
ಬೆಂಗಳೂರು: ಕಾವೇರಿ ಜಲ ವಿವಾದ ಮತ್ತು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ, ಆಗಸ್ಟ್ 3 ರಂದು ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಬೆಂಗಳೂರು ಭೇಟಿಯನ್ನು ಮುಂದೂಡಲು ನಿರ್ಧರಿಸಲಾಗಿದೆ.
ಕನ್ನಡಪರ ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆ ಈ ಭೇಟಿಯನ್ನು ಮುಂದೂಡಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಉದ್ವಿಗ್ನ ವಾತಾವರಣದಲ್ಲಿ ಅವರನ್ನು ನಮ್ಮ ರಾಜ್ಯಕ್ಕೆ ಕರೆಸಿ, ಇಲ್ಲಿ ಪ್ರತಿಭಟನೆಗಳು ನಡೆದರೆ ನನಗೆ ಸಮಾಧಾನ ಕಾಣುತ್ತಿಲ್ಲ ಎಂದು ಸಿಎಂ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಅವರು ಬೆಂಗಳೂರಿಗೆ ಬರುವ ಕುರಿತು ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದವು. ಸದ್ಯ ಕಾವೇರಿ ನೀರು ಬಿಡುವ ವಿಚಾರವಾಗಿ ಕೆಲವು ಕನ್ನಡಪರ ಸಂಘಟನೆಗಳು ಹಾಗೂ ಬಿಜೆಪಿ ಸ್ನೇಹಿತರು ಹೋರಾಟ ನಡೆಸುತ್ತಿದ್ದಾರೆ. ಹೋರಾಟ ಮಾಡಬೇಡಿ ಎಂದು ನಾನು ಯಾರಿಗೂ ಹೇಳುವುದಿಲ್ಲ. ಆದರೆ, ವಿಜಯ್ ಅವರು ನಮ್ಮ ರಾಜ್ಯಕ್ಕೆ ಬರುತ್ತಿರುವ ಅತಿಥಿ. ನಾವು ಶಾಂತಿಪ್ರಿಯರು. ಬೇರೆ ರಾಜ್ಯದ ಅತಿಥಿಗಳು ಬಂದಾಗ ಇಲ್ಲಿ ಯಾವುದೇ ಗಲಾಟೆ ಆಗಬಾರದು. ಹೀಗಾಗಿ ಸೌಹಾರ್ದಯುತ ವಾತಾವರಣ ನಿರ್ಮಾಣವಾಗುವವರೆಗೆ ಸಭೆಯನ್ನು ಮುಂದೂಡುವಂತೆ ಅವರಿಗೆ ರಿಕ್ವೆಸ್ಟ್ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ರಾಜ್ಯದ ಜಲಾಶಯಗಳ ಪರಿಸ್ಥಿತಿಯನ್ನು ವಿವರಿಸಿದ ಸಿಎಂ, ಇಂತಹ ಕಠಿಣ ಸಂದರ್ಭದಲ್ಲಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡಲು ನಮಗೆ ಸಾಧ್ಯವೇ ಇಲ್ಲ. ನಾವು ನಮ್ಮ ರಾಜ್ಯದ ಹಿತಾಸಕ್ತಿಗೆ ಏನು ಬೇಕೋ ಅದನ್ನು ಮಾಡಿಕೊಳ್ಳುತ್ತೇವೆ. 100 ವರ್ಷಗಳ ಇತಿಹಾಸದಲ್ಲೇ ಜುಲೈ ತಿಂಗಳಲ್ಲಿ ಅತ್ಯಂತ ಕಡಿಮೆ ಅಂದರೆ ಕೇವಲ 0.6 ಟಿಎಂಸಿ ನೀರನ್ನು ಮಾತ್ರ ನಾವು ಹರಿಸಿದ್ದೇವೆ. ಪ್ರಸ್ತುತ ನಮ್ಮ ಯಾವುದೇ ಡ್ಯಾಂಗಳಿಂದಲೂ ನೀರು ಬಿಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಅವರು ಕೆಲವು ಕ್ಲಾರಿಫಿಕೇಶನ್ಗಳನ್ನು ಕೇಳಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ನಾವು ಮಾಡಿಕೊಳ್ಳುತ್ತೇವೆ. ವಾಸ್ತವವಾಗಿ ಮೇಕೆದಾಟು ಯೋಜನೆ ನಮಗಿಂತ ಹೆಚ್ಚಾಗಿ ತಮಿಳುನಾಡಿಗೇ ಹೆಚ್ಚು ಅನುಕೂಲಕರವಾಗಿದೆ. ಉತ್ತಮ ಮತ್ತು ಸೌಹಾರ್ದಯುತ ವಾತಾವರಣದಲ್ಲಿ ಉಭಯ ರಾಜ್ಯಗಳ ಹಿತಕ್ಕಾಗಿ ಸಭೆ ನಡೆಸೋಣ ಎಂದು ನಾನು ವಿಜಯ್ ಅವರಿಗೆ ತಿಳಿಸುತ್ತೇನೆ ಎಂದಿದ್ದಾರೆ. ಆಗಸ್ಟ್ 13 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ದಯವಿಟ್ಟು ಇಂತಹ ಬಂದ್ ತೀರ್ಮಾನಗಳನ್ನು ಕೈಗೊಳ್ಳಬಾರದು ಎಂದು ಸರ್ಕಾರದ ಪರವಾಗಿ ವಿನಂತಿಸುತ್ತೇನೆ. ನಮ್ಮ ಸರ್ಕಾರ ಸದಾ ರೈತರ ಹಿತಕ್ಕಾಗಿಯೇ ಕೆಲಸ ಮಾಡಿಕೊಂಡು ಬಂದಿದೆ. ನಾವು ಸದಾ ನಿಮ್ಮ ಪರವಾಗಿಯೇ ಇದ್ದೇವೆ. ನಿಮ್ಮ ಹಿತಾಸಕ್ತಿಗೆ ವಿರುದ್ಧವಾಗಿ ನಾವೇನೂ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಈ ವಿಷಯದ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆಯನ್ನು ಕರೆದಿದ್ದೇನೆ. ವಿರೋಧ ಪಕ್ಷದ ನಾಯಕರು ಸಭೆಗೆ ಬಂದು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಲಿ. ಅವರ ಸಲಹೆಗಳನ್ನು ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಕಾವೇರಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದಾದರೆ ಅದು ಅವರಿಗೂ ಹಿತ, ನಮಗೂ ಹಿತ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.