ಕಾಂಗ್ರೆಸ್‌ ಸರ್ಕಾರ ರಚಿಸುವುದು ನಿಶ್ಚಿತ: ಕೆ.ಎಚ್‌.ಮುನಿಯಪ್ಪ

By Kannadaprabha NewsFirst Published May 11, 2023, 6:06 PM IST
Highlights

ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಪರವಾಗಿ ವಾತಾವರಣವಿದ್ದು, ಈ ಬಾರಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ದೇವನಹಳ್ಳಿ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿದರು.

ಕೋಲಾರ (ಮೇ.11): ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಪರವಾಗಿ ವಾತಾವರಣವಿದ್ದು, ಈ ಬಾರಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ದೇವನಹಳ್ಳಿ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿದರು. ಅವರು ಬುಧವಾರ ಪತ್ನಿ ನಾಗರತ್ಮಮ್ಮ ಜೊತೆ ಕೋಲಾರ ನಗರದ ಹಾರೋಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ನೇತೃತ್ವದಲ್ಲಿ ಎಲ್ಲಾ ಮುಖಂಡರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. 

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ಪಕ್ಷಕ್ಕೆ ಶಕ್ತಿ ಬಂದಿದೆ. 150 ಸ್ಥಾನ ಗೆಲ್ಲಲಿದ್ದೇವೆ ಎಂದರು. ದೇವನಹಳ್ಳಿ ಕ್ಷೇತ್ರದಲ್ಲೂ ಗೆಲುವು ಖಚಿತ. ಜೆಡಿಎಸ್‌, ಬಿಜೆಪಿಯಿಂದ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ಶಕ್ತಿ ತುಂಬಿದ್ದಾರೆ. ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಸರ್ಕಾರದ ಅವಧಿಯಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಣಲಿಲ್ಲ. ಕಾರ್ಮಿಕರು, ರೈತರು ಬೀದಿಪಾಲಾಗಿದ್ದಾರೆ. ಹಿಂದುಳಿದ ವರ್ಗದವರು, ಪರಿಶಿಷ್ಟರು, ಅಲ್ಪಸಂಖ್ಯಾತರು ಕಂಗಾಲಾಗಿದ್ದಾರೆ. ಯಾರಿಗೂ ನೆಮ್ಮದಿ ಇಲ್ಲದಂತಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ: ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ತೊಲಗಬೇಕು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆ ಮೂಲಕ 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಹಾಗೂ ಖರ್ಗೆ ನೇತೃತ್ವದಲ್ಲಿ ಅಧಿಕಾರ ಹಿಡಿಯುತ್ತೇವೆ. ಜಾತ್ಯತೀತ ಪಕ್ಷಗಳು ಒಗ್ಗಟ್ಟಾಗಿ ಬಿಜೆಪಿ ತೊಲಗಿಸಲಿದ್ದೇವೆ. ಸ್ವಾತಂತ್ರ್ಯ ತಂದುಕೊಟ್ಟಕಾಂಗ್ರೆಸ್‌ ನೇತೃತ್ವದಲ್ಲಿ ದೇಶ ಅಭಿವೃದ್ಧಿಪಡಿಸಲಿದ್ದೇವೆ ಎಂದರು. ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್‌, ಎಸ್‌ಸಿ ಘಟಕದ ಅಧ್ಯಕ್ಷ ಕೆ.ಜಯದೇವ್‌, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸಾದ್‌ ಬಾಬು, ಮುಖಂಡ ತ್ಯಾಗರಾಜ್‌ ಇದ್ದರು.

ಕೋಲಾರ ಜಿಲ್ಲೆಯಲ್ಲಿ ಶೇ.80ರಷ್ಟು ಮತದಾನ: ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಆರಂಭದಲ್ಲಿ ಕೆಲವೆಡೆ ಮತಯಂತ್ರ ಕೈಕೊಟ್ಟಘಟನೆ ಸೇರಿದಂತೆ ಸಣ್ಣಪುಟ್ಟಘರ್ಷಣೆಗಳನ್ನು ಹೊರತುಪಡಿಸಿ ಶಾಂತಿಯುತ ಮತದಾನ ನಡೆದಿದ್ದು ಸುಮಾರು ಶೇ.80ಕ್ಕಿಂತ ಹೆಚ್ಚು ಮತದಾನವಾಗಿದೆ. ಬಿಸಿಲಿನ ಬೇಗೆಗೆ ಹೆದರಿದ ಜನ ಬೆಳಗ್ಗೆ 7 ಗಂಟೆಯಿಂದಲೇ ಸಾಲುಗಟ್ಟಿಹಕ್ಕು ಚಲಾಯಿಸಲು ಮುಂದಾದ ಕಾರಣ ಮಧ್ಯಾಹ್ನ 1 ಗಂಟೆ ವೇಳೆಗೆ ಸುಮಾರು ಶೇ.34.23 ರಷ್ಟುಮತದಾನವಾಗಿದ್ದು, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿರಿದಿರುವ 72 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಯಿತು.

Kodagu: ಸೂಟ್‌ಕೇಸ್ ಕ್ಯಾಂಡಿಡೇಟ್‌ನಿಂದ ಚುನಾವಣಾ ಕಣ ಟಫ್ ಇತ್ತು: ಅಪ್ಪಚ್ಚು ರಂಜನ್

ಮುಳಬಾಗಿಲಿನಲ್ಲಿ ತ್ರಿಕೋನ ಸ್ಪರ್ಧೆ: ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸೀಗೆಹಳ್ಳಿ ಸುಂದರ್‌, ಜೆಡಿಎಸ್‌ನ ಸಮೃದ್ದಿ ಮಂಜುನಾಥ್‌, ಕಾಂಗ್ರೆಸ್‌ನ ಆದಿನಾರಾಯಣ ನಡುವೆ ತ್ರಿಕೋನ ಸ್ಪರ್ಧೆ ಇದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ.ಆರ್‌.ರಮೇಶ್‌ಕುಮಾರ್‌, ಜೆಡಿಎಸ್‌ನ ಜಿ.ಕೆ.ವೆಂಕಟಶಿವಾರೆಡ್ಡಿ, ಬಿಜೆಪಿಯ ಗುಂಜೂರು ಶ್ರೀನಿವಾಸರೆಡ್ಡಿ ನಡುವೆ ತ್ರಿಕೋನ ಸ್ಪರ್ಧೆ ಇದೆ. ಮಾಲೂರು ಕ್ಷೇತ್ರದಲ್ಲಿ ಬಿಜೆಪಿಯ ಮಂಜುನಾಥಗೌಡ, ಕಾಂಗ್ರೆಸ್‌ನ ಕೆ.ವೈ.ನಂಜೇಗೌಡ, ಜೆಡಿಎಸ್‌ನ ರಾಮೇಗೌಡ ಹಾಗೂ ಬಿಜೆಪಿ ಬಂಡಾಯ,ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯಕುಮಾರ್‌ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

click me!