
ಶಿವಮೊಗ್ಗ (ಏ.29): ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಹೀರೋ ಎಂದುಕೊಂಡಿದ್ದೆ. ಆದರೆ, ವಿಶ್ವ ನಾಯಕ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡುವ ಮೂಲಕ ಜನರಿಗೆ ವಿಲನ್ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜಕೀಯದಲ್ಲಿ ಒಂದು ತೂಕ ಇತ್ತು. ಅಂಥ ನಾಯಕರು ಮೋದಿ ಬಗ್ಗೆ ಇಷ್ಟುಕೀಳುಮಟ್ಟದಲ್ಲಿ ಮಾತನಾಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಪ್ರಧಾನಿ ಮೋದಿ ಅವರನ್ನು ಟೀಕಿಸಿದವರು ಯಾರು ಉದ್ಧಾರ ಆಗಿಲ್ಲ, ಪಕ್ಷವೂ ಉದ್ಧಾರ ಆಗಲ್ಲ ಎಂದು ಕಿಡಿಕಾರಿದರು.
ಜನರ ಮನಸ್ಸನ್ನು ಗೆಲ್ಲುವುದು ಬಿಟ್ಟು ಕಾಂಗ್ರೆಸ್ ಸೋಲಿನ ಭೀತಿಯಿಂದ ಗೂಂಡಾಗಿರಿ ಮಾಡುತ್ತಿದೆ. ಅದನ್ನು ನಿಲ್ಲಿಸದಿದ್ದರೆ ಬಿಜೆಪಿ ತಕ್ಕ ಉತ್ತರ ನೀಡುತ್ತದೆ. ಪಕ್ಷದ ನಾಯಕರು ಕೆಟ್ಟಭಾಷೆಗಳನ್ನು ಬಳಸಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದನ್ನು ನಿಲ್ಲಿಸಬೇಕು. ನಿನ್ನೆ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಅವರನ್ನು ವಿಷದ ಹಾವು ಎಂದಿರುವುದು ಅವರಿಗೆ ಶೋಭೆ ತರುವುದಿಲ್ಲ. ಅವರಿಂದ ಇಂತಹ ಮಾತುಗಳನ್ನು ನಿರೀಕ್ಷಿಸಿರಲಿಲ್ಲ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಯಾರಾದರೂ ಒಂದು ಲಕ್ಷ ಮತಗಳಿಂದ ಗೆಲ್ಲಲು ಸಾಧ್ಯವೇ?: ಸಿದ್ದು ವಿರುದ್ಧ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ
ಹುಬ್ಬಳ್ಳಿ ಪಾಕಿಸ್ತಾನವೇ?: ಬಿಜೆಪಿಯವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಭ್ರಮೆಯಲ್ಲಿ ಶೆಟ್ಟರ್ ಇದ್ದಾರೆ. ರಾಜ್ಯದ ಎಲ್ಲ ಭಾಗದಲ್ಲೂ ಪಕ್ಷದ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ಅದರಂತೆ ಹುಬ್ಬಳ್ಳಿಯಲ್ಲೂ ಮಾಡುತ್ತಿದ್ದಾರೆ. ಅಲ್ಲಿ ಪ್ರಚಾರ ಮಾಡಬಾರದು ಎಂದರೆ ಹೇಗೆ? ಹುಬ್ಬಳ್ಳಿ ಏನೂ ಪಾಕಿಸ್ತಾನವೇ? ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಎಲ್ಲ ಹುದ್ದೆಗಳನ್ನು ನೀಡಿತ್ತು. ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಬಿಜೆಪಿ. ಹೆತ್ತ ತಾಯಿಗೆ ದ್ರೋಹ ಬಗೆದು ಹೋಗಿದ್ದಾರೆ. ಅವರಿಗೆ ನಾನು ಪ್ರೀತಿಯಿಂದ ಮಾತನಾಡಿ ಬಾ ಎಂದು ಕರೆದೆ ಆದರೆ, ಅವರು ಇಲ್ಲ ನಾನು ಅಲ್ಲೇ ಹೋಗಿ ಸಾಯಿತೀನಿ ಎಂದು ಹೋಗಿದ್ದಾರೆ. ಅವರನ್ನು ಸೋಲಿಸುವುದೇ ಪಕ್ಷದ ಗುರಿಯಾಗಿದೆ ಎಂದು ಖಾರವಾಗಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಜಗದೀಶ್, ಸಂತೋಷ್ ಬಳ್ಳೆಕೆರೆ, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ಮಂಜುನಾಥ್ ಇದ್ದರು.
ಜೆಡಿಎಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖ: ಚಲುವರಾಯಸ್ವಾಮಿ
ಮೇ 3ಕ್ಕೆ ಅಮಿತ್ ಶಾ ರೋಡ್ ಶೋ: ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ನಡೆದ ವಿವಿಧ ಸಮುದಾಯಗಳ ಸಭೆಯಲ್ಲಿ ಭಾಗವಹಿಸಿದ್ದಾರೆ, ನಿರೀಕ್ಷೆಗೂ ಮೀರಿ ಜನರು ಸೇರಿದ್ದರು. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರು 60 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು. ಏ.30ರಂದು ಬೆಳಗ್ಗೆ 10.30ಕ್ಕೆ ಪೇಸ್ ಕಾಲೇಜಿನ ಹಿಂಭಾಗದಲ್ಲಿರುವ ಜಯಲಕ್ಷ್ಮೇ ಕನ್ವೆನ್ಷನ್ ಹಾಲ್ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ಜೀ ಅವರು ವಿವಿಧ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 3ರಂದು ಸಂಜೆ 5 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅದೇ ರೀತಿ ಮೇ 7ರಂದು ಆಯನೂರಿನಲ್ಲಿ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.