ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ದಿಲ್ಲಿಯಿಂದ ಬಂದು ಬಿಎಸ್‌ವೈ ಭೇಟಿಯಾದ ಶೆಟ್ಟರ್

By Suvarna NewsFirst Published Nov 15, 2021, 5:18 PM IST
Highlights

* ಬಿಟ್ ಕಾಯಿನ್ ಹಗರಣದ ಮಧ್ಯೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
* ದೆಹಲಿಯಿಂದ ಬಂದು ನೇರವಾಗಿ ಬಿಎಸ್‌ವೈ ಭೇಟಿಯಾದ ಜಗದೀಶ್ ಶೆಟ್ಟರ್
* ಹೈಕಮಂಡ್ ನಾಯಕ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದ ಶೆಟ್ಟರ್

ಬೆಂಗಳೂರು, (ನ.15): ಬಿಟ್‌ ಕಾಯಿನ್‌ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar) ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿತ್ತು.

ಇದೀಗ ದೆಹಲಿಯಿಂದ (delhi) ವಾಪಸಾಗಿರುವ ಜಗದೀಶ್ ಶೆಟ್ಟರ್, ದಿಢೀರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು (BS Yediyurappa) ಭೇಟಿ ಮಾಡಿರುವುದು ರಾಜ್ಯ ಬಿಜೆಪಿಯಲ್ಲಿ (BJP) ಭಾರೀ ಚರ್ಚೆಗೆ ಗ್ರಾಸವಾಗಿದೆ. 

Karnataka Politics: ಜಗದೀಶ್ ಶೆಟ್ಟರ್‌ಗೆ ಹೈಕಮಾಂಡ್ ಬುಲಾವ್, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಶುಕ್ರವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದ ಶೆಟ್ಟರ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದರು. ಇದಾದ ಬಳಿಕ ಶೆಟ್ಟರ್, ಯಡಿಯೂರಪ್ಪರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿರುವ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ದೆಹಲಿ ನಾಯಕರ ಭೇಟಿ, ಅಲ್ಲಿ ನಡೆದಿರುವ ಮಾತುಕತೆ ವಿವರಗಳು ಇತ್ಯಾದಿಗಳ ಬಗ್ಗೆ ಮಾಜಿ ಸಿಎಂ ಬಿಎಸ್‍ವೈಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.

ಮೊದಲ ಎರಡೂವರೆ ತಿಂಗಳು ಬೊಮ್ಮಾಯಿ ಅವರು ಉತ್ತಮವಾಗಿ ಆಡಳಿತ ನಡೆಸಿದ್ದರು. ಅವರ ಮೇಲೆ ಯಾವುದೇ ಗುರುತರ ಆರೋಪಗಳಿರಲಿಲ್ಲ. ಆದರೆ ಬಿಟ್ ಕಾಯಿನ್ ಪ್ರಕರಣದಲ್ಲಿ ಅವರು ವಿವಾದಕ್ಕೆ ಸಿಲುಕಿರುವುದರಿಂದ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗಿದೆ ಎಂಬುದನ್ನು ವರಿಷ್ಠರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿಯೇ ರಾಜ್ಯ ನಾಯಕರಿಂದ ಬಿಜೆಪಿ ವರಿಷ್ಠರ ಯಾರಿಗೂ ಗೊತ್ತಾಗದಂತೆ ಸದ್ದುಗದ್ದಲವಿಲ್ಲದೆ ಮಾಹಿತಿಯನ್ನು ಪಡೆಯುತ್ತಿದ್ದಾರೆ.

ಈಗಾಗಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಂದ ಮಾಹಿತಿಯನ್ನು ಪಡೆದಿರುವ ದೆಹಲಿ ನಾಯಕರು ಮುಂದಿನ ದಿನಗಳಲ್ಲಿ ಇನ್ನು ಕೆಲವು ನಾಯಕರನ್ನು ರಾಷ್ಟ್ರ ರಾಜಧಾನಿಗೆ ಕರೆಸಿಕೊಂಡು ಮಾಹಿತಿ ಪಡೆಯಲು ಮುಂದಾಗಿದ್ದಾರೆ.

ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಮೋದಿ ಸಭೆ
ಕರ್ನಾಟಕದಲ್ಲಿ ವಿಪಕ್ಷ ಕಾಂಗ್ರೆಸ್ ಬಹುಕೋಟಿ ಬಿಟ್ ಕಾಯಿನ್ ಹಗರಣದ ಆರೋಪ ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಕ್ರಿಪ್ಟೋ ಕರೆನ್ಸಿ ನ.13 ರಂದು ಕುರಿತು ಮಹತ್ವದ ಸಭೆ ನಡೆಸಿದ್ದಾರೆ. 

ಕ್ರಿಪ್ಟೋ ಕರೆನ್ಸಿಗೆ ಭಾರತದಲ್ಲಿ ಸದ್ಯಕ್ಕೆ ಯಾವುದೇ ಮಾನ್ಯತೆ, ನಿಯಂತ್ರಣಗಳೂ ಇಲ್ಲ. ಆದ್ದರಿಂದ ಈ ರೀತಿಯ ಅನಿಯಂತ್ರಿತ ಮಾರುಕಟ್ಟೆಗಳು ಅಕ್ರಮ ಹಣ ವರ್ಗಾವಣೆ ಹಾಗೂ ಭಯೋತ್ಪಾದಕರಿಗೆ ಆರ್ಥಿಕ ನೆರವು ಸಿಗುವ ಮೂಲವಾಗುವ ಸಾಧ್ಯತೆ ಇರುವುದರಿಂದ ಈ ರೀತಿಯಾಗುವುದಕ್ಕೆ ಕಡಿವಾಣ  ಕೇಂದ್ರ ಸರ್ಕಾರ ಕ್ರಿಪ್ಟೋ ಕರೆನ್ಸಿಗೆ ಒಂದಷ್ಟು ನಿಯಂತ್ರಣ ವಿಧಿಸುವ ಬಗ್ಗೆ  ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ.

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಹಗರಣ ಭಾರೀ ಸಂಚಲನ ಮೂಡಿಸಿದ್ದು, ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

click me!