
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪ್ರತಿದಿನವೂ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ನಾಯಕರ ಪ್ರತಿಯೊಂದು ಭೇಟಿ ಹಾಗೂ ಮಾತುಕತೆಗೂ ವಿಶೇಷ ಅರ್ಥ ಹುಡುಕಲಾಗುತ್ತಿದೆ. ಇಂತಹ ರಾಜಕೀಯ ವಾತಾವರಣದ ನಡುವೆಯೇ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ದಿಗ್ಗಜ ನಾಯಕರ ಭೇಟಿಯೊಂದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಇದು ಜೆಡಿಎಸ್ ಸುಪ್ರೀಂ ಲೀಡರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ನ ಹಿರಿಯ ದಲಿತ ನಾಯಕ, ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಡುವಿನ ಭೇಟಿಯಾಗಿದೆ. ಈ ಭೇಟಿ ರಾಜಕೀಯ ವಲಯದಲ್ಲಿ ಹಲವು ಅನುಮಾನಗಳು ಹಾಗೂ ತೀವ್ರ ಕುತೂಹಲ ಮೂಡಿಸಿದೆ.
ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆ ವೇಳೆಗೆ, ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ಎಂಡ್ ಹೋಟೆಲ್ನಲ್ಲಿ ಈ ಇಬ್ಬರು ನಾಯಕರ ಭೇಟಿಯಾಗಿದೆ. ಭೇಟಿಯ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಸುಮಾರು 15 ರಿಂದ 20 ನಿಮಿಷಗಳ ಕಾಲ ಇಬ್ಬರೂ ನಾಯಕರು ಸೀಕ್ರಟ್ ಆಗಿ ಮಾತುಕತೆಯಲ್ಲಿ ತೊಡಗಿದ್ದರು. ಈ ಚರ್ಚೆ ಏನೆಲ್ಲ ವಿಷಯಗಳನ್ನು ಒಳಗೊಂಡಿತ್ತು ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಿಲ್ಲದಿದ್ದರೂ, ರಾಜಕೀಯ ವಲಯದಲ್ಲಿ ಮಾತ್ರ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ವಿಶೇಷವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತ ಚರ್ಚೆ ತೀವ್ರವಾಗಿರುವ ಸಂದರ್ಭದಲ್ಲೇ ಈ ಭೇಟಿ ನಡೆದಿರುವುದು, ಅದರ ಮಹತ್ವವನ್ನು ಇನ್ನಷ್ಟು ಹೆಚ್ಚಿಸಿದೆ. ಸಚಿವ ಸ್ಥಾನ, ಪ್ರಭಾವಿ ಖಾತೆಗಳ ಹಂಚಿಕೆ, ಒಳಜಗಳ ಮತ್ತು ಅಸಮಾಧಾನಗಳ ನಡುವೆ ಈ ಭೇಟಿಗೆ ರಾಜಕೀಯ ಅರ್ಥಕಲ್ಪನೆಗಳು ಜೋರಾಗಿವೆ.
ಮಾಹಿತಿಯ ಪ್ರಕಾರ, ಈ ಭೇಟಿಯ ವೇಳೆ ಕೆಲವು ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ವಿಶೇಷವಾಗಿ ಕೇಂದ್ರ ಕೈಗಾರಿಕಾ ಇಲಾಖೆಗೆ ಸಂಬಂಧಿಸಿದ ಕೆಲವು ಯೋಜನೆಗಳಿಗೆ ಸಂಬಂಧಿಸಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಂದ ಸಹಕಾರ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಅಂಶವನ್ನು ಬಿಟ್ಟರೆ, ರಾಜಕೀಯ ಮಟ್ಟದಲ್ಲಿ ಇನ್ನೇನಾದರೂ ಚರ್ಚೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ.
ಆದರೆ, ಕಾಂಗ್ರೆಸ್ ಸರ್ಕಾರದ ಒಳರಾಜಕೀಯ ಗೊಂದಲದ ನಡುವೆಯೇ, ಜೆಡಿಎಸ್ ನಾಯಕನೊಂದಿಗೆ ಗೃಹ ಸಚಿವರ ಈ ಭೇಟಿ ನಡೆದಿರುವುದು ಹಲವು ರಾಜಕೀಯ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಕೇವಲ ಆಡಳಿತಾತ್ಮಕ ಸಹಕಾರದ ಚರ್ಚೆಯೇ, ಅಥವಾ ಮುಂದಿನ ದಿನಗಳ ರಾಜಕೀಯ ತಂತ್ರದ ಭಾಗವೇ ಎಂಬ ಪ್ರಶ್ನೆಗಳು ಈಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಒಟ್ಟಾರೆ, ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ತಿರುವು ಕಾಣಿಸುತ್ತಿರುವ ಈ ಸಂದರ್ಭದಲ್ಲಿ, ಕುಮಾರಸ್ವಾಮಿ–ಪರಮೇಶ್ವರ್ ಭೇಟಿ ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ಯಾವ ದಿಕ್ಕು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.