ರಾಜಕೀಯವಾಗಿ ಮುಗಿಸಲು ಸಿದ್ದೇಶ್ವರ ಪ್ರಯತ್ನಿಸುತ್ತಿದ್ದಾರೆ ಎಂದರು. ಸಿದ್ದೇಶ್ವರರ ತಂದೆ ದಿವಂಗತ ಜಿ.ಮಲ್ಲಿಕಾರ್ಜುನಪ್ಪನವರ 3 ಚುನಾವಣೆ, ಸ್ವತಃ ಸಿದ್ದೇಶ್ವರರ 4 ಲೋಕಸಭೆ ಚುನಾವಣೆಯಲ್ಲಿ ನಾನು ಕೆಲಸ ಮಾಡಿದ್ದೇನೆ. ಆದರೆ, ಬಹಳಷ್ಟು ಜನರನ್ನು ಮೂಲೆಗುಂಪು ಮಾಡುವ ಕೆಲಸವನ್ನು ಮಾಡುತ್ತಲೇ ಇದ್ದಾರೆ. ವಿನಾಕಾರಣ ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.
ಬೆಂಗಳೂರಿಗೆ ರಾಮನಗರವನ್ನು ಸೇರಿಸಿದರೆ ರೈತರ ಕೃಷಿಭೂಮಿಗೆ ಸಂಚಕಾರ: ಅಶ್ವತ್ಥ ನಾರಾಯಣ
ಸರ್ವಾಧಿಕಾರಿ ಧೋರಣೆಗೆ ಖಂಡನೆ: ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ನಂತರ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡರ ಸೇರಿ ಎಲ್ಲರನ್ನೂ ರಾಜಕೀಯವಾಗಿ ಮುಗಿಸುವ ಕೆಲಸವನ್ನು ಸಿದ್ದೇಶ್ವರ ಮಾಡಿದ್ದಾರೆ. ಪಕ್ಷದಲ್ಲಿ ಇಂತಹ ಸರ್ವಾಧಿಕಾರಿ ಧೋರಣೆಯನ್ನು ನಾನು ಖಂಡಿಸಿದ್ದೇನೆ. ಇದಕ್ಕಾಗಿ ವ್ಯವಸ್ಥಿತವಾಗಿ ನನ್ನನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.