ಪ್ರಧಾನಿ ಮೋದಿಯೊಂದಿಗೆ ಕೈ ಜೋಡಿಸುತ್ತಾರಾ ಎಚ್.ಡಿ.ಕುಮಾರಸ್ವಾಮಿ?

By Kannadaprabha NewsFirst Published Oct 29, 2019, 8:47 AM IST
Highlights

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಿಢೀರ್ ಬಿಜೆಪಿಯೆಡೆಗೆ ಮೃದು ಧೋರಣೆ ತಾಳಿದ್ದಾರೆ. ಇದಕ್ಕೆ ಕಾರಣಗಳೇನೋ ಗೊತ್ತಿಲ್ಲ. ಒಟ್ಟಿನಲ್ಲಿ ಬಿಜೆಪಿ ಸರಕಾರ ಬೀಳಲು ಬಿಡೋಲ್ಲ ಎನ್ನುತ್ತಿದ್ದಾರೆ. ಜತೆಗೆ ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಸುದ್ದಿಗೆ ಎಚ್‌ಡಿಕೆ ಹೇಳಿದ್ದಿಷ್ಟು....

ಬೆಂಗಳೂರು (ಅ.29): ಉಪ ಚುನಾವಣೆ ನಂತರ ರಾಜ್ಯ ಬಿಜೆಪಿ ಸರ್ಕಾರ ಬಿದ್ದು ಹೋಗುತ್ತೆ, ನಂತರ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಕೆಲವರು ಕನಸು ಕಾಣುತ್ತಿದ್ದಾರೆ. ಆದರೆ, ಸದ್ಯದ ಸ್ಥಿತಿಯಲ್ಲಿ ಚುನಾವಣೆ ಸರಿಯಲ್ಲ. ಒಂದು ವೇಳೆ ಸರ್ಕಾರ ಪತನವಾದರೂ ಯಾರು ನೆರೆ ಸಂತ್ರಸ್ತರ ಕಷ್ಟಕ್ಕೆ ಸ್ಪಂದಿಸುತ್ತಾರೋ ಅವರಿಗೆ ಬೆಂಬಲ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ, ಹಾವೇರಿ ಮತ್ತು ಗದಗದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ ನಾನೆಲ್ಲೂ ಬಿಜೆಪಿಗೆ ಬೆಂಬಲ ಕೊಡುತ್ತೇನೆ ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು. ನಾನು ಬಿಜೆಪಿ ಬಗ್ಗೆ ಸಾಫ್ಟ್‌ ಕಾರ್ನರ್‌ ಆಗಿದ್ದೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ನಾನು ಯಾರ ಬಗ್ಗೆಯೂ ಸಾಫ್ಟ್‌ ಕಾರ್ನರ್‌ ಆಗುವ ಪ್ರಶ್ನೆಯೇ ಇಲ್ಲ. ಸರ್ಕಾರವಿದ್ದರೆ ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಬಹುದು ಎಂಬುದಷ್ಟೇ ನನ್ನ ಅಭಿಪ್ರಾಯ. ಈ ಹಿನ್ನೆಲೆಯಲ್ಲಿ ಯಾವುದೇ ಪಕ್ಷದ ಸರ್ಕಾರವಿರಲಿ, ಮೊದಲು ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಮಾತನಾಡಿದರೆ, ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇನೆ. ಸಾಫ್ಟ್‌ ಕಾರ್ನರ್‌ ಆಗಿದ್ದೇನೆ ಎಂದು ಹೇಳಲಾಗುತ್ತದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಹೌದು ನಾವೆಲ್ಲ ಕೋಮುವಾದಿಗಳು

ನಾನು ಬಿಜೆಪಿ ಜತೆ ಹೋಗಬೇಕೆಂದಿದ್ದರೆ ಲೋಕಸಭಾ ಚುನಾವಣೆ ಮೊದಲೇ ಹೋಗುತ್ತಿದ್ದೆ. ನನಗೆ ಪ್ರಧಾನಿಯಿಂದಲೇ ಆಹ್ವಾನವಿತ್ತು. ನನ್ನನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸುತ್ತೇನೆ ಬನ್ನಿ ಎಂದು ಕರೆದಿದ್ದರು. ಆಗಲೇ ನಾನು ಹೋಗಲಿಲ್ಲ. ಯಾಕೆಂದರೆ ನನಗೆ ರಾಜಕೀಯ ಮುಖ್ಯವಲ್ಲ, ಜನ ಮುಖ್ಯ, ಅವರ ಸಮಸ್ಯೆ ಬಗೆಹರಿಯಬೇಕಷ್ಟೆಎಂದು ಹೇಳಿದರು.

ಹೊಸಕೋಟೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ: ಎಂಟಿಬಿಗೆ ಆತಂಕ

ದೀಪಾವಳಿ ಆಚರಿಸದ ಕುಮಾರಸ್ವಾಮಿ
ಕುಮಾರಸ್ವಾಮಿ ಅವರು ದೀಪಾವಳಿ ಹಬ್ಬದ ಸಮಯವನ್ನು ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿ, ಧೈರ್ಯ ತುಂಬುವ ಮೂಲಕ ಕಳೆದರು.ದೀಪಾವಳಿ ಹಬ್ಬದ ಮುನ್ನಾ ದಿನವಾದ ಶನಿವಾರ ರಾತ್ರಿ ಬೆಳಗಾವಿಗೆ ತೆರಳಿದ್ದ ಅವರು ಚಿಕ್ಕೋಡಿ, ಕಾಗವಾಡದಲ್ಲಿ ಭಾನುವಾರ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದರು. ಖಾಸಗಿ ಸಂಸ್ಥೆಯೊಂದು ನೀಡಿದ ದೀಪಾವಳಿ ಕಿಟ್‌ಗಳನ್ನು ಸಂತ್ರಸ್ತರಿಗೆ ವಿತರಿಸಿದರು. ನಂತರ ಗದಗ, ಹಾವೇರಿಗೆ ತೆರಳಿ ಸಂತ್ರಸ್ತರಿಗೆ ಧೈರ್ಯ ತುಂಬಿದರು.

ಉತ್ತರ ಕರ್ನಾಟಕದ ಜನರ ಬದುಕಿನ ಜೊತೆ ಪ್ರಕೃತಿ ಚೆಲ್ಲಾಟವಾಡುತ್ತಿದೆ. ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ದೀಪಾವಳಿ ಆಚರಿಸಲು ಮನಸ್ಸು ಒಪ್ಪದಿದ್ದಾಗ ನಿಮ್ಮ ಬಳಿಗೆ ಬಂದಿರುವುದಾಗಿ ಈ ಸಂದರ್ಭದಲ್ಲಿ ಮಾಜಿ ಸಿಎಂ ಹೇಳಿದ್ದಾರೆ. ಜತೆಗೆ, ಕೊಡಗಿನಲ್ಲಿ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಪರಿಹಾರವಾಗಿ .50 ಸಾವಿರ, ಮನೆ ಬಿದ್ದವರಿಗೆ .1 ಲಕ್ಷ ನೀಡುವ ಜೊತೆಗೆ ಸರ್ಕಾರದಿಂದಲೇ .9.85 ಲಕ್ಷ ವೆಚ್ಚದ ಸುಸಜ್ಜಿತ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ. ಅದೇ ಮಾದರಿಯಲ್ಲಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೂ ಸುಸಜ್ಜಿತ ಮನೆಗಳನ್ನು ಕಟ್ಟಿಸಿ ಕೊಡಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಭರವಸೆ ನೀಡಿದರು.

ಅಕ್ಟೋಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

click me!