20 ಸ್ಥಾನ, 60 ಆಕಾಂಕ್ಷಿಗಳು ; ದೆಹಲಿ ತಲುಪಿದ ಸಂಪುಟ ಕಸರತ್ತು! ಸಿದ್ದು-ಡಿಕೆಶಿ ಪಟ್ಟಿಯಲ್ಲಿ ಯಾರಿಗೆ ಚಾನ್ಸ್?

Published : Jul 26, 2026, 12:49 PM IST
dk shivakumar and siddaramaiah

ಸಾರಾಂಶ

ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಂತೆ ಕಾಣ್ತಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಲೆದಂಡ ಆಗ್ತಿದ್ದಂತೆ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದತ್ತ ಚಿತ್ತ ಹರಿಸಿದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಬುಧವಾರವೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಂಡದ ಬಲ ಹೆಚ್ಚಾಗಲಿದೆ.

ಬೆಂಗಳೂರು/ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ತಿಂಗಳುಗಳಿಂದ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಯ ಸರ್ಕಸ್ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು ಹಾಗೂ ನೀಟ್ (NEET) ಪ್ರತಿಭಟನೆಗಳ ಕಾವು ತಣಿದಿರುವ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದತ್ತ ಗಮನ ಹರಿಸಿದೆ. ಮಂಗಳವಾರ ಸಂಜೆ 6 ಗಂಟೆಗೆ ದೆಹಲಿಯಲ್ಲಿ ನಡೆಯಲಿರುವ ಹೈಕಮಾಂಡ್ ಸಭೆಯು ಸಚಿವರಾಗಲಿರುವ ಅಂತಿಮ ಪಟ್ಟಿಯನ್ನು ನಿರ್ಧರಿಸಲಿದೆ.

20 ಸ್ಥಾನಕ್ಕೆ 60ಕ್ಕೂ ಹೆಚ್ಚು ಫೈಟ್

ಸಂಪುಟದಲ್ಲಿ ಸದ್ಯ 20 ಸ್ಥಾನಗಳು ಖಾಲಿ ಇವೆ. ಆದರೆ ಈ ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರು ಗಂಭೀರ ಆಕಾಂಕ್ಷಿಗಳಾಗಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ತಮ್ಮ ಆಪ್ತ ಶಾಸಕರನ್ನು ಒಳಗೊಂಡ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಹೈಕಮಾಂಡ್‌ಗೆ ನೀಡಿದ್ದಾರೆ. ಮಂಗಳವಾರ ಇಬ್ಬರೂ ನಾಯಕರು ಹೈಕಮಾಂಡ್ ಸಮ್ಮುಖದಲ್ಲಿ ಈ ಪಟ್ಟಿಯನ್ನು ವಿಶ್ಲೇಷಿಸಲಿದ್ದಾರೆ.

ಸಿದ್ದರಾಮಯ್ಯ ಅವರ ಅನುಭವದ ಆಯ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ಸಂಘಟನಾತ್ಮಕ ಆಯ್ಕೆಯ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ. ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ರಾಹುಲ್ ಗಾಂಧಿ ಅವರ ಫಾರ್ಮುಲಾ ಕೆಲಸ ಮಾಡಲಿದೆ ಎನ್ನಲಾಗುತ್ತಿದೆ. ಹಿರಿಯ ಶಾಸಕರ ಬದಲಿಗೆ ಹೆಚ್ಚು ಯುವಕರಿಗೆ ಮತ್ತು ಹೊಸ ಮುಖಗಳಿಗೆ ಆದ್ಯತೆ ನೀಡಬೇಕೆಂಬುದು ರಾಹುಲ್ ಗಾಂಧಿ ಅವರ ಒತ್ತಾಯ. ಇದರೊಂದಿಗೆ ಕನಿಷ್ಠ ಇಬ್ಬರು ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ. ಇದು ಹಿರಿಯ ಶಾಸಕರಲ್ಲಿ ಅಸಮಾಧಾನ ಮೂಡಿಸುತ್ತದೆಯೇ ಎಂಬ ಚರ್ಚೆ ಈಗ ಶುರುವಾಗಿದೆ.

ಜಾತಿ ಲೆಕ್ಕಾಚಾರವೇನು?

ಲಿಂಗಾಯತ, ಎಸ್‌ಟಿ (ಪರಿಶಿಷ್ಟ ಪಂಗಡ) ಮತ್ತು ಹಿಂದುಳಿದ ವರ್ಗಗಳನ್ನು ಸಮಾಧಾನಪಡಿಸಲು ಹೆಚ್ಚುವರಿ ಉಪ ಮುಖ್ಯಮಂತ್ರಿ (DCM) ಹುದ್ದೆಗಳನ್ನು ಸೃಷ್ಟಿಸುವ ಪ್ರಸ್ತಾವನೆಯೂ ಚರ್ಚೆಯಲ್ಲಿದೆ. ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರು ಡಿಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ವಿಶೇಷವಾಗಿ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಹೆಚ್ಚು ಕೇಳಿಬರುತ್ತಿದ್ದು, ಅವರು ಕೂಡ ಸೋಮವಾರ ದೆಹಲಿಯಲ್ಲಿ ಬೀಡುಬಿಡಲಿದ್ದಾರೆ.

ಸಂಪುಟ ವಿಸ್ತರಣೆಯ ನಡುವೆಯೇ ಮುಖ್ಯಮಂತ್ರಿ ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ ಸಂಸದರ ಸಭೆ ಕರೆದಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ. ಮಹದಾಯಿ, ಕಳಸಾ-ಬಂಡೂರಿ ಸೇರಿದಂತೆ ರಾಜ್ಯದ ಬಾಕಿ ಇರುವ ಯೋಜನೆಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದ್ದರೂ, ಇದು ಸಂಪುಟ ವಿಸ್ತರಣೆಯ ಲಾಬಿಯನ್ನು ಮರೆಮಾಚುವ ಅಥವಾ ಮ್ಯಾನೇಜ್ ಮಾಡುವ ತಂತ್ರವೇ ಎಂಬ ಪ್ರಶ್ನೆ ಮೂಡಿದೆ. 

ಒಟ್ಟಾರೆ, ಬುಧವಾರದಂದು ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಆದರೆ, 'ಕೈ' ನಾಯಕರ ನಡುವಿನ ಪೈಪೋಟಿ ಮತ್ತು ಹೈಕಮಾಂಡ್‌ನ ಅಂತಿಮ ನಿರ್ಧಾರ ಯಾರ ಪರವಾಗಿರಲಿದೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ. ಆಗಸ್ಟ್ ಮೊದಲ ವಾರದಲ್ಲಿ ಅಧಿವೇಶನ ಇರುವುದರಿಂದ, ಅತೃಪ್ತಿ ಮೂಡದಂತೆ ಸಮಾಧಾನಪಡಿಸುವುದು ಕಾಂಗ್ರೆಸ್ ಪಾಲಿಗೆ ಅಗ್ನಿಪರೀಕ್ಷೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ.. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ ಸಾಂಸ್ಕೃತಿಕ ನಗರಿ..!
Siddaramaiah: 2028ರ ಚುನಾವಣೆಗೆ ಸಿದ್ದರಾಮಯ್ಯ ಸ್ಪರ್ಧಿಸುತ್ತಾರಾ, ಇಲ್ಲವಾ? ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಿಎಂ