
ಬೆಂಗಳೂರು(ಮಾ.14): ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಚೆಂಡು ಹೈಕಮಾಂಡ್ ಅಂಗಳಕ್ಕೆ ಬಿದ್ದಿರುವ ಬೆನ್ನಲ್ಲೇ ರಾಜ್ಯ ನಾಯಕರು ಹಾಗೂ ಆಕಾಂಕ್ಷಿಗಳ ದೊಡ್ಡ ದಂಡು ದೆಹಲಿಯತ್ತ ಮುಖ ಮಾಡಿದೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಸಿಡಬ್ಲ್ಯುಸಿ ಸದಸ್ಯ ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಈಗಾಗಲೇ ದೆಹಲಿ ಸೇರಿಕೊಂಡಿದ್ದಾರೆ. ಅಲ್ಲದೆ, ಧರ್ಮಸಿಂಗ್ ಪುತ್ರರಾದ ವಿಜಯ್ಸಿಂಗ್, ಅಜಯ್ಸಿಂಗ್ (ಸಹೋದರನ ಪರ), ಶಿವಮೊಗ್ಗದ ಸುಂದರೇಶ್ ಸೇರಿದಂತೆ 50ಕ್ಕೂ ಹೆಚ್ಚು ಆಕಾಂಕ್ಷಿಗಳು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
Karnataka election 2023: ಮಾ.17ಕ್ಕೆ ಕಾಂಗ್ರೆಸ್ ಮೊದಲ ಪಟ್ಟಿಬಿಡುಗಡೆ: ಸಿದ್ದರಾಮಯ್ಯ
ಟಿಕೆಟ್ ಅಂತಿಮಗೊಳಿಸಲು ಮಾ.17ರಂದು ಎಐಸಿಸಿ ಚುನಾವಣಾ ಸಮಿತಿ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಹೀಗೆ ದೆಹಲಿಯತ್ತ ಕಾಂಗ್ರೆಸ್ ನಾಯಕರ ದಂಡು ಮುಖಮಾಡಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾ.16ರ ಸಂಜೆ ದೆಹಲಿಗೆ ತೆರಳಿದರೆ, ಮಾ.17ರಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ, ಕಾರ್ಯಾಧ್ಯಕ್ಷರು ಸೇರಿದಂತೆ ಹಲವು ನಾಯಕರು ಹಾಗೂ 100ಕ್ಕೂ ಹೆಚ್ಚು ಆಕಾಂಕ್ಷಿಗಳು ದೆಹಲಿಗೆ ದೌಡಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಮೂರು ತಿಂಗಳಿಂದ ಕಾಂಗ್ರೆಸ್ನ ಸಂಭಾವ್ಯರ ಪಟ್ಟಿ ಅಂತಿಮಗೊಳಿಸಲು ರಾಜ್ಯ ಮಟ್ಟದಲ್ಲಿ ಹಲವು ಸುತ್ತಿನ ಸಭೆ ನಡೆದಿದ್ದವು. ಕೆಪಿಸಿಸಿ ಚುನಾವಣಾ ಸಮಿತಿ ಸಭೆ, ಸ್ಕ್ರೀನಿಂಗ್ ಸಮಿತಿ ಸಭೆ ಸೇರಿದಂತೆ ವಿವಿಧ ಹಂತದ ಸಭೆಗಳ ಬಳಿಕ ಸಂಭಾವ್ಯರ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಲಾಗಿದ್ದು, ಮಾ.17ರಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಿಇಸಿ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಯಕರ ದೆಹಲಿ ದಂಡಯಾತ್ರೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.