
ನವದೆಹಲಿ(ಮೇ.16): ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿ ಇದೀಗ ಸರ್ಕಾರ ರಚಿಸುವ ಕಸರತ್ತು ನಡೆಸುತ್ತಿದೆ. ಆದರೆ ಸರ್ಕಾರ ರಚನೆಗಿಂತ ಸಿಎಂ ಯಾರು ಅನ್ನೋ ಗೊಂದಲವೇ ಹೆಚ್ಚಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲೂ ಇದಕ್ಕೆ ಉತ್ತರ ಸಿಗಲಿಲ್ಲ. ಇಂದು ಸಿಎಂ ಅಕಾಂಕ್ಷಿಗಳಾಗಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿ ಕಾಂಗ್ರೆಸ್ ಹೈಕಮಾಂಡ್ ಮೀಟಿಂಗ್ ಮಾಡುತ್ತಿದೆ. ಒನ್ ಟು ಒನ್ ಮೀಟಿಂಗ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲು ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿದ್ದಾರೆ. ಸಭೆ ಮುಗಿಸಿ ಹೊರಬಂದ ಡಿಕೆ ಶಿವಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದೆ ತೆರಳಿದ್ದಾರೆ.
ಡಿಕೆ ಶಿವಕುಮಾರ್ ಬೇಡಿಕೆಯನ್ನು ಹೈಕಮಾಂಡ್ ಒಪ್ಪಿದ ರೀತಿ ಕಾಣುತ್ತಿಲ್ಲ. ಡಿಕೆಯನ್ನು ಸಮಾಧಾನಿಸುವ ಇತರ ಖಾತೆ ನೀಡಿ ಸಂತೈಸುವ ಪ್ರಯತ್ನವೂ ಕೈಗೂಡಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಭೆ ಮುಗಿಸಿ ಹೊರಬಂದ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಕಾರು ಹತ್ತಿ ತೆರಳಿದ್ದಾರೆ. ತಾನು ಮೂಲ ಕಾಂಗ್ರೆಸ್ಸಿಗ. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಸೋತು ಸುಣ್ಣವಾಗಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಮಾತು ಕೊಟ್ಟಂತೆ ನಡೆದಿದ್ದೇನೆ. ಹೊರಗಿನಿಂದ ಬಂದವರು ಅಧಿಕಾರ ಅನುಭವಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗನಾಗಿರುವ ನನಗೆ ಸಿಎಂ ಸ್ಥಾನ ನೀಡಲೇಬೇಕು ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆ ಪಟ್ಟು ಹಿಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.
ಡಿಕೆ ಶಿವಕುಮಾರ್ ಜೊತೆ ಸುಮಾರು 50 ನಿಮಿಷಗಳ ಕಾಲ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಿದ್ದಾರೆ. ಖರ್ಗೆ ನಿವಾಸದಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದರೆ, ಇತ್ತ ಹೈಕಮಾಂಡ್ ಮೇಲೆ ಒತ್ತಡ ಹೇರುವ ಕೆಲಸಗಳು ನಡೆದಿದೆ.ಖರ್ಗೆ ನಿವಾಸದ ಬಳಿ ಯೂಥ್ ಕಾಂಗ್ರೆಸ್ ಸದಸ್ಯರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಸಿಎಂ ಹುದ್ದೆಯನ್ನು ಡಿಕೆ ಶಿವಕುಮಾರ್ಗೆ ನೀಡಬೇಕು ಎಂದು ಯೂಥ್ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಸಿಎಂ ಆಗಿ ಕೆಲಸ ಮಾಡಿದ್ದಾರೆ. ಸಿದ್ದು ಹುದ್ದೆಯನ್ನು ಅನುಭವಿಸಿದ್ದಾರೆ. ಮತ್ತೆ ಸಿದ್ದರಾಮಯ್ಯಗೆ ಸಿಎಂ ಹುದ್ದೆ ಬೇಡ. ಪಕ್ಷವನ್ನು ಕಟ್ಟಿ ಬೆಳೆಸಿದ ಡಿಕೆಶಿಗೆ ಸಿಎಂ ಪಟ್ಟ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನಿನ್ನೆ ದೆಹಲಿಗೆ ತೆರಳಬೇಕಿದ್ದ ಡಿಕೆ ಶಿವಕುಮಾರ್ ಆರೋಗ್ಯದ ಕಾರಣ ನೀಡಿ ಪ್ರವಾಸ ರದ್ದು ಮಾಡಿದ್ದರು. ಇಂದು ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಹೈಕಮಾಂಡ್ ಜೊತೆಗಿನ ಸಭೆಗಾಗಿ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದರು. ಸಭೆಯಲ್ಲಿ ಡಿಕೆ ಶಿವಕುಮಾರ್ ತಮ್ಮ ವಾದ ಮುಂದಿಟ್ಟಿದ್ದಾರೆ. ಡಿಕೆ ಶಿವಕುಮಾರ್ ಬಳಿಕ ಇದೀಗ ಸಿದ್ದರಾಮಯ್ಯ ಜೊತೆ ಖರ್ಗೆ ಸಭೆ ನಡೆಸಲಿದ್ದಾರೆ.
Karnataka Govt Formation: ಮೇ.18 ಕ್ಕೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮ
ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಸಜ್ಜಾಗಿದೆ. ಆದರೆ ಮುಖ್ಯಮಂತ್ರಿ ಆಯ್ಕೆ ಮಾತ್ರ ತೀವ್ರ ಕಗ್ಗಂಟಾಗುತ್ತಿದೆ. ಡಿಕೆ ಶಿವಕುಮಾರ್ಗೂ ಮೊದಲೇ ದೆಹಲಿ ಸೇರಿಕೊಂಡ ಸಿದ್ದರಾಮಯ್ಯ ಆಪ್ತರ ಜೊತೆ ಹಲವು ಸುತ್ತಿನ ಸಭೆ ನಡೆಸಿದ್ದಾರೆ. ಇತ್ತ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರವನ್ನು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.