
ಬೆಂಗಳೂರು (ಅ.21): ಚನ್ನಪಟ್ಟಣ ಜೆಡಿಎಸ್ ಪಕ್ಷದ ಕ್ಷೇತ್ರವಾಗಿದ್ದರಿಂದ ಆ ಪಕ್ಷದ ನಾಯಕರು ಯಾರನ್ನು ಬೇಕಾದರೂ ಅಭ್ಯರ್ಥಿಯನ್ನಾಗಿ ಘೋಷಿಸಬಹುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಈಗಾಗಲೇ ಬಿಜೆಪಿಯ ಎರಡು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ. ಇನ್ನೊಂದು ಕ್ಷೇತ್ರ ಜೆಡಿಎಸ್ನವರಿಗೆ ಬಿಟ್ಟಿದ್ದು, ಅವರು ಯಾರನ್ನು ಬೇಕಾದರೂ ಉಪಚುನಾವಣಾ ಅಭ್ಯರ್ಥಿಯಾಗಿಸಲು ದೆಹಲಿಯಲ್ಲಿ ತೀರ್ಮಾನವಾಗಿದೆ. ಯಾರು ಬೇಕೋ ಘೋಷಣೆ ಮಾಡಿಕೊಳ್ಳಬಹುದು ಎಂದು ಪಕ್ಷದ ರಾಷ್ಟ್ರೀಯ ನಾಯಕ ಅಮಿತ್ ಶಾ ಹೇಳಿದ್ದಾರೆ.
ಹೀಗಾಗಿ ಅವರಿಗೆ ಯಾರ ಹೆಸರು ಬೇಕೊ ಅದನ್ನು ಘೋಷಿಸುತ್ತಾರೆ. ಬಿಜೆಪಿ-ಜೆಡಿಎಸ್ ಒಟ್ಟಾಗಿ ಮೂರೂ ಕ್ಷೇತ್ರ ಗೆಲ್ಲಲು ಶ್ರಮ ವಹಿಸುತ್ತೇವೆ ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ತೀರ್ಮಾನ ದೆಹಲಿಯವರು ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿ ತೀರ್ಮಾನ ಮಾಡಲು ಸಾಧ್ಯವಿಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ಮಾಡುತ್ತೇವೆ. ಬಿಜೆಪಿಗರು ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವ ಯಾವುದೇ ಯೋಚನೆ ಇಲ್ಲ ಎಂದರು.
ದ್ವೇಷಮಯ ರಾಜಕೀಯದಿಂದ ಅಭಿವೃದ್ಧಿ ಶೂನ್ಯ: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಆಡಳಿತಾರೂಢ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಅಭಿವೃದ್ಧಿ ಮರೆತು ದ್ವೇಷಮಯ ರಾಜಕಾರಣದಲ್ಲಿ ತೊಡಗಿಕೊಂಡಿರುವುದು ವಿಪರ್ಯಾಸವಾಗಿದೆ. ರಾಜ್ಯದ ಜನತೆ ಹಲವಾರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಕೊಂಡಿದ್ದು, ಇದರ ಚಿಂತೆ ಈ ಪಕ್ಷಗಳಿಗೆ ಇಲ್ಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸ.ಶರಣಪ್ಪ ಪಾಟೀಲ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಪ್ರಮುಖವಾಗಿರುವ ಮೂರೂ ಪಕ್ಷಗಳಿಗೆ ಜನಹಿತ ಮುಖ್ಯವಾಗಿಲ್ಲ.
ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ಟಿಕೆಟ್ ಆಫರ್ ಒಪ್ಪುತ್ತಿಲ್ಲ ಯೋಗೇಶ್ವರ್
ಕೇವಲ ತಮ್ಮ ಅಧಿಕಾರದ ಲಾಲಸೆಗಾಗಿ ಲಜ್ಜೆಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ಇಂದು ಕಾಂಗ್ರೆಸ್ ಪಕ್ಷದವರು ತಮ್ಮದೇ ಆದ ಸ್ವಾರ್ಥ ರಾಜಕಾರಣದಲ್ಲಿ ತೊಡಗಿದ್ದರ ಇದರ ಕುರಿತು ತುಲನಾತ್ಮಕವಾಗಿ ಸಲಹೆ ಕೊಡುವುದು ಬಿಟ್ಟು ಬಿಜೆಪಿ ಮತ್ತು ಜೆಡಿಎಸ್ ವೈಯಕ್ತಿಕ ವಿಚಾರಗಳನ್ನು ಮುಂಚೂಣಿಯಲ್ಲಿ ತಂದು ರಾಜ್ಯದ ಮರ್ಯಾದೆಯನ್ನು ದೇಶಾದ್ಯಂತ ಹರಾಜು ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ವೈಯಕ್ತಿಕ ವಿಚಾರಗಳು ಪ್ರಸ್ತಾಪವಾಗುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.