
ಬೆಂಗಳೂರು[ಡಿ.12]: ಸದ್ಯಕ್ಕೆ ಅಲ್ಲದಿದ್ದರೂ ನಿಕಟ ಭವಿಷ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರು ಬದಲಾಗುವ ಸಾಧ್ಯತೆ ಹೆಚ್ಚಿದೆ. ಇದನ್ನು ಮನಗಂಡಿರುವ ಪ್ರಭಾವಿ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಈ ಹುದ್ದೆ ಗಿಟ್ಟಿಸಲು ಪ್ರಬಲ ಲಾಬಿ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ್ದರೂ ಹೈಕಮಾಂಡ್ ಅವರಿಬ್ಬರಿಗೂ ಹುದ್ದೆಯಲ್ಲಿ ಮುಂದುವರೆಯುವಂತೆ ಸೂಚನೆ ನೀಡಿದೆ ಎನ್ನಲಾಗಿದೆ. ಈ ನಾಯಕರ ಪೈಕಿ ಸಿದ್ದರಾಮಯ್ಯ ಅವರ ಹುದ್ದೆಗೆ ಚ್ಯುತಿ ಬರುವ ಸಾಧ್ಯತೆಯಿಲ್ಲ. ಆದರೆ, ಸದ್ಯಕ್ಕೆ ಅಲ್ಲದಿದ್ದರೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ಹುದ್ದೆಯ ಮೇಲೆ ಡಿ.ಕೆ.ಶಿವಕುಮಾರ್ (ಒಕ್ಕಲಿಗ), ಎಂ.ಬಿ. ಪಾಟೀಲ್ (ಲಿಂಗಾಯತ) ಹಾಗೂ ಕೆ.ಎಚ್. ಮುನಿಯಪ್ಪ (ಪರಿಶಿಷ್ಟ) ಅವರು ಕಣ್ಣಿಟ್ಟಿದ್ದಾರೆ. ಈ ಪೈಕಿ ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆದಿದೆ ಎನ್ನಲಾಗುತ್ತಿದೆ.
ಐಟಿ ಪ್ರಕರಣದ ಹಿನ್ನೆಲೆಯಲ್ಲಿ ಗುರುವಾರ ದೆಹಲಿಗೆ ತೆರಳಲಿರುವ ಡಿ.ಕೆ.ಶಿವಕುಮಾರ್ ಅವರು ಸಂಜೆ ಹೈಕಮಾಂಡ್ನ ಪ್ರಮುಖರನ್ನು ಭೇಟಿ ಮಾಡಿ ಈ ಹುದ್ದೆಯ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಎಂ.ಬಿ.ಪಾಟೀಲ್ ಅವರು ಹೈಕಮಾಂಡ್ನಲ್ಲಿರುವ ತಮ್ಮ ಸಂಪರ್ಕಗಳ ಮೂಲಕ ಹುದ್ದೆ ಗಿಟ್ಟಿಸಲು ತೀವ್ರ ಪ್ರಯತ್ನ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಹೈಕಮಾಂಡ್ ಈ ನಾಯಕರ ಪೈಕಿ ಯಾರಿಗೆ ಮತ್ತು ಯಾವಾಗ ಮಣೆ ಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.