
ಬೆಂಗಳೂರು (ಮಾ.06): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು ಹಾಗೂ ವೈದ್ಯಾಧಿಕಾರಿಗಳು ಮಾ.11ರಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಮುಷ್ಕರದಿಂದ ಜನರಿಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ವೈದ್ಯರು ಮುಷ್ಕರ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಿ ವೈದ್ಯರು ಮುಷ್ಕರ ಮಾಡುವುದು ಸರಿಯಲ್ಲ. ಈಗಾಗಲೇ ಎರಡು ಬಾರಿ ಅವರ ಜೊತೆ ನಾವು ಸಭೆ ನಡೆಸಿದ್ದೇವೆ. ಸಿಎಂ ಬಜೆಟ್ ಹಿನ್ನೆಲೆ ಬ್ಯುಸಿಯಾಗಿದ್ದು, ಬಜೆಟ್ ಮುಗಿದ ಬಳಿಕ ಮತ್ತೊಮ್ಮೆ ಚರ್ಚೆ ನಡೆಸುತ್ತೇವೆ ಎಂದು ಭರವಸೆ ನೀಡಿದರು.
ವೈದ್ಯರ ಮುಷ್ಕರದಿಂದ ಜನಸಾಮಾನ್ಯರಿಗೆ ರೋಗಿಗಳಿಗೆ ತೊಂದರೆ ಆಗಲಿದೆ. ಇದನ್ನು ಅವರಿಗೂ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು. ಸರ್ಕಾರಿ ಖರ್ಚಿನಲ್ಲೇ ಉನ್ನತ ವ್ಯಾಸಾಂಗದ ಬಗ್ಗೆ ಬೇಡಿಕೆ ಇಟ್ಟಿದ್ದಾರೆ. ಔಷಧಿ ಖರೀದಿ ಮಾಡಲ್ಲ ಎಂಬುದು ಒಳ್ಳೆಯ ಬೆಳೆವಣಿಗೆ ಅಲ್ಲ. ವೈದ್ಯರು ಇರುವುದೇ ರೋಗಿಗಳ ಆರೋಗ್ಯಕ್ಕೆ ಸ್ಪಂದಿಸಲು. ಆದರೆ ಔಷಧಿ ಖರೀದಿ ಮಾಡುವುದಿಲ್ಲ ಎಂಬುದು ಸರಿಯಲ್ಲ. ಎಲ್ಲದರ ಬಗ್ಗೆಯೂ ಮತ್ತೊಮ್ಮೆ ಸಭೆ ನಡೆಸಿ ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಸಂಧಾನಕ್ಕೆ ಬಗ್ಗದೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದು ಮಾ.11ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಮುಂದಾಗಿರುವ ರಾಜ್ಯ ಸರ್ಕಾರಿ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ವಿರುದ್ಧ ಎಸ್ಮಾ ಪ್ರಯೋಗದ ಬದಲು, ಮತ್ತೊಂದು ಸುತ್ತಿನ ಮನವೊಲಿಕೆ ಪ್ರಯತ್ನ ನಡೆಸಲು ನಡೆದ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವೈದ್ಯರ ಸಂಘ ಮತ್ತು ಎರಡೂ ಇಲಾಖಾ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಶೀಘ್ರ ಮತ್ತೊಂದು ಸುತ್ತಿನ ಸಭೆ ಕರೆದು ಮಾತನಾಡಲು, ವಸ್ತುಸ್ಥಿತಿ ವಿವರಿಸಿ ಮುಷ್ಕರ ನಡೆಸದಂತೆ ಮನವೊಲಿಸುವ ಪ್ರಯತ್ನ ಮಾಡಲು ಸಂಪುಟ ಅನುಮತಿ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಕಾಯಂ, ಗುತ್ತಿಗೆ ಆಥವಾ ತಾತ್ಕಾಲಿಕ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ಅಧಿಕಾರಿಗಳ ಸೇವೆಯನ್ನು ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ 2013ರಡಿ(ಎಸ್ಮಾ) ಅಧಿಸೂಚಿಸುವ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಆದರೆ, ಅಧಿಸೂಚಿಸುವ ಬದಲು ವೈದ್ಯರು ಮತ್ತು ವೈದ್ಯ ಸಿಬ್ಬಂದಿ, ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಆರೋಗ್ಯ ಸಚಿವರು ಮತ್ತೊಂದು ಸುತ್ತಿನ ಸಭೆ ನಡೆಸಿ ಮುಷ್ಕರ ನಡೆಸದಂತೆ ಮನವೊಲಿಸುವ ಪ್ರಯತ್ನ ನಡೆಸಬೇಕೆಂದು ಸಭೆ ತೀರ್ಮಾನಿಸಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.