Karnataka By-election 2026: ಉಪಸ ಮರದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ; ನಾಳೆ ಮನೆಮನೆ ಪ್ರಚಾರ, ಗುರುವಾರ ಮತದಾನ

Kannadaprabha News   | Kannada Prabha
Published : Apr 07, 2026, 06:45 AM IST
By Election

ಸಾರಾಂಶ

ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳ ನಾಯಕರು ಮತದಾರರ ಮನವೊಲಿಸಲು ಅಂತಿಮ ಕಸರತ್ತು ನಡೆಸುತ್ತಿದ್ದಾರೆ.

 ದಾವಣಗೆರೆ/ಬಾಗಲಕೋಟೆ: ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರ ಮಂಗಳವಾರ 5 ಗಂಟೆಗೆ ಅಂತ್ಯಗೊಳ್ಳಲಿದ್ದು, ಮತದಾರರ ಮನವೊಲಿಕೆಗೆ ರಾಜಕೀಯ ಪಕ್ಷಗಳ ನಾಯಕರು ಅಂತಿಮ ಹಂತದ ಕಸರತ್ತು ನಡೆಸಿದ್ದಾರೆ. ಬುಧವಾರ ಸಂಜೆಯವರೆಗೂ ಮನೆಮನೆ ಪ್ರಚಾರಕ್ಕೆ ಅವಕಾಶ ಇದ್ದು ಎರಡೂ ಕ್ಷೇತ್ರಗಳಲ್ಲಿ ಏ.9ರಂದು ಮತದಾನ ನಡೆಯಲಿದೆ.

ಕಾಂಗ್ರೆಸ್‌-ಬಿಜೆಪಿ ನಡುವೆ ಫೈಟ್‌:

ಎರಡೂ ಕಡೆ ಕಾಂಗ್ರೆಸ್‌-ಬಿಜೆಪಿ ನಡುವೆ ನೇರಾನೇರ ಪೈಪೋಟಿಯಿದ್ದು, ಸೋಮವಾರ ಎರಡೂ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಂಪುಟದ ಸದಸ್ಯರು ಕಾಂಗ್ರೆಸ್‌ ಪರ ಭರ್ಜರಿ ಪ್ರಚಾರ ನಡೆಸಿದರು. ಸಚಿವ ಜಮೀರ್‌ ಅವರು ಇದೇ ಮೊದಲ ಬಾರಿಗೆ ಬಾಗಲಕೋಟೆಗೆ ಆಗಮಿಸಿ, ಅಲ್ಪಸಂಖ್ಯಾತ ಬಾಹುಳ್ಯದ ಪ್ರದೇಶಗಳಲ್ಲಿ ಪ್ರಚಾರ ನಡೆಸಿದರು. ಇದೇ ವೇಳೆ, ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಾಗಲಕೋಟೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿಯವರು ಬೃಹತ್ ರೋಡ್‌ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

ಕಾಂಗ್ರೆಸ್‌ನ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ದಾವಣಗೆರೆ ದಕ್ಷಿಣಕ್ಕೆ, ಎಚ್‌.ವೈ.ಮೇಟಿಯವರ ನಿಧನದಿಂದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಎರಡೂ ಕ್ಷೇತ್ರಗಳು ಆಡಳಿತಾರೂಢ ಕಾಂಗ್ರೆಸ್‌ನಿಂದ ತೆರವಾಗಿವೆ. ಹೀಗಾಗಿ, ಎರಡೂ ಕ್ಷೇತ್ರಗಳನ್ನು ಪುನಃ ಗೆದ್ದು ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಇದೇ ವೇಳೆ, ರಾಜ್ಯಾಧ್ಯಕ್ಷರಾದ ಮೇಲೆ ವಿಜಯೇಂದ್ರ ಎದುರಿಸುತ್ತಿರುವ ಬಹುದೊಡ್ಡ ಸವಾಲು ಇದಾಗಿದೆ. ಹೀಗಾಗಿ, ಈ ಚುನಾವಣೆ ಅವರಿಗೆ ಪ್ರತಿಷ್ಠೆಯ ಚುನಾವಣೆಯಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡಲು ಹರಸಾಹಸ ನಡೆಸುತ್ತಿದ್ದಾರೆ.

ಕಾಂಗ್ರೆಸ್ಸಿನಲ್ಲಿ ಈ ಉಪಚುನಾವಣೆ ಕೊಂಚ ಗೊಂದಲಕ್ಕೆ ಕಾರಣವಾಗಿದ್ದುದು ಟಿಕೆಟ್ ಹಂಚಿಕೆಯ ವಿಚಾರದಲ್ಲಿ. ಬಾಗಲಕೋಟೆಯಲ್ಲಿ ಮೇಟಿ ಅವರ ಮಕ್ಕಳೇ, ಟಿಕೆಟ್’ಗಾಗಿ ಫೈಟ್ ಮಾಡುತ್ತಿದ್ದರು. ಇನ್ನೊಂದು ಕಡೆ, ದಾವಣಗೆರೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ದೊಡ್ಡ ಡ್ರಾಮಾವೇ ನಡೆದು ಹೋಯಿತು. ಕೊನೆಗೆ, ಎರಡೂ ಕ್ಷೇತ್ರದಲ್ಲಿ ಅನುಕಂಪದ ಆಧಾರದ ಮೇಲೆ, ಆಯಾಯ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಯಿತು.

ಈ ಮಧ್ಯೆ, ಜಮೀರ್‌ ಪ್ರಚಾರಕ್ಕೆ ಆಗಮಿಸಿರುವುದು, ಸಿದ್ದು-ಡಿಕೆಶಿ ಜಂಟಿ ಪ್ರಚಾರ, ಇಡೀ ಸಂಪುಟದ ಸದಸ್ಯರು ಪ್ರಚಾರಕ್ಕೆ ಧುಮುಕಿರುವುದು, ಸರ್ಕಾರದ ಗ್ಯಾರಂಟಿ ಯೋಜನೆಗಳು, ಆಡಳಿತ ಪಕ್ಷಕ್ಕಿರುವ ಲಾಭಗಳು ಕಾಂಗ್ರೆಸ್ ಜಯಕ್ಕೆ ಕಾರಣವಾಗಲಿವೆ ಎಂಬುದು ಕಾಂಗ್ರೆಸ್‌ ನಾಯಕರ ಆಶಯ.

ಜೆಡಿಎಸ್‌ ನಾಯಕ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಆಗಮಿಸಿರುವುದು, ಬಾಗಲಕೋಟೆಯಲ್ಲಿ ಅಭ್ಯರ್ಥಿ ಚರಂತಿಮಠ, ಪಿ.ಎಚ್‌.ಪೂಜಾರ ಮುನಿಸು ಮರೆತು ಒಂದಾಗಿರುವುದು, ಚರಂತಿಮಠ ಪರ ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ ಪ್ರಚಾರ ನಡೆಸಿರುವುದು, ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್‌ ವಿರುದ್ಧ ಮುನಿಸಿಕೊಂಡಿರುವುದು ಗೆಲುವಿಗೆ ಸಹಕಾರಿ ಎಂಬುದು ಬಿಜೆಪಿ ನಾಯಕರ ಆಶಯ.

ಕೇರಳ, ಪುದುಚೇರಿ, ಅಸ್ಸಾಂನಲ್ಲೂ ಇಂದು ಪ್ರಚಾರ ಕಾರ್ಯ ಅಂತ್ಯ

ನವದೆಹಲಿ: ಏ.9 ರಂದು ಚುನಾವಣೆ ಎದುರಿಸಲಿರುವ ನೆರೆ ರಾಜ್ಯ ಕೇರಳ, ಅಸ್ಸಾಂ, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಮಂಗಳವಾರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಘಟಾನುಘಟಿ ನಾಯಕರು ಕೊನೆಯ ದಿನ ಮತದಾರರ ಮನ ಗೆಲ್ಲಲು ಬಿರುಸಿನ ಪ್ರಚಾರ ನಡೆಸುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದು ಬಿಟ್ಟು ಉಳಿದವರ ಮಾತು ನಗಣ್ಯ: ಡಿ.ಕೆ.ಶಿವಕುಮಾರ್
ಕಾಂಗ್ರೆಸ್ಸಿಗೆ ಚುನಾವಣೆ ಖಚಿತ, ಸೋಲು ನಿಶ್ಚಿತ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ