
ಬೆಂಗಳೂರು (ಅ.30): ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಅಡಿ ₹34 ಕೋಟಿ ಮೊತ್ತದಲ್ಲಿ ವಿವಿಧ ಯೋಜನೆ ಕೈಗೆತ್ತಿಕೊಳ್ಳಲು ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದ್ದು, ಕಾಗಿನೆಲೆಯಲ್ಲಿ ಪ್ರತಿ ವರ್ಷ ‘ಕನಕ ಉತ್ಸವ’ ಆಚರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ₹34 ಕೋಟಿ ವೆಚ್ಚದ ಯೋಜನೆಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಇದೇ ವೇಳೆ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಪ್ರತಿ ವರ್ಷ ಕನಕ ಉತ್ಸವ: ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವ ಆಚರಿಸಲು ಕ್ರಮ ಕೈಗೊಳ್ಳಬೇಕು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನದ ಆದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪ್ರಾಧಿಕಾರದಲ್ಲಿ ಸಂಚಿತ ನಿಧಿ ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ಸೂಚನೆ ನೀಡಿದರು. ಇದೇ ವೇಳೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.
ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ, ಕಲಾಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ಸಹ ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಚರ್ಚಿಸಲಾಯಿತು. ಸಚಿವರಾದ ಶಿವಾನಂದ ಪಾಟೀಲ್, ವಿಧಾನಪರಿಷತ್ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.