5 ಸಚಿವ ಸ್ಥಾನ ಭರ್ತಿಗೆ ಯಡಿಯೂರಪ್ಪ ಸಿದ್ಧತೆ

Kannadaprabha News   | Asianet News
Published : Dec 04, 2020, 07:56 AM ISTUpdated : Dec 04, 2020, 10:45 AM IST
5 ಸಚಿವ ಸ್ಥಾನ ಭರ್ತಿಗೆ ಯಡಿಯೂರಪ್ಪ ಸಿದ್ಧತೆ

ಸಾರಾಂಶ

ರಾಜ್ಯದಲ್ಲಿ ಅನೇಕ ದಿನಗಳಿಂದ ಚರ್ಚೆಯಲ್ಲಿರುವ ಸಂಪುಟ ವಿಸ್ತರನೆ ಇದೀಗ ಜೋರಾಗಿದೆ. ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆಯಾಗಲಿದೆ

ಬೆಂಗಳೂರು (ಡಿ.04):  ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವುದರೊಳಗಾಗಿ ಸಂಪುಟ ವಿಸ್ತರಣೆ ಮಾಡಬೇಕು ಎಂಬ ಧಾವಂತದಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ಸಂಬಂಧ ಬಿಜೆಪಿ ಹೈಕಮಾಂಡ್‌ಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

"

ವರಿಷ್ಠರು ಅನುಮತಿ ನೀಡಿದಲ್ಲಿ ಭಾನುವಾರವೇ ಸಂಪುಟ ವಿಸ್ತರಣೆ ಕೈಗೊಳ್ಳಲು ಮುಖ್ಯಮಂತ್ರಿಗಳು ಸಜ್ಜಾಗಿದ್ದಾರೆ. ಖಾಲಿ ಇರುವ ಏಳು ಸ್ಥಾನಗಳ ಪೈಕಿ ಕನಿಷ್ಠ ಮೂರರಿಂದ ಐದು ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಅಧಿವೇಶನ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆ ಹಿನ್ನೆಲೆಯಲ್ಲಿ ಈ ಹಂತದಲ್ಲಿ ವರಿಷ್ಠರು ಸಂಪುಟ ವಿಸ್ತರಣೆಗೆ ಅನುಮತಿ ನೀಡುವ ಮೂಲಕ ಗೊಂದಲಕ್ಕೆ ಅವಕಾಶ ಮಾಡಿಕೊಡುವ ಸಾಧ್ಯತೆ ಕಡಮೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಭಾನುವಾರವೇ ಸಂಪುಟ ವಿಸ್ತರಣೆ; ಕೊನೆ ತೀರ್ಮಾನಕ್ಕೆ ಬಂದ ಬಿಎಸ್‌ವೈ! ..

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಸಂಜೆ ದೂರವಾಣಿ ಮೂಲಕ ಮಾತನಾಡಿ ಶುಭಾಶಯ ತಿಳಿಸಿದ ಯಡಿಯೂರಪ್ಪ ಅವರು ಸಂಪುಟ ಕಗ್ಗಂಟಿನ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ. ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಅಲ್ಲಿ ಮತ್ತೆ ಸಂಪುಟ ವಿಸ್ತರಣೆ ವಿಳಂಬಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಅಂಶವನ್ನು ಗಮನಕ್ಕೆ ತಂದಿದ್ದಾರೆ.

ಅಲ್ಲದೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದವರಿಗೆ ಹಿಂದೆ ನೀಡಿದ ವಾಗ್ದಾನದಂತೆ ಸಚಿವ ಸ್ಥಾನ ನೀಡಬೇಕಾಗಿದೆ. ಇಲ್ಲದಿದ್ದರೆ ಪಕ್ಷದ ಬಗ್ಗೆ ಕೆಟ್ಟಅಭಿಪ್ರಾಯ ಬರುತ್ತದೆ. ಮಾತಿಗೆ ತಪ್ಪಿದವರು ಎಂಬ ಆಪಾದನೆಯನ್ನು ನಾನೂ ಹೊರಬೇಕಾಗುತ್ತದೆ. ಹೀಗಾಗಿ, ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡುವ ಉದ್ದೇಶ ಹೊಂದಿದ್ದೇನೆ. ಇದಕ್ಕೆ ಅವಕಾಶ ಕೊಡಿ. ನೀವು ಒಪ್ಪಿದಲ್ಲಿ ಭಾನುವಾರವೇ ವಿಸ್ತರಣೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನಡ್ಡಾ ಅವರು ಪರಿಶೀಲಿಸಿ ತಿಳಿಸುವುದಾಗಿ ಹೇಳಿದರು ಎನ್ನಲಾಗಿದೆ.

ಈ ಸಂಬಂಧ ಗುರುವಾರ ರಾತ್ರಿವರೆಗೂ ಹೈಕಮಾಂಡ್‌ನಿಂದ ಯಾವುದೇ ಮಾಹಿತಿ ಬಂದಿರಲಿಲ್ಲ. ಶುಕ್ರವಾರ ಬೆಳಗಾವಿಯಲ್ಲಿ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ನಡೆಯಲಿದೆ. ಅಲ್ಲಿ ಈ ವಿಷಯವನ್ನು ಯಡಿಯೂರಪ್ಪ ಅವರು ರಾಜ್ಯದ ಇತರ ನಾಯಕರ ಗಮನಕ್ಕೆ ತರಲಿದ್ದಾರೆ. ಇತರ ನಾಯಕರೂ ವಿಸ್ತರಣೆಗೆ ಸಮ್ಮತಿಸಿ ವರಿಷ್ಠರಿಗೆ ಮನವೊಲಿಸಿದಲ್ಲಿ ಹಸಿರು ನಿಶಾನೆ ಸಿಗಬಹುದು. ಇಲ್ಲದಿದ್ದರೆ ಗ್ರಾಮ ಪಂಚಾಯತ್‌ ಚುನಾವಣೆ ಮುಗಿಯುವವರೆಗೆ ಕಾಯಬೇಕಾಗುತ್ತದೆ. ನಂತರ ಹೊಸ ವರ್ಷದಲ್ಲೇ ಸಂಪುಟ ವಿಸ್ತರಣೆ ಮಾಡಬೇಕಾಗುತ್ತದೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?