
ಬೆಂಗಳೂರು (ಏ.30): ತನ್ನ ರಾಜಕೀಯ ಜೀವನದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ಪ್ರಧಾನಿ ಮೋದಿ ಅವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದು ವಿಡಿಯೋ ಟ್ವೀಟ್ ಮಾಡಿ ಸವಾಲು ಹಾಕಿದ್ದಾರೆ.
ಪ್ರಧಾನಿ ಮೋದಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್.ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತು ಹಾಕಿದ ಬಿಜೆಪಿ ಪಕ್ಷ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ? ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಮತ ಕೇಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಜಯಪುರದಲ್ಲಿ ವಾಗ್ದಾಳಿ ನಡೆಸಿದ್ದರು.
ಕರ್ನಾಟಕದ ಜನರು "ದಣಿದು ಸೋತ" ಕಾಂಗ್ರೆಸ್ ಅನ್ನು ಆಯ್ಕೆ ಮಾಡುವುದಿಲ್ಲ ಆದರೆ ಉತ್ಸಾಹದಿಂದ ತುಂಬಿರುವ ಬಿಜೆಪಿಯನ್ನು ಆಯ್ಕೆ ಮಾಡುತ್ತಾರೆ ಎಂದಿದ್ದರು. "ಕಾಂಗ್ರೆಸ್ ನಾಯಕರೊಬ್ಬರು ತಮ್ಮ ನಿವೃತ್ತಿಯ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಇದು ಅವರ ಅತಿದೊಡ್ಡ ಮತಗಟ್ಟೆ ಸುಳ್ಳು, 'ಇದು ನನ್ನ ಕೊನೆಯ ಚುನಾವಣೆ. ನನಗೆ ಒಂದು ಅವಕಾಶ ನೀಡಿ ಎನ್ನುತ್ತಿದ್ದಾರೆ. ಇದರಿಂದಲೇ ತಿಳಿಯುತ್ತದೆ ಅವರು ಎಂತಹ ದಯನೀಯ ಸ್ಥಿತಿಯನ್ನು ತಲುಪಿದ್ದಾರೆ ಎಂದು ವಿಜಯಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮೋದಿ ಹೇಳಿದ್ದರು.
ಸತ್ತವರ ಆತ್ಮ ಮೋದಿ ಉತ್ತರಕ್ಕೆ ಕಾಯ್ತಿವೆ: ಸಿದ್ದರಾಮಯ್ಯ
ಇತ್ತೀಚೆಗಷ್ಟೇ ಇದೇ ತಮ್ಮ ಕೊನೆಯ ಚುನಾವಣೆಯಾಗಿದ್ದು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದ 75ರ ಹರೆಯದ ಸಿದ್ದರಾಮಯ್ಯನವರನ್ನು ಗುರಿಯಾಗಿಟ್ಟುಕೊಂಡು ಮಾತನಾಡಿದ ಪ್ರಧಾನಿ, ಕರ್ನಾಟಕದ ಜನರು ದಣಿದ ಮತ್ತು ಸೋಲಿಸಿದ ಕಾಂಗ್ರೆಸ್ ಅನ್ನು ಆಯ್ಕೆ ಮಾಡುವುದಿಲ್ಲ ಆದರೆ ಉತ್ಸಾಹದಿಂದ ಉಬ್ಬುತ್ತಿರುವ ಬಿಜೆಪಿಯನ್ನು ಆಯ್ಕೆ ಮಾಡುತ್ತಾರೆ ಎಂದು ನನಗೆ ತಿಳಿದಿದೆ ಎಂದು ಹೇಳಿದ್ದರು. ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿಯ ಸರ್ಕಾರ ಎಂಬ ಘೋಷಣೆ ಕರ್ನಾಟಕದ ಮೂಲೆ ಮೂಲೆಯಿಂದಲೂ ಪ್ರತಿಧ್ವನಿಸುತ್ತಿದೆ ಎಂದು ಹೇಳಿದ್ದರು.
ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಜೊತೆಗಿನ ಭಾರತ್ ಜೋಡೋ ಸಮಯದಲ್ಲಿನ ವಿಡಿಯೋ ಟ್ವೀಟ್ ಮಾಡಿ ಸವಾಲು ಹಾಕಿದ್ದಾರೆ.
ಮೋದಿ ಹೇಳಿದ ಹಾಗೆ ಕೇಳುವ ಸರ್ಕಾರ ಇರಬೇಕಾ? ರಾಹುಲ್ ಬಾಬಾ ಹೇಳಿದಂತೆ ಕೇಳುವ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.