
ಶಿಕಾರಿಪುರ (ಜೂ.26): ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತದಾರರ ಮನಸ್ಸು ಮುಟ್ಟುವ ರೀತಿ ತಿಳಿಸುವ ಮೂಲಕ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕರೆ ನೀಡಿದರು. ತಾಲೂಕಿನ ಚುರ್ಚುಗುಂಡಿ ಗ್ರಾಮದ ಶ್ರೀ ಸಂಗಮೇಶ್ವರ ಸಮುದಾಯ ಭವನದಲ್ಲಿ ವಿಕಸಿತ ಭಾರತ ಸಂಕಲ್ಪ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ಅತ್ಯಂತ ಪ್ರಬಲ ಪ್ರಧಾನಿಯಾಗಿ ನರೇಂದ್ರ ಮೋದಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯತೆಯ ಆಧಾರದ ಮೇಲೆ ಸ್ಥಾಪಿತವಾದ ಪಕ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ರಕ್ಷಣೆ ಮಾಡುತ್ತಿದ್ದಾರೆ. ದೇಶದ ಹಿತಕ್ಕಾಗಿ ಆಡಳಿತ ನಡೆಸುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ, ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ದೇಶ ವಿಕಸಿತ ಭಾರತವಾಗುತ್ತಿದೆ ಎಂದು ಶ್ಲಾಘಿಸಿದರು.
ಸಂವಿಧಾನದ ಪೀಠಿಕೆ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಸಂವಿಧಾನ ರಚನೆ ಮಾಡಿದ ಡಾ.ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಅವರ ಮೃತದೇಹದ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಭೂಮಿಯನ್ನು ನೀಡಲಿಲ್ಲ ಎಂದು ದೂರಿದ ಅವರು, ಬಿಜೆಪಿ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನೀಡಿದೆ. ಅಂಬೇಡ್ಕರ್ ಸಮಾಧಿ, ಲಂಡನ್ನಿನಲ್ಲಿ ಅವರು ವಿದ್ಯಾಭ್ಯಾಸ ಪಡೆದ ಕಾಲೇಜಿನ ಕಟ್ಟಡದ ಅಭಿವೃದ್ಧಿಗೆ ಮುಂದಾಗಿದೆ ಎಂದು ಅವರು ತಿಳಿಸಿದರು.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ, ದಿಶಾ ಸಮಿತಿ ಸದಸ್ಯ ಕೆ.ಎಸ್.ಗುರುಮೂರ್ತಿ ಮಾತನಾಡಿ, ಬಿಜೆಪಿ ರಾಷ್ಟ್ರೀಯತೆ ಹಾಗೂ ಹಿಂದುತ್ವ ಸಿದ್ಧಾಂತದ ಆಧಾರದ ಮೇಲೆ ಸ್ಥಾಪಿತವಾದ ಪಕ್ಷವಾಗಿದೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದೇಶವೇ ಮೊದಲು ಎಂಬ ಸಂಕಲ್ಪವನ್ನು ಹೊಂದಬೇಕು. ರಾಷ್ಟ್ರೀಯ ಪಕ್ಷದ ಕಾರ್ಯಕರ್ತರಾಗಿ ಜವಾಬ್ದಾರಿಯುತವಾಗಿ ಪಕ್ಷ ಸಂಘಟನೆ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಪ್ರ.ಕಾ.ಅಶೋಕ್ ಮಾರವಳ್ಳಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿದೇವಿ, ಪ್ರಧಾನ ಕಾರ್ಯದರ್ಶಿ ಮಂಗಳ, ರೈತ ಮೋರ್ಚಾ ಅಧ್ಯಕ್ಷ ನಿಂಬೆಗೊಂದಿ ಸಿದ್ದಲಿಂಗಪ್ಪ, ಮುಖಂಡ ಟಿ.ರಾಮನಾಯ್ಕ, ವಸಂತಗೌಡ್ರು, ಹುಲ್ಮಾರ್ ಮಹೇಶ್, ಚನ್ನವೀರಪ್ಪ, ಶಶಿಧರ ಚುರ್ಚುಗುಂಡಿ, ಎ.ಬಿ.ಸುಧೀರ್, ಗಣೇಶ್ ನಾಗೀಹಳ್ಳಿ, ಲೋಹಿತನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.