
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ತೀವ್ರ ಕುತೂಹಲ ಕೆರಳಿಸಿರುವ ರಾಜಕೀಯ ವಿದ್ಯಮಾನಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 10:30ಕ್ಕೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ದಟ್ಟ ವದಂತಿಗಳು ಹರಿದಾಡುತ್ತಿವೆ. ಈ ಬೆಳವಣಿಗೆಯಿಂದಾಗಿ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ದಿಢೀರ್ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ವಿಶ್ವಾಸಾರ್ಹ ಮೂಲಗಳ ಪ್ರಕಾರ, ನಾಳೆ ಬೆಳಗ್ಗೆ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಪ್ರಮುಖ ಸಚಿವರೊಂದಿಗೆ ಮಹತ್ವದ 'ಬ್ರೇಕ್ಫಾಸ್ಟ್ ಮೀಟಿಂಗ್' (ಉಪಾಹಾರ ಸಭೆ) ನಡೆಸಿ ಅದಾದ ಬಳಿಕ ಅವರು ನೇರವಾಗಿ ಲೋಕಭವನಕ್ಕೆ ತೆರಳಿ ಅಲ್ಲಿಯೇ ತಮ್ಮ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿ ಸಲ್ಲಿಕೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಉಂಟಾಗಿರುವ ಈ ದಿಢೀರ್ ರಾಜಕೀಯ ಸ್ಥಿತ್ಯಂತರವನ್ನು ನಿಭಾಯಿಸಲು ಮತ್ತು ಪರಿಸ್ಥಿತಿಯನ್ನು ತಿಳಿಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಕಾರ್ಯಪ್ರವೃತ್ತವಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ಮಧ್ಯಾಹ್ನವೇ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರಿಗೆ ಬಂದಿಳಿದ ತಕ್ಷಣ, ಅಂದರೆ ಇಂದು ಸಂಜೆ 4 ಗಂಟೆಗೆ ಸುರ್ಜೇವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಹೈಕಮಾಂಡ್ನ ಮುಂದಿನ ಕಾರ್ಯತಂತ್ರಗಳ ಕುರಿತು ಈ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆಯಿದೆ.
ನಾಳೆ ಬೆಳಗ್ಗೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಜ್ಯ ರಾಜಕಾರಣದ ಮುಂದಿನ ದಾರಿಯನ್ನು ನಿರ್ಧರಿಸಲು ಹೈಕಮಾಂಡ್ ಪ್ರತಿನಿಧಿಗಳು ಸಜ್ಜಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಾಳೆ ಜಂಟಿ ಸಭೆ ನಡೆಸಲಿದ್ದಾರೆ.
ಈ ಉಭಯ ನಾಯಕರ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯನ್ನು ಕರೆಯುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಮೂಲಗಳ ಪ್ರಕಾರ, ನಾಳೆಯೇ (ಶಾಸಕಾಂಗ ಪಕ್ಷದ) ತುರ್ತು ಸಭೆ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ಇಂದು ಸಂಜೆ ಸುರ್ಜೇವಾಲ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾದ ಬಳಿಕವೇ ಈ ಶಾಸಕಾಂಗ ಪಕ್ಷದ ಸಭೆಯ ನಿಖರ ಸಮಯ ನಿಗದಿಯಾಗಲಿದೆ.
ಕಾಂಗ್ರೆಸ್ ವರಿಷ್ಠರ ನೇರ ಸಮ್ಮುಖದಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾಗುವ ಸಿಎಂ ಸ್ಥಾನಕ್ಕೆ ನೂತನ ನಾಯಕನನ್ನು ಆಯ್ಕೆ ಮಾಡುವ ಕಸರತ್ತು ಅಧಿಕೃತವಾಗಿ ಆರಂಭವಾಗಲಿದೆ. ಬಹುತೇಕ ಡಿಸಿಎಂ ಡಿಕೆ ಶಿವಕುಮಾರ್ ಅವರಿ ಮುಂದಿನ ಸಿಎಂ ಆಗುವುದು ಪಕ್ಕಾ ಎನ್ನಲಾಗಿದೆ.
ಪ್ರಸ್ತುತ ಪರಿಸ್ಥಿತಿಯಲ್ಲಿ, ಶಾಸಕಾಂಗ ಸಭೆಯ ಅಧಿಕೃತ ಅಜೆಂಡಾ (ಕಾರ್ಯಸೂಚಿ) ಏನೆಂಬುದರ ಕುರಿತು ಶಾಸಕರಿಗೆ ಇನ್ನೂ ಯಾವುದೇ ಅಧಿಕೃತ ಲಿಖಿತ ಮಾಹಿತಿ ತಲುಪಿಲ್ಲ. ಆದರೆ, ನಾಳೆಯೇ ಶಾಸಕಾಂಗ ಸಭೆ ನಡೆಯುವ ಕುರಿತು ಹಲವು ಪ್ರಮುಖ ಶಾಸಕರು ಈಗಾಗಲೇ ಸುಳಿವು ನೀಡಿದ್ದಾರೆ. ವರಿಷ್ಠರ ಪ್ರತಿನಿಧಿಗಳ ಸಮ್ಮುಖದಲ್ಲಿ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆಯೇ ಅಥವಾ ಮತ್ತೊಂದು ಸುತ್ತಿನ ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಮುಂಬರುವ ಕೆಲವು ಗಂಟೆಗಳು ಕರ್ನಾಟಕ ರಾಜಕಾರಣದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.