
ಬೆಂಗಳೂರು (ಜು.14): ಮುಂಬರುವ ವಿಧಾನಸಭಾ ಚುನಾವಣೆಗೆ ಸದ್ದಿಲ್ಲದೆ ತಯಾರಿ ಆರಂಭಿಸಿರುವ ಆಡಳಿತಾರೂಢ ಬಿಜೆಪಿ ನಾಯಕರು, ಸರ್ಕಾರದ ವರ್ಚಸ್ಸು ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಸಂಬಂಧ ಶುಕ್ರವಾರ ಮಹತ್ವದ ‘ಚಿಂತನ ಮಂಥನ ಸಭೆ’ ನಡೆಸಲಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೆ ನಗರದ ಹೊರವಲಯದ ನಂದಿ ಬೆಟ್ಟದ ಸಮೀಪದ ಹೋಟೆಲ್ವೊಂದರಲ್ಲಿ ಈ ಸಭೆ ನಡೆಯುವ ಸಾಧ್ಯತೆಯಿದ್ದು, ಸರ್ಕಾರ, ಪಕ್ಷ ಹಾಗೂ ಸಂಘ ಪರಿವಾರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಈ ಸಂಬಂಧ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಗುರುವಾರವೇ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತವರ ಸಂಪುಟದ ಹಿರಿಯ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಮತ್ತವರ ತಂಡದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಘ ಪರಿವಾರದ ಮುಖಂಡರಾದ ಮುಕುಂದ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿದು ಬಂದಿದೆ.
ಎಲೆಕ್ಷನ್ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದತ್ತ ಸಂಸದರ ಒಲವು? ಏನಿದು ಲೆಕ್ಕಾಚಾರ?
2 ದಿನದ ಬದಲು 1 ದಿನ: ಈ ಚಿಂತನ ಮಂಥನ ಸಭೆಯನ್ನು ಎರಡು ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ರಾಜ್ಯದ ಅನೇಕ ಭಾಗಗಳಲ್ಲಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಇಂಥ ಸಮಯದಲ್ಲಿ ಎರಡು ದಿನಗಳ ಕಾಲ ಪಕ್ಷದ ಸಭೆಗೆ ಮೀಸಲಾಗಿಡುವುದು ಸರಿಯಲ್ಲ ಎಂಬ ಅಭಿಪ್ರಾಯಕ್ಕೆ ಬಂದು, ಒಂದು ದಿನಕ್ಕೆ ಸೀಮಿತಗೊಳಿಸಲಾಯಿತು ಎನ್ನಲಾಗಿದೆ.
ಸಭೆಯ ಅಜೆಂಡಾ ಏನು?: ಸಭೆಯ ಮೂಲಕ ಮುಂದಿನ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು, ಮತ್ತೊಮ್ಮೆ ಪೂರ್ಣ ಬಹುಮತದಿಂದ ಅಧಿಕಾರದ ಗದ್ದುಗೆ ಏರಲು ಏನೇನು ಮಾಡಬೇಕು? ಸದ್ಯ ಯಾವೆಲ್ಲ ಲೋಪದೋಷಗಳಿವೆ? ಅವುಗಳನ್ನು ಸರಿಪಡಿಸಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲು ಉದ್ದೇಶಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದೇ ತಿಂಗಳ 28ಕ್ಕೆ ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಯ ಪರಾಮರ್ಶೆ ನಡೆಸುವುದರ ಜೊತೆಗೆ ಚುನಾವಣೆ ಉದ್ದೇಶದಿಂದ ಆಡಳಿತದಲ್ಲಿ ಏನೇನು ಸುಧಾರಣೆ ತರಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ. ಬಜೆಟ್ನಲ್ಲಿ ನೀಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಜನರನ್ನು ಓಲೈಸಲು ಆಡಳಿತದಲ್ಲಿ ಯಾವ ಬದಲಾವಣೆ ತರಬೇಕು ಎಂಬುದರ ಬಗ್ಗೆಯೂ ಪಕ್ಷ ಹಾಗೂ ಸಂಘ ಪರಿವಾರದ ನಾಯಕರು ಮುಖ್ಯಮಂತ್ರಿಗಳಿಗೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿಗಮ-ಮಂಡಳಿ ಅಧ್ಯಕ್ಷ ನೇಮಕ ರದ್ದು: ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ..!
ರಹಸ್ಯ ಕಾಪಾಡುತ್ತಿರುವ ಬಿಜೆಪಿ!: ಚಿಂತನ ಮಂಥನ ಸಭೆಯ ಬಗ್ಗೆ ಬಿಜೆಪಿ ನಾಯಕರು ರಹಸ್ಯ ಕಾಪಾಡುವ ಪ್ರಯತ್ನ ಮಾಡುತ್ತಿದ್ದಾರೆ. ಸಭೆಯ ಬಗ್ಗೆ ಯಾವುದೇ ಬಿಜೆಪಿ ನಾಯಕರು ಮಾತನಾಡಲು ಹಿಂಜರಿಯುತ್ತಿದ್ದಾರೆ. ಸಭೆ ಇದೆ ಎನ್ನುವುದಷ್ಟೇ ಗೊತ್ತಿದೆ ಹೊರತು ಎಲ್ಲಿ, ಯಾವಾಗ ಎಂಬುದು ಗೊತ್ತಿಲ್ಲ ಎಂದೇ ಹೇಳುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ನೀಡದಂತೆ ಪಕ್ಷದ ವರಿಷ್ಠರಿಂದ ಸೂಚನೆ ಇದೆ ಎಂಬ ಮಾತೂ ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.