ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ: ಬಿ.ವೈ.ವಿಜಯೇಂದ್ರ

Kannadaprabha News   | Kannada Prabha
Published : May 25, 2025, 11:55 AM IST
Karnataka BJP President BY Vijayendra (Photo/ANI)

ಸಾರಾಂಶ

ರಾಜ್ಯ ವಿಧಾನಸಭೆಗೆ ಈಗ ಚುನಾವಣೆ ನಡೆದರೆ ಬಿಜೆಪಿ 150-160 ಸ್ಥಾನ ಗೆಲ್ಲುತ್ತೆ ಎಂದು ಖಾಸಗಿ ಸಮೀಕ್ಷೆಯೊಂದು ಹೇಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕಲಬುರಗಿ (ಮೇ.25): ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಹೀಗಾಗಿ, ಜನ ಬೇಸರಗೊಂಡಿದ್ದಾರೆ. ರಾಜ್ಯ ವಿಧಾನಸಭೆಗೆ ಈಗ ಚುನಾವಣೆ ನಡೆದರೆ ಬಿಜೆಪಿ 150-160 ಸ್ಥಾನ ಗೆಲ್ಲುತ್ತೆ ಎಂದು ಖಾಸಗಿ ಸಮೀಕ್ಷೆಯೊಂದು ಹೇಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಛಲವಾದಿ ನಾರಾಯಣಸ್ವಾಮಿಯವರ ಗೃಹಬಂಧನ ಖಂಡಿಸಿ, ಬಿಜೆಪಿ ಹಮ್ಮಿಕೊಂಡಿದ್ದ ಕಲಬುರಗಿ ಚಲೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆಪರೇಷನ್ ಸಿಂದೂರದ ಬಗ್ಗೆ ಇಡೀ ಜಗತ್ತೆ ಮೆಚ್ಚಿದೆ. ಆದರೆ, ಕಾಂಗ್ರೆಸ್ ನವರು ಮಾತ್ರ ಅಪಸ್ವರದ ಬಗ್ಗೆ ಮಾತನಾಡುತ್ತಿದ್ದಾರೆ.

‘ನಮ್ಮ ಪಾಕಿಸ್ತಾನ’ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಹೇಳ್ತಾರೆ. ಇದನ್ನು ಪ್ರಶ್ನೆ ಮಾಡಿದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಈ ರೀತಿ ಅವಮಾನ ಮಾಡೋದಾ? ಎಂದು ಅವರು ಪ್ರಶ್ನಿಸಿದರು. ಅಧಿಕಾರ ಶಾಶ್ವತ ಅಲ್ಲ ಪ್ರಿಯಾಂಕ್‌ ಖರ್ಗೆಯವರೇ, ನಿಮ್ಮ ದರ್ಪ, ಸೊಕ್ಕು ಮುರಿಯುವ ಕೆಲಸವನ್ನು ಈ ಭಾಗದ ಜನ ಮಾಡ್ತಾರೆ. ನಿಮ್ಮ‌ ತಂದೆ ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅಂತಹ ನಾಯಕನ ಮಗನಾಗಿ ನಿಮ್ಮ ನಡವಳಿಕೆ ಅಕ್ಷಮ್ಯ ಅಪರಾಧ ಎಂದು ಕಿಡಿ ಕಾರಿದರು. ನನಗೆ ಪ್ರಿಯಾಂಕ್‌ ಖರ್ಗೆ ಬಗ್ಗೆ ಮರುಕವಿದೆ, ಅಭಿವೃದ್ಧಿಗೆಂದು ಜನ ಇವರನ್ನು ಗೆಲ್ಲಿಸಿದ್ರೆ ಇವರು ಬರೀ ಟೀಕೆಯಲ್ಲೇ ಕಾಲಹರಣ ಮಾಡ್ತಿದ್ದಾರೆ. ಇಲ್ಲಿನ ಪಿಯುಸಿ, ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿದರೇನೆ ಇವರ ಪ್ರಗತಿಪರ ಚಿಂತನೆ ಅರ್ಥವಾಗುತ್ತದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ಸಿಗರು ಹೊಣೆ ಅರಿತು ಮಾತನಾಡಲಿ: ಪಹಲ್ಗಾಂ ಉಗ್ರ ದಾಳಿ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ಹೊಣೆ ಅರಿತು ಮಾತನಾಡಬೇಕು ಎಂದು ತಾಕೀತು ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅರವತ್ತು ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಿಂದ ಭಯೋತ್ಪಾದನೆಯನ್ನು ಕಿತ್ತು ಹಾಕಲು ಯಾಕೆ ಸಾಧ್ಯವಾಗಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಸಿದ್ದರಾಮಯ್ಯನವರೇ, ನೀವು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಬೇಕಿದೆ ಎಂದರು.

ಇದರ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರೂ ಒಟ್ಟಾಗಿ ನಿಲ್ಲಬೇಕಾಗಿದೆ. ಈ ಜಗತ್ತಿಗೆ ಒಂದು ಸ್ಪಷ್ಟ ಸಂದೇಶ ನೀಡಬೇಕಾಗಿದೆ. ಭಯೋತ್ಪಾದನೆ ಎಂಬುದು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ. ಇದು ಜಾಗತಿಕ ಸಮಸ್ಯೆ. ಹಾಗಾಗಿ ಪ್ರಧಾನಿ ಮೋದಿ ಅವರು ಯಾವುದೇ ದೇಶಕ್ಕೆ ಹೋದಾಗಲೂ ಉಗ್ರವಾದವನ್ನು ಜಗತ್ತು ಖಂಡಿಸಬೇಕು, ಬುಡಸಮೇತ ಕಿತ್ತು ಹಾಕಬೇಕೆಂದು ಬಲವಾಗಿ ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು