
ಬೆಂಗಳೂರು, (ಜುಲೈ.13): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರಕಾರ 2021-2030ರ ಸಾಲಿನ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತಂದಿದ್ದಾರೆ.
ಇದೀಗ ಕರ್ನಾಟಕದಲ್ಲೂ ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೊಳಿಸಲು ಕಾಲ ಪಕ್ವವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಸರ್ಕಾರವು ಹೊಸ ಜನಸಂಖ್ಯಾ ನೀತಿಯನ್ನು ಜಾರಿ ಮಾಡಲು ಇದು ಸೂಕ್ತ ಕಾಲವಾಗಿದೆ ಎಂದಿದ್ದಾರೆ.
ಜನಸಂಖ್ಯಾ ನಿಯಂತ್ರಣಕ್ಕೆ ಯೋಗಿ ಹೊಸ ನೀತಿ, ಶೇ. 1.9ಕ್ಕೆ ಇಳಿಸುವ ಗುರಿ!
ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳು ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ನೂತನ ಜನಸಂಖ್ಯಾ ನೀತಿಯನ್ನು ಜಾರಿ ಮಾಡಿವೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಜನಸಂಖ್ಯಾ ನೀತಿ ಜಾರಿಯಾಗಬೇಕಿದೆ. ಜನಸಂಖ್ಯೆಯಲ್ಲಿ ಹೆಚ್ಚಳವಾದರೆ ಲಭ್ಯವಿರುವ ಸೀಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರತಿಯೊಬ್ಬ ನಾಗರಿಕನಿಗೂ ಅವಶ್ಯಕತೆಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹಾಗಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಹೊಸ ನೀತಿ ಅಗತ್ಯವಿದೆ. ಈ ನೀತಿ ಜಾರಿಗೆ ಸೂಕ್ತ ಕಾಲ ಇದಾಗಿದೆ ಎಂದು ಅವರು ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.
ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲಾಗಿದ್ದು, ಎರಡಕ್ಕಿಂತ ಹೆಚ್ಚು ಮಕ್ಕಳು ಇರುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ, ಸರಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ ಹಾಗೂ ಸರಕಾರಿ ಸಬ್ಸಿಡಿಗಳನ್ನು ಪಡೆಯುವಂತಿಲ್ಲ. ಸರಕಾರಿ ಉದ್ಯೋಗಿಗಳು ಬಡ್ತಿ ಪಡೆಯಲೂ ಇದರಿಂದ ಸಾಧ್ಯವಾಗುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.