
ನವದೆಹಲಿ: ಲೋಕಸಭೆ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಸಮಯ ಇರುವ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಜು.18ರಂದು ತನ್ನ ಪಾಲುದಾರರ ಸಭೆ ಕರೆದಿದೆ. ಈ ಹಿಂದೆ ಮುನಿಸಿಕೊಂಡು ಎನ್ಡಿಎ ಬಿಟ್ಟು ಹೋಗಿದ್ದ ಶಿರೋಮಣಿ ಅಕಾಲಿದಳ (ಎಸ್ಎಡಿ) ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಹಾಗೂ ಎಲ್ಜೆಪಿ ನಾಯಕ ಚಿರಾಗ್ ಪಾಸ್ವಾನ್ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್ ಪಕ್ಷವನ್ನು ಎನ್ಡಿಎ ಒಕ್ಕೂಟದೊಂದಿಗೆ ಕರೆದೊಯ್ಯುವ ಪ್ರಯತ್ನ ಬಿಜೆಪಿ ಪಾಳೆಯದಿಂದ ಆರಂಭವಾಗಿದೆ.
ಇತ್ತೀಚೆಗೆ ಎನ್ಡಿಎಗೆ ವಿರುದ್ಧವಾಗಿ ಬಿಹಾರದ ಪಟನಾದಲ್ಲಿ ನಡೆದ ವಿಪಕ್ಷಗಳ ಒಕ್ಕೂಟದ ಸಭೆಯಲ್ಲಿ ಜೆಡಿಎಸ್ ಪಾಲ್ಗೊಂಡಿರಲಿಲ್ಲ. ಜೆಡಿಎಸ್ ಪಕ್ಷದ ನಾಯಕರಿಗೂ ಈ ಬಗ್ಗೆ ಗೊಂದಲ ಶುರುವಾಗಿದೆ. ಯಾರೊಂದಿಗಾದರೂ ಕೈಜೋಡಿಸಬೇಕೆ ಅಥವಾ ವೈಯಕ್ತಿಕವಾಗಿ ಹೆಜ್ಜೆ ಹಾಕಬೇಕೆ ಎಂಬುದರ ಬಗ್ಗೆ ಇನ್ನೂ ಜಿಜ್ಞಾಸೆ ನಡೆಯುತ್ತಿದೆ ಎನ್ನಲಾಗಿದೆ. ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಬಗ್ಗೆ ವಿರೋಧದ ನಿಲುವನ್ನು ಹೊಂದಿರುವ ಜೆಡಿಎಸ್ ನಾಯಕರಿಗೆ ಕೇಂದ್ರದಲ್ಲಿ ಪರೋಕ್ಷವಾಗಿ ಕಾಂಗ್ರೆಸ್ ಜತೆ ಕೈಜೋಡಿಸುವ ಮನಸ್ಸಿಲ್ಲ. ಹೀಗಾಗಿಯೇ ತಟಸ್ಥ ನೀತಿ ಅನುಸರಿಸುವ ಬಗ್ಗೆ ಪಕ್ಷದ ಹಲವು ನಾಯಕರು ಅಭಿಪ್ರಾಯ ಹೊಂದಿದ್ದಾರೆ. ಇದನ್ನು ಅರಿತ ಬಿಜೆಪಿ ನಾಯಕರು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಅನುಕೂಲವಾಗಬಹುದು ಎಂಬ ಲೆಕ್ಕಾಚಾರದೊಂದಿಗೆ ಜೆಡಿಎಸ್ ಪಕ್ಷವನ್ನು ಎನ್ಡಿಎ ಒಕ್ಕೂಟದತ್ತ ಸೆಳೆಯುವ ಲೆಕ್ಕಾಚಾರ ಆರಂಭವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಜುಲೈ 12ಕ್ಕೆ ಮೋದಿ ಸಂಪುಟ ಪುನಾರಚನೆ? ಎಲ್ಜೆಪಿ ಚಿರಾಗ್ ಪಾಸ್ವಾನ್ಗೆ ಸಚಿವ ಸ್ಥಾನ ಸಾಧ್ಯತೆ!
ಒಂದು ವೇಳೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಬದಲು ಬೇರೊಬ್ಬರು ಮುಖ್ಯಮಂತ್ರಿಯಾಗಿದ್ದರೆ ಆಗ ಜೆಡಿಎಸ್ ಲೆಕ್ಕಾಚಾರ ಬೇರೆ ಆಗಿರುವ ಸಾಧ್ಯತೆಯಿತ್ತು. ಇದೀಗ ತಮ್ಮ ಬದ್ಧ ರಾಜಕೀಯ ವೈರಿ ಸಿದ್ದರಾಮಯ್ಯ ಅವರ ಕಾರಣಕ್ಕಾಗಿಯೇ ಕಾಂಗ್ರೆಸ್ ಜತೆ ಪರೋಕ್ಷವಾಗಿಯಾದರೂ ಕೈಜೋಡಿಸಲು ಹಿಂದೇಟು ಹಾಕುತ್ತಿದೆ. ಇದನ್ನೇ ಬಳಸಿಕೊಂಡು ಜೆಡಿಎಸ್ ಸೆಳೆಯಲು ಪ್ರಯತ್ನ ನಡೆದಿದೆ. ಇದು ಯಶಸ್ವಿಯಾಗುವುದೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕು.
ಬಿಜೆಪಿ-ಶಿರೋಮಣಿ ಅಕಾಲಿದಳ ಮೈತ್ರಿ ..? : ಕೇಸರಿ ಹೈಕಮಾಂಡ್ ಜೊತೆ ಎಸ್ಎಡಿ ಮುಖ್ಯಸ್ಥ ಮಾತು..?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.