
ಬೆಂಗಳೂರು (ಜೂ.10): ಡಿ.ಕೆ.ಶಿವಕುಮಾರ್ ಅವರು ಪಕ್ಷವನ್ನು ಅಧಿಕಾರಕ್ಕೆ ತರಲು ಹೊತ್ತಿದ್ದ ಹರಕೆ ತೀರಿಸುವ ಕಾರ್ಯ ಮುಂದುವರೆಸಿದ್ದಾರೆ. ಶನಿವಾರ ಬೆಳಗ್ಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಕುಟುಂಬ ಸಮೇತರಾಗಿ ಮಧ್ಯಪ್ರದೇಶಕ್ಕೆ ಪ್ರಯಾಣ ಬೆಳೆಸುವ ಡಿ.ಕೆ.ಶಿವಕುಮಾರ್ ಅವರು ಮಧ್ಯಾಹ್ನ 2 ಗಂಟೆ ವೇಳೆಗೆ ಅಲ್ಲಿನ ದಾಟಿಯಾದ ‘ಬಾಗ್ಲಾಮುಖಿ ಪೀತಾಂಬರ ಶಕ್ತಿ ಪೀಠ’ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಬಳಿಕ ಅದೇ ದಿನ ರಾತ್ರಿ ದೇಶದ 18 ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ‘ಮಹಾಕಾಲೇಶ್ವರ ಮಂದಿರ’ವಿರುವ ಉಜ್ಜಯಿನಿಯಲ್ಲಿ ಉಳಿದುಕೊಳ್ಳಲಿದ್ದಾರೆ. ಭಾನುವಾರ ಮುಂಜಾನೆ 4 ಗಂಟೆಗೆ ಡಿ.ಕೆ.ಶಿವಕುಮಾರ್ ಅವರು ಮಹಾಕಾಲೇಶ್ವರನಿಗೆ ನಡೆಯುವ ಭಸ್ಮಾರತಿ ಪೂಜೆಯಲ್ಲಿ ಭಾಗಿಯಾಗಿ ತಮ್ಮ ಹರಕೆ ಪೂರೈಸಲಿದ್ದಾರೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗಿ ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯದ ‘ಶಕ್ತಿ’ ಗ್ಯಾರಂಟಿ ಯೋಜನೆಯ ಅಧಿಕೃತ ಜಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೇಕೆದಾಟು ಪಾದಯಾತ್ರೆ: ಡಿ.ಕೆ.ಶಿವಕುಮಾರ್ ಮೇಲಿನ 1 ಕೇಸ್ ರದ್ದು, 2ಕ್ಕೆ ತಡೆ
ತೆರಿಗೆದಾರರು ಗೃಹಲಕ್ಷ್ಮಿ ತ್ಯಜಿಸಿದ್ದಾರೆ: ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಅವಶ್ಯಕತೆ ಇರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2 ಸಾವಿರ ರು. ನೀಡಲು ನಿರ್ಧರಿಸಲಾಗಿದೆ. ಹೀಗಾಗಿ ಆದಾಯ ತೆರಿಗೆ ಪಾವತಿಸುವವರಿಗೆ ಗ್ಯಾರಂಟಿಯ ಲಾಭ ಸಿಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಪಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಆದಾಯ ತೆರಿಗೆ ಪಾವತಿಸುವವರು ಗ್ಯಾರಂಟಿ ಯೋಜನೆಯ ಫಲ ನೀಡುವಂತೆ ಕೇಳಿಲ್ಲ.
ಬಡವರಿಗೆ ಯೋಜನೆಯ ಲಾಭ ಸಿಗಬೇಕು ಎಂದು ತೀರ್ಮಾನಿಸಲಾಗಿದೆ. ಅದಕ್ಕೆ ತಕ್ಕಂತೆ ಆದಾಯ ತೆರಿಗೆ ಪಾವತಿಸುವ ಬಹಳ ಮಂದಿ ಗೃಹ ಲಕ್ಷ್ಮಿ ಯೋಜನೆ ಅಡಿ ತಮಗೆ 2 ಸಾವಿರ ರು. ಬೇಡ ಎಂದು ತಿಳಿಸಿದ್ದಾರೆ. ಈ ಕುರಿತಂತೆ ನನಗೆ ಹಾಗೂ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಯಾರೆಲ್ಲ ಪತ್ರ ಬರೆದಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಯಾರಿಗೇ ಆದರೂ ಒಂದು ರು. ನೀಡಬೇಕೆಂದರೂ ಅದಕ್ಕೆ ಲೆಕ್ಕ ಇಡಬೇಕು. ಫಲಾನುಭವಿಗಳ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳನ್ನೆಲ್ಲ ಪರಿಶೀಲಿಸಬೇಕು.
ಪಠ್ಯಪುಸ್ತಕ ಪರಿಷ್ಕರಣೆ: ಕಾಂಗ್ರೆಸ್ ವಿರುದ್ಧ ರಾಜೀವ್ ಚಂದ್ರಶೇಖರ್ ತೀವ್ರ ಆಕ್ರೋಶ
ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಯಾಗಲಿದೆ. ಅದನ್ನು ಹೊರತುಪಡಿಸಿ ಬೇರೆಯವರ ಖಾತೆಗೆ ಹಣ ಪಾವತಿ ಸಾಧ್ಯವಿಲ್ಲ. ಮನೆಯ ಯಜಮಾನಿ ಯಾರು ಎಂಬುದನ್ನು ಕುಟುಂಬದವರೇ ನಿರ್ಧರಿಸಬೇಕು. ಅದರ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸರ್ಕಾರದ ಬಳಿಯೂ ಎಲ್ಲ ದಾಖಲೆಗಳಿವೆ. ಫಲಾನುಭವಿಗಳು ಸಲ್ಲಿಸುವ ದಾಖಲೆ ಹಾಗೂ ಸರ್ಕಾರದ ಬಳಿಯ ದಾಖಲೆಗಳನ್ನು ಪರಿಶೀಲಿಸಿ ಹಣ ಪಾವತಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.