
ಬೆಂಗಳೂರು: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕೇವಲ ಎರಡೇ ದಿನಗಳ ಹಿಂದೆ ಖಡಕ್ ಆಗಿ ಹೇಳಿದ್ದ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಇದೀಗ ದಿಢೀರ್ ತಮ್ಮ ನಿಲುವು ಬದಲಿಸಿದ್ದಾರೆ. "ನನ್ನ ಗೌರವಕ್ಕೆ ಯಾವುದೇ ರೀತಿಯಲ್ಲಿ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಈ ತಿಂಗಳ 14ರಂದು ಸದನದಲ್ಲೇ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಅವರು ಅತ್ಯಂತ ಮಾರ್ಮಿಕವಾಗಿ ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಂಪುಟದ ಪ್ರಮುಖ ಸಚಿವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ ಬಳಿಕ, ಹೊರಟ್ಟಿ ಅವರು ಈ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಇದೀಗ ಮತ್ತೊಮ್ಮೆ ಶುಕ್ರವಾರ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, "ನಾವು ಯಾವುದೇ ವಿಶೇಷ ವಿಷಯಗಳ ಬಗ್ಗೆ ಮಾತನಾಡಿಲ್ಲ, ಬೇರೆಯದೇ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ಮೊನ್ನೆ ನಾನು ಏನು ಹೇಳಿದ್ದೇನೋ ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾದರೆ ಮಂಡಿಸಲಿ, ಕಾನೂನು ಪ್ರಕಾರ ಅವರು ಏನು ಬೇಕಾದರೂ ಮಾಡಿಕೊಳ್ಳಲಿ" ಎಂದು ಗರಂ ಆಗಿಯೇ ಪ್ರತಿಕ್ರಿಯಿಸಿದರು.
ಸಿಎಂ ನಿವಾಸದಲ್ಲಿ ನಡೆದ ಮಾತುಕತೆಯ ವೇಳೆ ತೀವ್ರ ಅಸಮಾಧಾನಗೊಂಡಂತೆ ಕಂಡುಬಂದ ಹೊರಟ್ಟಿ, ಕೋಪದಿಂದಲೇ ನಿವಾಸದಿಂದ ಹೊರಬಂದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಖುದ್ದಾಗಿ ಗೇಟ್ವರೆಗೆ ಬಂದು ಹೊರಟ್ಟಿ ಅವರನ್ನು ಬೀಳ್ಕೊಟ್ಟರು. ಆದರೆ, ಹೊರಡುವ ತರಾತುರಿಯಲ್ಲಿ ತಮ್ಮ ಸಿಬ್ಬಂದಿಯನ್ನು "ಏ... ಕಾರು ಎಲ್ಲಿದೆ?" ಎಂದು ಗದರಿದ ಹೊರಟ್ಟಿ, ಹಿಂದೆ ತಿರುಗಿ ಸಿಎಂ ಡಿ.ಕೆ. ಶಿವಕುಮಾರ್ ಅವರತ್ತ ಒಮ್ಮೆಯೂ ನೋಡದೆ, ಮಾಧ್ಯಮಗಳ ಪ್ರಶ್ನೆಗಳಿಗೂ ಉತ್ತರಿಸದೆ ಅಲ್ಲಿಂದ ನಿರ್ಗಮಿಸಿದರು. ಬಸವರಾಜ ಹೊರಟ್ಟಿ ಅವರ ಈ ದಿಢೀರ್ ನಡೆ ಹಾಗೂ ರಾಜೀನಾಮೆ ನಿರ್ಧಾರವು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
‘ನನ್ನ ಕಡೆಯಿಂದ ಯಾವುದೇ ತಪ್ಪು ಇಲ್ಲ. ಅವಿಶ್ವಾಸ ನಿರ್ಣಯ ಮಂಡಿಸಲು ಕಾರಣ ಇಲ್ಲ. ಆದರೆ, ಪ್ರಜಾಪ್ರಭುತ್ವದಲ್ಲಿ ಅವಕಾಶವಿದ್ದು, ಅವರು ಮಂಡಿಸಲಿ. ಈಗ ನಾನು ಏನೂ ಹೇಳಲ್ಲ. ನಿಮ್ಮನ್ನು ಇಳಿಸುವುದು ನಮಗೂ ಇಷ್ಟವಿಲ್ಲ ಎಂದು ಹಲವು ಸಚಿವರು ಹೇಳಿದ್ದಾರೆ. ಕೆಪಿಪಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಹ ಮನವೊಲಿಸಲು ಬಂದಿದ್ದರು. ವೈಯಕ್ತಿಕವಾಗಿ ನಿಮ್ಮನ್ನು ಇಳಿಸುವುದು ನನಗೂ ಇಷ್ಟವಿಲ್ಲ. ಆದರೆ, ಪಕ್ಷದ ಸೂಚನೆ ಮೇರೆಗೆ ಬಂದಿದ್ದೇನೆ ಎಂದು ಹೇಳಿದರು. ಎಲ್ಲರೂ ಹೀಗೆ ಹೇಳುತ್ತಾರೆ. ಹೈಕಮಾಂಡ್ ತೀರ್ಮಾನ ಎನ್ನುತ್ತಾರೆ. ಏನೇ ಇದ್ದರೂ ನನ್ನ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಸದನದಲ್ಲೇ ರಾಜೀನಾಮೆ ಕೊಡುತ್ತೇನೆ’ ಎಂದು ಹೊರಟ್ಟಿ ಬುಧವಾರ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.