ತಾಕತ್ತಿದ್ರೆ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು: ಪ್ರತಾಪ್ ಸಿಂಹಗೆ ಸವಾಲು

By Suvarna NewsFirst Published May 28, 2021, 2:43 PM IST
Highlights

* ಕೊರೋನಾ ಆತಂಕದ ಮಧ್ಯೆ ಮೈಸೂರಿನಲ್ಲಿ ರಾಜಕೀಯ ಕಿತ್ತಾಟ
* ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಜಿ.ಟಿ. ದೇವೇಗೌಡ ಅವರ ವಾಗ್ದಾಳಿ
* ಪ್ರತಾಪ್ ಸಿಂಹಗೆ ಸವಾಲು ಹಾಕಿದ ಜಿಟಿಡಿ

ಮೈಸೂರು, ಮೇ.28):  ಕೊರೋನಾ ಆತಂಕದ ಮಧ್ಯೆ ಮೈಸೂರು ಜಿಲ್ಲೆಯಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ಹೌದು...ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಜಿ.ಟಿ. ದೇವೇಗೌಡ ಅವರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ,  ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬಗ್ಗೆ ಸುಮ್ಮನೆ ಹಾದಿ ಬೀದಿಯಲ್ಲಿ ನಿಂತು ಮಾತನಾಡಬೇಡ, ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿ ಪೇಪರ್ ಟೈಗರ್ ಆಗೋದು ಬೇಡ. ನಿನಗೆ ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು ಎಂದು ಸಂಸದ ಪ್ರತಾಪ್ ಸಿಂಹಗೆ ಮಾಜಿ ಸಚಿವ ಜಿ.ಟಿ.ದೇವೇಗೌಡ ಸವಾಲು ಹಾಕಿದರು.

'ಮೈಸೂರಲ್ಲಿ ಟೆಸ್ಟ್ ಇಳಿಸಿದ್ದೆ ಸೋಂಕು ಹೆಚ್ಚಾಯ್ತು : ಈಗ ಕಂಪ್ಲೀಟ್ ಲಾಕ್‌ಡೌನ್' 

ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ‌ ಮಾಡುತ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಎಂದು ಲೆಕ್ಕ ಕೊಡು, ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ ಎಂದು ಸಂಸದರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ನೀನು ಪವರ್‌ಫುರ್ ಸಂಸದನಲ್ವಾ, ಪಿಎಂ, ಸಿಎಂ ನೀನು ಹೇಳಿದಂತೆ ಕೇಳುತ್ತಾರಲ್ವ, ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿ ತೋರಿಸು. ಅದನ್ನು ಬಿಟ್ಟು ಹೇಳಿಕೆಗಳನ್ನು ನೀಡಿ ಯಾಕೆ ಗೊಂದಲ ಮೂಡಿಸುತ್ತೀರಿ, ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆಯೆಂದೆನಿಸುತ್ತಿದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ ಎಂದು ಜಿ.ಟಿ.ದೇವೇಗೌಡ ಕಿಡಿಕಾರಿದರು.

click me!